Showing posts with label ಟಿಪ್ಪಣಿ. Show all posts
Showing posts with label ಟಿಪ್ಪಣಿ. Show all posts

Friday, September 01, 2006

ನಾನು ಓದಿದ ಪುಸ್ತಕ (೨)

ದಾಟು: ಜಾತಿ ಸಮಸ್ಯೆಯ ಒಳನೋಟ

ತಿರುಮಲಾಪುರದ ದೇವಸ್ಥಾನದ ಅರ್ಚಕ ವೆಂಕಟರಮಣಯ್ಯನವರ ಮಗಳು ಸತ್ಯಭಾಮಳೂ ಅದೇ ಊರಿನ ಶಾಸಕ ಮೇಲಗಿರಿ ಗೌಡರ ಮಗ ಶ್ರೀನಿವಾಸನೂ ಪ್ರೀತಿಸುತ್ತಿದ್ದಾರೆ, ಸಧ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ತಿಳಿದು ಕೆರಳುವ ಸತ್ಯಳ ತಂದೆ ಬೆಂಗಳೂರಿಗೆ ಹೋಗಿ ಮಗಳಿಗೆ ಚಪ್ಪಲಿಯಲ್ಲಿ ಹೊಡೆದು ಬುದ್ಧಿ ಹೇಳುತ್ತಾರೆ. ಶ್ರೀನಿವಾಸನ ಪೋಷಕರೂ ಮಗನಿಗೆ ಬುದ್ಧಿ ಹೇಳುತ್ತಾರೆ. ಆದರೆ ಸತ್ಯ ನಿರ್ಧಾರ ಬದಲಿಸುವುದಿಲ್ಲ; ಶ್ರೀನಿವಾಸ ನಿರ್ಧಾರ ಬದಲಿಸಿ ಬೇರೆ ಮದುವೆಯಾಗುತ್ತಾನೆ.

ಇತ್ತ ಮಗಳನ್ನು ಚಪ್ಪಲಿಯಲ್ಲಿ ಹೊಡೆದು ಬಂದನಂತರ ವೆಂಕಟರಮಣಯ್ಯರವರನ್ನು ಚಿಂತೆ ಆವರಿಸಿಕೊಳ್ಳುತ್ತದೆ. ವೆಂಕಟರಮಣಯ್ಯನವರಿಗೆ ಒಂದು ಚರಿತ್ರೆ ಇರುತ್ತದೆ. ಅವರ ಹೆಂಡತಿ ಪ್ರಾಯದಲ್ಲೇ ತೀರಿಕೊಂಡಿರುತ್ತಾರೆ. ದೇವಸ್ಥಾನದ ಅರ್ಚಕರಾಗಿದ್ದ ಇವರು ಮೊದಮೊದಲು ಹೆದರಿದರೂ, ಕೊನೆಗೂ ದೈಹಿಕ ವಾಂಛೆಗಳನ್ನು ಗೆಲ್ಲಲಾಗದೆ, ಮಾತಂಗಿ ಎಂಬ ಹರಿಜನರ ವಿಧವೆ ಹೆಂಗಸಿನೊಂದಿಗೆ ಸಂಬಂಧವಿರಿಸಿಕೊಳ್ಳುತ್ತಾರೆ. ಈ ಗೌಪ್ಯ ಸಂಬಂಧಕ್ಕೆ ಸುಮಾರು ಮೂರು ವರ್ಷಗಳ ಕಾಲವಾಗಿರುತ್ತದೆ. ಆಗ ಒಂದು ಎಡವಟ್ಟು ಆಗಿಬಿಡುತ್ತದೆ. ಮಾತಂಗಿ ಗರ್ಭವತಿಯಾಗಿಬಿಡುತ್ತಾಳೆ. ಗುಡಿಯ ಅರ್ಚಕರಿಗೆ ಕೆಟ್ಟ ಹೆಸರು ಬರುವುದನ್ನು ಬಯಸದ ಅವಳು ದೂರದ ಊರೊಂದಕ್ಕೆ ಹೋಗಿ, ಅಲ್ಯಾರೊಂದಿಗೋ ಮದುವೆಯಾಗಿ, ಮಗುವನ್ನು ಹೆತ್ತು ಸಾಕಿಕೊಳ್ಳುತ್ತಾಳೆ. ಇದೆಲ್ಲಾ ಆಗಿದ್ದು ಈಗ ಹದಿನೈದಿಪತ್ತು ವರ್ಷಗಳಾಗಿವೆ.

ಈ ಮಧ್ಯೆ ದೇಶದಲ್ಲಿ ಜಾತಿಮತ ಭೇದವೆಲ್ಲಾ ದೂರವಾಗಬೇಕು ಅಂತ ಕ್ರಾಂತಿಯಾಯಿತು. ಹೊಲೆಯ, ಮಾದಿಗರನ್ನು 'ಹರಿಜನರು' ಅಂತ ಕರೆಯಬೇಕು ಎಂದಾಯಿತು. ಅವರೆಲ್ಲರಿಗೂ ದರಖಾಸ್ತಿನಲ್ಲಿ ಸರ್ಕಾರ ಜಮೀನು ಮಂಜೂರು ಮಾಡಿತು. ಮಂಗಳೂರು ಹೆಂಚಿನ ಮನೆ ಕಟ್ಟಿಸಿಕೊಟ್ಟಿತು. ಹರಿಜನರನ್ನು ಅಸ್ಪೃಷ್ಯರನ್ನಾಗಿ ಕಾಣಬಾರದು ಎಂದರು. ಅವರನ್ನು ದೇವಸ್ಥಾನದೊಳಕ್ಕೆ ಬಿಡುವಂತೆಯೂ ಆಯಿತು.

ಈಗ ವೆಂಕಟರಮಣಯ್ಯನವರಿಗೆ ಇವೆಲ್ಲ ನೆನಪಾಗಿ, ಸತ್ಯಳ ವರ್ತನೆ, ವಾದಗಳೊಂದಿಗೆ ಹೋಲಿಸಿಕೊಳ್ಳುವಂತಾಗಿ, ಗೊಂದಲವಾಗಿ, ಅದೇ ಯೋಚನೆ ಮಾಡಿ ಮಾಡಿ, ಹುಚ್ಚೇ ಹಿಡಿದುಬಿಡುತ್ತದೆ. ಅವರು ಮನೆ ಬಿಟ್ಟು, ದೇವಸ್ಥಾನದ ಪೂಜೆ ಬಿಟ್ಟು, ತೋಟದಲ್ಲಿ ಗುಡಿಸಲೊಂದನ್ನು ಕಟ್ಟಿಕೊಂಡು ಬದುಕಲು ಶುರುವಿಡುತ್ತಾರೆ.

ಪ್ರೇಮಭಂಗವಾಗಿ, ವಿಷಯ ಬಹಿರಂಗವಾಗಿ, ಸಮಾಜದಲ್ಲಿ ಹೆಸರು ಕಳೆದುಕೊಂಡು, ಅದರಿಂದಾಗಿ ಕೆಲಸ ಕಳೆದುಕೊಂಡು, ಸೀರೆ ಅಂಗಡಿಯೊಂದರಲ್ಲಿ ಕೂಲಿ ಮಾಡಿಕೊಂಡಿದ್ದ ಸತ್ಯ ಅಪ್ಪನ ಪರಿಸ್ಥಿತಿಯ ಸುದ್ಧಿ ಕೇಳಿ ಊರಿಗೆ ಧಾವಿಸುತ್ತಾಳೆ. ತೋಟದ ಗುಡಿಸಲಿನಲ್ಲಿ ಹುಚ್ಚು ಹಿಡಿದಿದ್ದ ತಂದೆ ವೆಂಕಟರಮಣಯ್ಯ, ಸತ್ಯಳಿಗೆ ಯಜ್ನೋಪವೀತ ಧಾರಣೆ ಮಾಡುತ್ತಾರೆ. 'ಇನ್ನು ಮೇಲೆ ಹೋಮ, ಹವನ ಮಾಡು' ಅಂತ ಭೋದಿಸುತ್ತಾರೆ. ಅವರ ಹುಚ್ಚು ಹುಚ್ಚು ಮಾತುಗಳ ಸಹಾಯದಿಂದಲೇ ಸತ್ಯ ಮಾತಂಗಿಯ ಜತೆಗಿನ ಗೌಪ್ಯ ಸಂಬಂಧದ ಇತಿಹಾಸವನ್ನು ಪತ್ತೆ ಮಾಡುತ್ತಾಳೆ. ಅವರನ್ನು ಮಾನಸಿಕ ರೋಗ ತಜ್ನರ ಬಳಿಗೊಯ್ದು ಕಾಯಿಲೆ ವಾಸಿ ಮಾಡಿಸಿಕೊಂಡು ಬರಬೇಕು ಎಂಬ ಪ್ರಯತ್ನಗಳು ನಡೆಯುತ್ತಿರುವಾಗಲೇ ವೆಂಕಟರಮಣಯ್ಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ಸತ್ಯ ತಾನು ಇನ್ನು ಇದೇ ಗುಡಿಸಲಿನಲ್ಲಿ ಬದುಕಬೇಕು ಅಂತ ತೀರ್ಮಾನಿಸುತ್ತಾಳೆ. ಅಪ್ಪ ಬರೆದಿಟ್ಟಿದ್ದ ವಿಲ್ ಅವಳ ನೆರವಿಗೆ ಬರುತ್ತದೆ. ತಾನು ಶೂದ್ರಳಂತೆ ಬದುಕಬೇಕಂತ ನಿರ್ಧರಿಸುತ್ತಾಳೆ. ಮಾತಂಗಿಗಿಂತ ಶೂದ್ರಳಾಗಬೇಕೆಂದುಕೊಳ್ಳುತ್ತಾಳೆ.
ಅತ್ತ ಶ್ರೀನಿವಾಸನ ಹೆಂಡತಿ ಹೆರಿಗೆಯ ಸಮಯದಲ್ಲಿ ತೀರಿಕೊಳ್ಳುತ್ತಾಳೆ. ಶ್ರೀನಿವಾಸ ಒಬ್ಬಂಟಿಯಾಗುತ್ತಾನೆ. ಸತ್ಯಳ ನೆನಪು ಕಾಡಲಾರಂಭಿಸುತ್ತದೆ. ಅವನಿಗೆ ಮತ್ತೊಂದು ಮದುವೆ ಮಾಡುವ ಎಲ್ಲಾ ಪ್ರಯತ್ನಗಳೂ ವಿಫಲವಾದಾಗ ಅವನ ಪೋಷಕರು 'ಹೋಗಲಿ, ಸತ್ಯಳನ್ನೇ ಮಾಡಿಕೋ ಹಾಗಾದರೆ' ಅನ್ನುತ್ತಾರೆ. ಆದರೆ ಈ ಬಾರಿ ಸತ್ಯಳೇ ಮದುವೆಯನ್ನು ನಿರಾಕರಿಸುತ್ತಾಳೆ ಮತ್ತು ಹರಿಜನರ ಬೆಟ್ಟಯ್ಯನ ಮಗಳು ಮೀರಾಳನ್ನು ಮಾಡಿಕೋ ಎಂದು ಶ್ರೀನಿವಾಸನಿಗೆ ಸಲಹೆ ಕೊಡುತ್ತಾಳೆ. ಅವಳು ಕೊಟ್ಟ ಸಲಹೆಯೇ ಗಟ್ಟಿಯಾಗಿ ಶ್ರೀನಿವಾಸನಿಗೆ ಮೀರಾಳ ಮೇಲೆ ಎಂಥದೋ ಆಕರ್ಷಣೆ ಉಂಟಾಗಿ ಪ್ರೇಮ ಶುರುವಾಗುತ್ತದೆ. ಅವರಿಬ್ಬರೂ ಮದುವೆ ಮಾಡಿಕೊಳ್ಳುವುದು ಅಂತ ತೀರ್ಮಾನಿಸುತ್ತಾರೆ.

ಆದರೆ ಶ್ರೀನಿವಾಸನ ಮನೆಯಿಂದ ಈ ಬಗ್ಗೆ ತೀವ್ರವಾದ ವಿರೋಧ ಬರುತ್ತದೆ. ಬೆಟ್ಟಯ್ಯನವರೂ ಮನಸ್ಪೂರ್ತಿಯಿಂದ ಒಪ್ಪಿಕೊಳ್ಳುವುದಿಲ್ಲ. ಎಷ್ಟೇ ಬುದ್ಧಿ ಹೇಳಿದರೂ ಸರಿಹೋಗದ ಶ್ರೀನಿವಾಸನನ್ನು ತಹಬಂದಿಗೆ ತರಲು ಅವನ ತಂದೆ ಉಪಾಯ ಮಾಡಿ ಸತ್ಯಳ ಅಣ್ಣ ವೆಂಕಟೇಶನನ್ನು ಈ ಕೆಲಸಕ್ಕೆ ನೇಮಿಸುತ್ತಾರೆ. ವೆಂಕಟೇಶ ಶ್ರೀನಿವಾಸನನ್ನು ಕಂಡು 'ಸತ್ಯ ಮೀರಾಳ ಅಣ್ಣ ಮೋಹನದಾಸನನ್ನು ಮದುವೆಯಾಗುತ್ತಿದ್ದಾಳೆ. ನಿನಗೆ ಈ ರೀತಿ ದಡ ಕಾಣಿಸಿ ಅವನನ್ನು ಮದುವೆಯಾಗುವ ಪ್ಲಾನು ಅವಳದು' ಎಂದು ಸುಳ್ಳು ಹೇಳಿ ಕಿವಿ ತಿರುಚುತ್ತಾನೆ. ಸದರಿ ಮೋಹನದಾಸ -ಬೆಟ್ಟಯನವರ ಮಗ- ತಲತಲಾಂತರದಿಂದ ತಮ್ಮನ್ನು ಕೀಳಾಗಿ ಕಾಣುತ್ತಾ ಬಂದಿರುವ ಮೇಲುಜಾತಿಯವರ ಮೇಲೆ ಸದಾ ಕೆಂಡ ಕಾರುವ, ಇವೆಲ್ಲಾ ತೊಲಗಬೇಕಾದರೆ ಕ್ರಾಂತಿಯಾಗಬೇಕು, ಮೇಲು ಜಾತಿಯವರ ಮೇಲೆ ಹೇಗಾದರೂ ಮಾಡಿ ಸೇಡು ತೀರಿಸಿಕೊಳ್ಳಬೇಕು ಎಂಬ ತತ್ವವುಳ್ಳ ತರುಣ. 'ಜಾತಿ ಬೇಧವೆಲ್ಲಾ ಸುಳ್ಳು' ಎಂಬ ವಾದವನ್ನು ನಂಬಿದ್ದ ಮತ್ತು ಎಂದೂ ಜಾತಿ ಬೇಧ ಮಾಡದ ಸತ್ಯಳೊಂದಿಗೆ ಅವನಿಗೆ ಪರಿಚಯ ಬೆಳೆಯುತ್ತದೆ. ಅವನ ಅನೇಕ ತತ್ವಗಳನ್ನು ಸತ್ಯ ಒಪ್ಪದಿದ್ದರೂ, ಅವನು ಒತ್ತಾಯಿಸಿದ ಕಾರಣ, ಈ ಜಾತಿಪದ್ಧತಿ, ಹರಿಜನ, ಅಸ್ಪೃಷ್ಯತೆ, ಸಮಾನತೆ -ಇವುಗಳನ್ನೆಲ್ಲಾ ಸಮೀಕರಿಸಿ ಒಂದು ಪುಸ್ತಕ ಬರೆದು ಮೋಹನದಾಸನಿಗೆ ಕೊಡಲು ಒಪ್ಪಿರುತ್ತಾಳೆ. ಇದೇ ಕಾರಣಕ್ಕೆ ಅವಳ ತೋಟದ ಮನೆಗೆ ಪದೇ ಪದೇ ಬಂದು ಹೋಗುತ್ತಿದ್ದ ಮೋಹನದಾಸನ ಬಗ್ಗೆ ತಿಳಿದಿದ್ದ ಶ್ರೀನಿವಾಸ, ಈಗ 'ಸತ್ಯ ಅವನನ್ನೇ ಮದುವೆಯಾಗುತ್ತಿದ್ದಾಳಂತೆ' ಎಂಬ ಸುಳ್ಳು ಸುದ್ಧಿಯನ್ನು ಸುಲಭವಾಗಿ ನಂಬುತ್ತಾನೆ. ತನ್ನಂತಹ ತನ್ನನ್ನೇ ನಿರಾಕರಿಸಿ ಆ ಮಾದಿಗನನ್ನು ಕಟ್ಟಿಕೊಳ್ಳಲು ಹೊರಟಿರುವ ಸತ್ಯಳ ಬಗ್ಗೆ ದ್ವೇಷ ಬೆಳೆಯುತ್ತದೆ. 'ತಾನು ಮಾದಿಗನಿಂತ ಕೀಳಾ?' ಅಂತ ಕೇಳಿಕೊಳ್ಳುತ್ತಾನೆ. ಮೀರಾಳೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಳ್ಳುತ್ತಾನೆ. ಮೀರಾ ಈ ಅವಮಾನ, ಅನ್ಯಾಯವನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ. ಮತ್ತು ಶ್ರೀನಿವಾಸ ಅಕ್ಷರಶಃ ಹುಚ್ಚನೇ ಆಗಿಬಿಡಿತ್ತಾನೆ.

ಈ ಮಧ್ಯೆ ಸತ್ಯ ಬರೆದ ಪುಸ್ತಕ ಕ್ರಾಂತಿಯನ್ನೇ ಉಂಟುಮಾಡುತ್ತದೆ. ಮೋಹನದಾಸನ ನೇತೃತ್ವದಲ್ಲಿ ಎಲ್ಲೆಡೆಯಲ್ಲೂ ಹರಿಜನರು ಸಂಘಗಳನ್ನು ಕಟ್ಟಿಕೊಂಡು ಹೋರಾಟಕ್ಕಿಳಿಯುತ್ತಾರೆ. ದೇವಸ್ಥಾನಗಳಿಗೆ ನುಗ್ಗುತ್ತಾರೆ. ಹೋಟೆಲುಗಳಿಗೆ ನುಗ್ಗುತ್ತಾರೆ. ಅವರ ಕ್ರಾಂತಿಯಾತ್ರೆ ತಿರುಮಲಾಪುರಕ್ಕೂ ಬರುತ್ತದೆ. ಜನಗಳ ತೀವ್ರ ಪ್ರತಿರೋಧದ ನಡುವೆಯೂ ಅವರು ದೇವಸ್ಥಾನವನ್ನು ಪ್ರವೇಶಿಸುತ್ತಾರೆ. ಆದರೆ ಮಂಗಳಾರತಿಯ ಸಂದರ್ಭದಲ್ಲಿ ಮೋಹನದಾಸನಿಗೆ ಅಂತಃಪ್ರಜ್ನೆ ಕೆಲಸ ಮಾಡಿ ಮೂರ್ಚೆ ತಪ್ಪಿ ಬಿದ್ದುಬಿಡುತ್ತಾನೆ.

ಎಚ್ಚರಾಗಿ ಎದ್ದು ಊರುಬಿಟ್ಟು ಹೋದವನಿಗೆ ತನ್ನ ಊರಲ್ಲೇ ತನಗಾದ ಈ ಅವಮಾನವನ್ನು ಸಹಿಸಲಾಗದೆ, ದೇವಸ್ಥಾನವನ್ನೇ, ಮೇಲ್ಜಾತಿಯ ಜನಗಳನ್ನೇ, ಇಡೀ ಊರನ್ನೇ ನಾಶ ಮಾಡುವ ಸಂಚು ಹೂಡುತ್ತಾನೆ. ಡೈನಾಮೈಟ್ ಇಟ್ಟು ಕೆರೆಯನ್ನು ಉಡಾಯಿಸಿಬಿಡುತ್ತಾನೆ. ಇಡೀ ಊರು ಜಲಪ್ರಳಯಕ್ಕೊಳಗಾಗುತ್ತದೆ. ಸತ್ಯ ಮೂಕವಿಸ್ಮಿತಳಾಗಿ ದೂರ ನಿಂತು ನೋಡುತ್ತಾಳೆ.

Monday, August 28, 2006

ನಾನು ಓದಿದ ಪುಸ್ತಕ (೧)

ಪರ್ವ: ಮಹಾಭಾರತದ ಮರುಸೃಷ್ಟಿ
ಕಾದಂಬರಿಯನ್ನು ಮದ್ರದೇಶದ ಅರಮನೆಯ ದೃಶ್ಯದೊಂದಿಗೆ ಶುರು ಮಾಡುತ್ತಾರೆ ಭೈರಪ್ಪ. ರಾಜ ಶಲ್ಯ ತನ್ನ ಮೊಮ್ಮಗಳು ಹಿರಣ್ಯವತಿಯೊಂದಿಗೆ ಮಾತನಾಡುತ್ತಿದ್ದಾನೆ. ಹಿರಣ್ಯವತಿ ತಾತನ ವಯಸ್ಸನ್ನು ಕೇಳುತ್ತಾಳೆ. ಅದಕ್ಕೆ ಶಲ್ಯ ಎಂಬತ್ತನಾಲ್ಕು ಎಂದು ಉತ್ತರಿಸುತ್ತಾನೆ. ಹೇಗೆ ಲೆಕ್ಕ ಇಟ್ಟಿದ್ದೀಯ ಎಂಬ ಅವಳ ಮರುಪ್ರಶ್ನೆಗೆ 'ಭೀಷ್ಮನಿಗಿಂತ ನಾನು ಮೂವತ್ತಾರು ವರ್ಷಕ್ಕೆ ಚಿಕ್ಕವನು. ಅವನಿಗೆ ಈಗ ನೂರ ಇಪ್ಪತ್ತಂತೆ. ಅಂದರೆ ನನಗೆಷ್ಟಾಯಿತು ಹೇಳು..?' ಎನ್ನುತ್ತಾನೆ.

ಪರ್ವದಲ್ಲಿ ನಾನು ಮೊದಲು ಗಮನಿಸಿದ ಅಂಶವೆಂದರೆ, ಪಾತ್ರಗಳ ವಯಸ್ಸನ್ನು ಖಚಿತವಾಗಿ mention ಮಾಡಿದ್ದು. ಮೂಲ ಮಹಾಭಾರತದಲ್ಲಿ ಇಲ್ಲದ, ಪರ್ವವನ್ನು ಓದುವಾಗ 'ಅರೆರೆ, ಹೌದಲ್ಲ' ಅನ್ನಿಸುವ ಅತ್ಯಂತ ದೊಡ್ಡ ವಿಶೇಷ ಇದು. ಮೂಲ ಮಹಾಭಾರತವನ್ನು ಓದುವಾಗ, ಅಥವಾ ಅದರ ಕತೆಯನ್ನು ಕೇಳುವಾಗ, ಅಥವಾ ಟೀವಿ - ಯಕ್ಷಗಾನಗಳಲ್ಲಿ ನೋಡುವಾಗ ನಮ್ಮ ಗಮನಕ್ಕೇ ಬಾರದ ಅಂಶ ಇದು. ಅಲ್ಲೆಲ್ಲಾ ಧರ್ಮರಾಯನಿಗೆ ಸುಮಾರು ನಲವತ್ತು ವರ್ಷವಾದಂತೆ ಅನ್ನಿಸುತ್ತದೆ. ಭೀಮ, ಅರ್ಜುನ, ದುರ್ಯೋಧನ, ದುಶ್ಯಾಸನ, ಕರ್ಣ, ಕೃಷ್ಣರನ್ನೆಲ್ಲ ಮೂವತ್ತು - ಮೂವತ್ತೈದರ ಆಸುಪಾಸಿನವರಂತೆ ಬಿಂಬಿಸಲಾಗುತ್ತದೆ. ಭೀಷ್ಮ-ದ್ರೋಣರು ಅರವತ್ತೈದು-ಎಪ್ಪತ್ತರವರವರಂತೆ ಕಾಣಿಸುತ್ತಾರೆ. ಆದರೆ ಪರ್ವದಲ್ಲಿ ಅದು ಪೂರ್ತಿಯಾಗಿ ವಿಭಿನ್ನವಾಗಿದೆ. ಇಲ್ಲಿ ಧರ್ಮರಾಯನಿಗೆ ಅರವತ್ತು; ಭೀಮ ದುರ್ಯೋಧನರಿಗೆ ಐವತ್ನಾಲ್ಕು-ಐವತ್ತೈದು; ಅರ್ಜುನ ಕೃಷ್ಣರಿಗೆ ಐವತ್ಮೂರು; ಭೀಷ್ಮರಿಗೆ ಪೂರ್ತಿ ನೂರ ಇಪ್ಪತ್ತು!

ಪರ್ವದ ಮೊದಲ ಅಧ್ಯಾಯದ ಪೂರ್ತಿ ಶಲ್ಯಾದಿ ರಾಜರುಗಳಲ್ಲಿ ಯುದ್ಧ ಪೂರ್ವದಲ್ಲಿದ್ದ ತೊಡಕುಗಳ ಚಿತ್ರಣವಿದೆ. ಕುರುಕ್ಷೇತ್ರ ಯುದ್ಧಕ್ಕೆ ತಾವು ಹೋಗಬೇಕೆ ಬೇಡವೆ? ಹೋದರೆ ಯಾರ ಪರವಾಗಿ ಹೋಗಬೇಕು? ಧರ್ಮದ ಪರ ಹೋಗಬೇಕು. ಇಷ್ಟಕ್ಕೂ ಯಾರದು ಧರ್ಮ? ಕೌರವರದ್ದೋ ಪಾಂಡವರದ್ದೋ? ಎರಡೂ ಪಕ್ಷಗಳಿಂದ ರಾಜದೂತರು ಬಂದು ಇವರ ಮನವೊಲಿಸಲಿಕ್ಕೆ ಪ್ರಯತ್ನಿಸುತ್ತಿರುತ್ತಾರೆ. 'ಧರ್ಮಕ್ಕೆ ಗೆಲುವಾಗಬೇಕು; ಆದ್ದರಿಂದ ನೀವು ನಮ್ಮ ಕಡೆ ಬರಬೇಕು' ಎಂದು ಓಲೈಸುತ್ತಾರೆ. ಎರಡೂ ಕಡೆಯವರೂ ತಮ್ಮದೇ ಧರ್ಮ ಅನ್ನುವಂತೆ ಮಾತನಾಡುತ್ತಾರೆ. ಇವರಿಗೆ dilemma. ಅದಲ್ಲದೆ 'ಹೋಗಲಿ, ಯಾರ ಕಡೆಗೂ ಬೇಡ, ನಾವು ತಟಸ್ಥರಾಗಿದ್ದುಬಿಡೋಣ' ಎಂದರೆ, ನಡೆಯಲಿರುವುದು ಭಾರೀ ಯುದ್ಧ. ಎಲ್ಲಾ ರಾಜರೂ ಒಂದಲ್ಲಾ ಒಂದು ಕಡೆ ಹೋಗಿಯೇ ಹೋಗುತ್ತಾರೆ. ಹಾಗಿದ್ದಾಗ ನಾವು ಸುಮ್ಮನಿದ್ದರೆ ನಮ್ಮ ಗೌರವ, ಪ್ರತಿಷ್ಠೆಗಳಿಗೆ ಕುಂದು ಎಂದುಕೊಂಡು, ಇಡೀ ಆರ್ಯಾವರ್ತದ ರಾಜರೆಲ್ಲ ಯುದ್ಧದ ತಯಾರಿಯಲ್ಲಿ ತೊಡಗುತ್ತಾರೆ.

ಎರಡನೇ ಅಧ್ಯಾಯ ವಿದುರನ ಮನೆಯ ಎದುರಿಗೆ ಹರಿಯುವ ಗಂಗಾನದಿಯ ದಡದಲ್ಲಿ ಯೋಚನಾಮಗ್ನಳಾಗಿ ಕುಳಿತ ಮುದುಕಿ ಕುಂತಿಯ ಚಿತ್ರಣದೊಂದಿಗೆ ಆರಂಭವಾಗುತ್ತದೆ. ವಿದುರ ಬಂದು ಕುಂತಿಗೆ ಹೇಳುತ್ತಾನೆ: 'ಸಂಧಾನಕ್ಕೇಂತ ಇಂದು ಕೃಷ್ಣ ಕೌರವನ ಆಸ್ಥಾನಕ್ಕೆ ಬಂದಿದ್ದ. ಆಗ ಎಲ್ಲರೂ ನಿಬ್ಬೆರಗಾಗುವಂತಹ ಒಂದು ಮಾತನ್ನು ದುರ್ಯೋಧನ ಆಡಿದ. ಪಾಂಡವರ್‍ಯಾರೂ ಅಪ್ಪನಿಗೆ ಹುಟ್ಟಿದವರಲ್ಲ. ಅವರಿಗೆ ನಾವ್ಯಾಕೆ ಪಾಲು ಕೊಡಬೇಕು. ಅವರು ಕುಂತಿಯ ಮಕ್ಕಳು ಅಷ್ಟೆ. ನಿಯೋಗದಿಂದ ಹುಟ್ಟಿದ ಮಕ್ಕಳು ಧರ್ಮದ ಸಂತತಿಯಲ್ಲ -ಎಂದುಬಿಟ್ಟ.' ಕುಂತಿ ಮತ್ತೆ ಯೋಚನಾಲಹರಿಗೆ ಬೀಳುತ್ತಾಳೆ.

ಪರ್ವದ ವೈಶಿಷ್ಟ್ಯವೇನೆಂದರೆ, ಮೂಲ ಮಹಾಭಾರತದಲ್ಲಿನ ಯಾವತ್ತೂ ಅಲೌಕಿಕ ಅಂಶಗಳಿಂದ ಪಾರಾಗಿರುವುದು. ಇಲ್ಲಿ ಕೃಷ್ಣ ದೇವರಲ್ಲ, ಪಾಂಡವರು ವರದಿಂದ ಜನಿಸಿದವರಲ್ಲ, ನೂರೂ ಜನ ಕೌರವರು ಗಾಂಧಾರಿಯ ಪಿಂಡದಿಂದ ಹುಟ್ಟಿದವರಲ್ಲ, ಕರ್ಣ ಸೂರ್ಯಪುತ್ರನಲ್ಲ, ಅಭಿಮನ್ಯು ಹೊಟ್ಟೆಯಲ್ಲಿದ್ದಾಗಲೇ ಚಕ್ರವ್ಯೂಹದ ಗುಟ್ಟು ತಿಳಿದದ್ದು ಸುಳ್ಳು. ಒಂದೊಮ್ಮೆ ಮಹಾಭಾರತ ನಡೆದಿದ್ದರೂ ನಡೆದಿದ್ದಿರಬಹುದೇನೋ ಅನ್ನಿಸುವಂತೆ ಬರೆದಿದ್ದಾರೆ ಭೈರಪ್ಪ. ಪ್ರತಿ ವಿವರವೂ ಓದುಗನಿಗೆ ಆಪ್ತವೆನಿಸುವಂತೆ, ಕಣ್ಣಿಗೆ ಕಟ್ಟಿದಂತೆ, ಇಲ್ಲೇ ಎದುರಿಗೆ ನಡುಯುತ್ತಿದೆಯೇನೋ ಅನ್ನಿಸುವಂತ ಚಿತ್ರಕ ಶಕ್ತಿಯಿಂದ ಕೂಡಿದೆ ಇಡೀ ಪರ್ವ. ಅದಕ್ಕಾಗಿ ಭೈರಪ್ಪ ವರ್ಷಾನುಗಟ್ಟಲೆ study ಮಾಡಿದ್ದೇನು ಸುಳ್ಳಲ್ಲವಲ್ಲ?

ಕುಂತಿ ಯೋಚಿಸುತ್ತಾಳೆ. ನೆನಪುಗಳು ತೂರಿ ಬರುತ್ತವೆ. ಪಾಂಡುವಿನೊಂದಿಗೆ ತನ್ನ ಮದುವೆಯಾದದ್ದು.... ಎಂತಹ ವೈಭವದ ಮದುವೆ! ಎಲ್ಲಾ ನೆನಪಾಗುತ್ತದೆ ಕುಂತಿಗೆ... ಮದುವೆಯ ರಾತ್ರಿಯೇ ಅವಳಿಗೆ ಅರಿವಾಗುತ್ತದೆ: ಪಾಂಡುರಾಜ ನಿರ್ವೀರ್ಯ ಎಂದು. ಆದರೆ ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ಪಾಂಡು ಮತ್ತೊಂದು ಮದುವೆಯಾಗುತ್ತಾನೆ. ಮಾದ್ರಿ ಅವನ ಹೆಂಡತಿಯಾಗಿ ಬರುತ್ತಾಳೆ. ಆದರೆ ಅವಳಲ್ಲಿಯೂ ಮಕ್ಕಳಾಗದಿದ್ದಾಗ ದೋಷ ಪಾಂಡುವಿನದೇ ಎಂದು ಸಾಬೀತಾಗುತ್ತದೆ. ಆತ ಹಿಮಾಲಯಕ್ಕೆ ಹೋಗಿ ತನ್ನ ದೌರ್ಬಲ್ಯಕ್ಕೆ ಚಿಕಿತ್ಸೆ ಪಡೆದು ಬರುವುದಾಗಿ ಹೊರಡುತ್ತಾನೆ. ಅವನ ಇಬ್ಬರು ಮಡದಿಯರೂ ಅವನನ್ನು ಹಿಂಬಾಲಿಸುತ್ತಾರೆ. ಅವರು ಹೋಗಿ ಪರ್ವತವೊಂದರ ತಪ್ಪಲಿನಲ್ಲಿ ನೆಲೆಸುತ್ತಾರೆ. 'ಆ ಪರ್ವತದಾಚೆಗಿನದೇ ದೇವಲೋಕ' ಎಂದು ಪಾಂಡು ಪರಿಚಯಿಸುತ್ತಾನೆ. 'ಅಲ್ಲಿ ನಾನಾ ಔಷಧಿ, ಗಿಡಮೂಲಿಕೆಗಳನ್ನು ತಿಳಿದವರಿದ್ದಾರೆ. ಅವರ ಸಹಾಯದಿಂದ ನಾನು ದೌರ್ಬಲ್ಯಮುಕ್ತನಾಗುತ್ತೇನೆ' ಎಂದು ಅರುಹುತ್ತಾನೆ. ಪರ್ವತಗಳು ಕುಂತಿಗೆ ಕರ್ಣನ ಹುಟ್ಟಿನ ನೆನಪನ್ನು ಮರುಕಳಿಸುತ್ತವೆ.

ಏನೂಂತ ತಿಳಿಯುವ ಮೊದಲೇ ಹುಟ್ಟಿದ ಮಗು. ಕುಂತೀಭೋಜನ ಮಗಳು ಕುಂತಿಗೆ ಹದಿನೈದು ವರ್ಷ ವಯಸ್ಸಾಗಿದ್ದ ಸಂದರ್ಭದಲ್ಲಿ, ಒಂದು ದಿನ ದುರ್ವಾಸ ಮುನಿಗಳು ಅರಮನೆಗೆ ಬರುತ್ತಾರೆ. ಅವರ ಸೇವೆಗೆಂದು ನಿಯೋಜಿತಳಾಗಿದ್ದ ಕುಂತಿ ಅವರ ಬಳಿ ಕುತೂಹಲಕ್ಕೆಂದು 'ತಾಯಿಯಾಗುವುದು ಎಂದರೇನು?' ಅಂತ ಕೇಳುತ್ತಾಳೆ. 'ಮಗು ಅಂದರೆ ತುಂಬ ಆಸೆಯೇ?' ದುರ್ವಾಸರು ಕೇಳುತ್ತಾರೆ. ಕುಂತಿ ಹೂಂಗುಡುತ್ತಾಳೆ. ದುರ್ವಾಸರು ಕುಂತಿಯನ್ನು ಕೂಡುತ್ತಾರೆ. ಮಗು ಹುಟ್ಟುತ್ತದೆ. ಆದರೆ ಅದು ಕಾನೀನ (ಮದುವೆಗೆ ಮುಂಚೆ ಹುಟ್ಟಿದ ಮಗು) ವಾದ್ದರಿಂದ, ಅದಾಗಲೇ ಆರ್ಯಜಗತ್ತು ಮುಂದುವರೆದು, ಇಂಥದ್ದನ್ನು ಗೌರವಿಸುತ್ತಿರಲಿಲ್ಲವಾದ್ದರಿಂದ, ವಿಷಯವನ್ನು ಮುಚ್ಚಿಟ್ಟು, ಹುಟ್ಟಿದ ಮಗುವನ್ನು ದಾಸಿ ರಾಧೆಗೆ ಸಾಕಿಕೊಳ್ಳಲು ಕೊಟ್ಟುಕಳುಹಿಸುತ್ತಾರೆ. ಕರ್ಣ ರಾಧೆಯ ಮನೆಯಲ್ಲಿ ಸೂತಪುತ್ರನಂತೆ ಬೆಳೆಯುತ್ತಾನೆ.

ಕುಂತಿ ನೆನಪುಗಳಲ್ಲಿ ತೋಯುತ್ತಿರುವಾಗ ಇತ್ತ ಹಸ್ತಿನಾವತಿಯಿಂದ ಧೃತರಾಷ್ಟ್ರನ ಮದುವೆಯಾದ ಸುದ್ದಿ ಬರುತ್ತದೆ. ಪಾಂಡುವಿಗೆ ಯೋಚನೆಯಾಗುತ್ತದೆ. ತನಗಿಂತ ಮೊದಲು ಧೃತರಾಷ್ಟ್ರನಿಗೆ ಮಕ್ಕಳಾದರೆ ಕುರು ಸಿಂಹಾಸನ ಅವರದೇ ಪಾಲಾಗಿ ನಾವು ಇಲ್ಲೇ ಪರ್ವತದ ತಪ್ಪಲಿನಲ್ಲೇ ಉಳಿಯುವಂತಾಗಿಬಿಡುತ್ತದೇನೋ ಎಂದು ಯೋಚಿಸುತ್ತಾನೆ. ಮತ್ತು ಕುಂತಿಯನ್ನು 'ನಿಯೋಗ'ದಿಂದ ತನಗೊಂದು ಮಗುವನ್ನು ಹೆತ್ತುಕೊಡುವಂತೆ ಪುಸಲಾಯಿಸುತ್ತಾನೆ. ಅವಳಿಗೆ ವೀರ್ಯದಾನ ಮಾಡಲು ದೇವಲೋಕದವರಲ್ಲಿ ಬೇಡಿಕೊಳ್ಳುತ್ತಾನೆ. ಅಲ್ಲಿನ ಧರ್ಮಾಧಿಕಾರಿ ಮುಂದೆ ಬರುತ್ತಾನೆ. ಪಾಂಡುವಿನೊಂದಿಗೆ ಒಪ್ಪಂದದ ನಂತರ ಆತ ಕುಂತಿಯೊಂದಿಗೆ ಕೂಡುತ್ತಾನೆ. ಅವನಿಂದಾಗಿ ಕುಂತಿಗೆ ಮಗು ಜನಿಸುತ್ತದೆ. ಆ ಮಗುವೇ ಧರ್ಮರಾಜ. ಸಣ್ಣ ಮೈಕಟ್ಟಿನ, ಶಾಂತ ಸ್ವಭಾವದ ಮಗು. ಅದರಿಂದ ಪಾಂಡುವಿಗೆ ತೃಪ್ತಿಯಾಗುವುದಿಲ್ಲ. ತನಗೆ ಇನ್ನೊಂದು ಮಗುವನ್ನು ಹೆತ್ತುಕೊಡುವಂತೆ ಕೇಳಿಕೊಳ್ಳುತ್ತಾನೆ. ಈ ಭಾರಿ ದೇವಲೋಕದ ಸೇನಾಪತಿ ಮರುತ್ ಬರುತ್ತಾನೆ. ಅವನಿಂದ ಕುಂತಿಗೆ ಭೀಮ ಜನಿಸುತ್ತಾನೆ; ಬಲಭೀಮ. ತದನಂತರ, ಒಂದು ದಿನ ಕುಂತಿ ನದಿಯಲ್ಲಿ ಭೀಮನಿಗೆ ಸ್ನಾನ ಮಾಡಿಸುತ್ತಿರುವಾಗ ದೇವಲೋಕದಿಂದ ಬಂದ ಅಲ್ಲಿನ ಮುಖ್ಯಸ್ಥ ಇಂದ್ರ ಇವಳ ರೂಪವನ್ನು ಕಂಡು ಮನಸೋತು ತಾನೇ ಅವಳಲ್ಲಿ ಒಂದಾಗುವ ಇಚ್ಛೆಯನ್ನು ವ್ಯಕ್ತಪಡಿಸುತ್ತಾನೆ. ಕುಂತಿ ಹೆದರಿದರೂ ಇಂದ್ರನೇ ಪಾಂಡುವನ್ನು 'ತಾನೂ ಕುಂತಿಗೆ ನಿಯೋಗದಲ್ಲಿ ಒಬ್ಬ ಪುತ್ರನನ್ನು ಕರುಣಿಸುವುದಾಗಿ' ಹೇಳಿ ಒಪ್ಪಿಸುತ್ತಾನೆ. ಕುಂತಿಗೆ ಇಂದ್ರನಿಂದ ಹುಟ್ಟಿದ ಮಗುವೇ ಅರ್ಜುನ.

ಇಷ್ಟೆಲ್ಲಾ ಆದಮೇಲೆ ಮಾದ್ರಿಗೆ ಅಕ್ಕನ ಮೇಲೆ ಅಸೂಯೆಯಾಗುತ್ತದೆ. ಆಕೆ ತನಗೂ ಮಕ್ಕಳು ಬೇಕು ಎಂಬ ಆಸೆಯನ್ನು ಪಾಂಡುವಿನಲ್ಲಿ ಅರುಹುತ್ತಾಳೆ. ಕುಂತಿಯೂ ಸಮ್ಮತಿಸುತ್ತಾಳೆ. ಪಾಂಡುವಿನ ಚಿಕಿತ್ಸೆಗೆಂದು ಬರುತ್ತಿದ್ದ ಇಬ್ಬರು ವೈದ್ಯರು ಮಾದ್ರಿಯನ್ನು ಕೂಡುತ್ತಾರೆ. ಮಾದ್ರಿಗೆ ಅವಳಿ ಮಕ್ಕಳಾಗುತ್ತವೆ. ಅವರಿಗೆ ನಕುಲ-ಸಹದೇವರೆಂದು ನಾಮಕರಣವಾಗುತ್ತದೆ. ಇಷ್ಟರಲ್ಲಿ ಪಾಂಡುವಿಗೆ ತನ್ನ ಮೇಲೆ ಔಷಧಿಗಳು ಬೀರುತ್ತಿರುವ ಪ್ರಭಾವದ ಮೇಲೆ ವಿಶ್ವಾಸ ಬಂದಿರುತ್ತದೆ. ಒಂದು ದಿನ ಅವನೇ ಬಲವಂತದಿಂದ ಮಾದ್ರಿಯನ್ನು ಕೂಡಲು ಹೋಗಿ, ಆಘಾತವಾಗಿ, ಸಾವನ್ನಪ್ಪುತ್ತಾನೆ. ಮಾದ್ರಿಗೆ ಪಾಪಪ್ರಜ್ನೆ ಕಾಡಿ, ಯಾರು ಎಷ್ಟೇ ತಡೆದರೂ, ಗಂಡನ ಚಿತೆಯಲ್ಲಿ ತಾನೂ ಸಹಗಮನ ಮಾಡಿಬಿಡುತ್ತಾಳೆ. ಕುಂತಿ ಐದೂ ಮಕ್ಕಳೊಂದಿಗೆ ಹಸ್ತಿನಾವತಿಗೆ ಮರಳಿ ಮಕ್ಕಳನ್ನು ಬೆಳೆಸುತ್ತಾಳೆ.

ಪರ್ವದ ಮೂರನೇ ಅಧ್ಯಾಯ ಭೀಮನ ಮನಸ್ಸಿನ ತುಮುಲಗಳನ್ನು ಚಿತ್ರಿಸುತ್ತದೆ. ಇಡೀ ಪರ್ವ ಕಾದಂಬರಿಯೇ ಪಾತ್ರಗಳ ಮನಸ್ಸಿನ ತಾಕಲಾಟಗಳಿಂದ ತುಂಬಿದುದು. ಭೀಮ, ರಾಕ್ಷಸಜನರ ಸಾಲಕಟಂಕಟಿ (ಹಿಡಿಂಬೆ)ಯಿಂದ ತನಗೆ ಜನಿಸಿದ ಪುತ್ರ ಘಟೋತ್ಕಜನನ್ನು ತನ್ನ ಸೈನ್ಯ ಸಮೇತ ಬಂದು ಯುದ್ಧದಲ್ಲಿ ತನ್ನನ್ನು ಬೆಂಬಲಿಸಬೇಕೆಂದು ಕೇಳಿಕೊಳ್ಳಲು ಕಾಡಿಗೆ ಹೊರಟಿದ್ದಾನೆ. ಅವನಿಗೆ ಹಿಂದಿನದೆಲ್ಲಾ ನೆನಪಾಗುತ್ತಾ ಹೋಗುತ್ತದೆ. ಅಣ್ಣ ಧರ್ಮಜನ ಯುವರಾಜ ಪಟ್ಟದ ಆಳ್ವಿಕೆಯ ಕಾಲದಿಂದ. ಅಣ್ಣ ಚೆನ್ನಾಗಿಯೇ ಆಳ್ವಿಕೆ ನಡೆಸುತ್ತಿದ್ದ. ಕೀರ್ತಿ ಸಂಪಾದಿಸಿದ್ದ. ಹೀಗೆಯೇ ಮುಂದುವರೆದರೆ ಇವನನ್ನೇ ರಾಜಪದವಿಗೇರಿಸಬೇಕಾಗುತ್ತದೆ ಎಂದರಿತ ಧೃತರಾಷ್ಟ್ರ, ಧರ್ಮಜನ ಬಳಿ ನಯವಾಗಿ 'ವಾರಣಾವತದಲ್ಲಿ ನಿಮಗಾಗಿ ಹೊಸ ಅರಮನೆಯೊಂದನ್ನು ಕಟ್ಟಿಸಿದ್ದೀನಿ. ನೀವೆಲ್ಲ ಅದನ್ನೇ ಉಪರಾಜಧಾನಿಯೆಂದು ಭಾವಿಸಿ ಅಲ್ಲೇ ವಾಸಿಸಿದರೆ ರಾಜ್ಯಕ್ಕೆ ಒಳಿತಾಗುತ್ತದೆ, ರಾಜ್ಯ ವಿಸ್ಥರಣೆಗೂ ಅನುಕೂಲವಾಗುತ್ತದೆ' ಎಂದು ಮರುಳು ಮಾಡಿ ಒಪ್ಪಿಸಿ, ತಮ್ಮನ್ನು ಅರಗಿನ ಅರಮನೆಗೆ ಸ್ಥಳಾಂತರಿಸಿದ್ದ. ವಿದುರನ ಸಹಾಯದಿಂದ ಕುತಂತ್ರ ಬಯಲಾಗಿತ್ತು. ಅರಗಿನ ಅರಮನೆ ಉರಿದುಹೋಗಿ, ಅಲ್ಲಿ ಅಂದು ತಂಗಿದ್ದ ಭೀಲರ ಹೆಂಗಸು ಮತ್ತವಳ ಐವರು ಮಕ್ಕಳ ಸುಟ್ಟ ಶವವನ್ನು ನೋಡಿ, ಪಾಂಡವರು ಸತ್ತೇ ಹೋದರೆಂದು ಭಾವಿಸಿ ಖುಷಿ ಪಟ್ಟಿದ್ದರಂತೆ ದುರ್ಯೋಧನಾದಿಗಳು. ಸುರಂಗದಿಂದ ತಪ್ಪಿಸಿಕೊಂಡು, ತಾಯಿ ಮತ್ತು ನಾಲ್ಕು ಜನ ಸಹೋದರರನ್ನು ತಾನು ಹೊತ್ತು ಕಾಡಿನ ಕತ್ತಲೆಯಲ್ಲಿ ದಿಕ್ಕು ದೆಸೆಯನ್ನದೆ ಓಡಿ ಓಡಿ ಓಡಿ....

to be continued...