Friday, December 28, 2007

ಹೊಸ ವರುಷದ ಜೋಳಿಗೆಯಲ್ಲಿ...

ಪ್ರತಿಯೊಬ್ಬರ ಕೈಗೂ ಒಂದೊಂದು ಬಿಳೀ ಖಾಲಿ ಹಾಳೆ ಕೊಟ್ಟು ಹೋಗಿಬಿಟ್ಟಿದ್ದಾರೆ ಯಾರೋ ಮೇಷ್ಟ್ರು..

ಅವರು ಕೊಟ್ಟಾಗ ಅದ್ಯಾಕೆ ಕೊಟ್ಟರು ಅಂತಲೇ ಗೊತ್ತಿರಲಿಲ್ಲ ನನಗೆ.. ಅಕ್ಕ ಪಕ್ಕ ನೋಡಿದೆ: ಎಲ್ಲರೂ ಮಗ್ನರಾಗಿ ತಲೆ ತಗ್ಗಿಸಿ ಚಿತ್ರ ಬಿಡಿಸುತ್ತಿದ್ದರು, ಕೆಲವರು ಮೇಲೆ ನೋಡುತ್ತಾ ಯೋಚಿಸುತ್ತಿದ್ದರು, ಕೆಲವರು ಪಕ್ಕದವರದನ್ನು ಕಾಪಿ ಹೊಡೆಯುತ್ತಿದ್ದರು, ಕೆಲವರು ಯಾರದೋ ಚಿತ್ರಕ್ಕೆ ಬಣ್ಣ ತುಂಬುತ್ತಿದ್ದರು, ಕೆಲವರು ಆಗಲೇ ಬಿಡಿಸಿ ಮುಗಿಸಿ, ಹಾಳೆಯನ್ನು ಟೇಬಲ್ಲಿನ ಮೇಲಿಟ್ಟು ಎದ್ದು ಹೋಗುತ್ತಿದ್ದರು.

ನಾನೂ ನನ್ನ ಹಾಳೆಯನ್ನು ಎದುರಿಗೆ ಹರವಿಕೊಂಡು ಬಿಡಿಸಲು ತೊಡಗಿದೆ. ಒಂದಷ್ಟು ದಿನ, ಅಪ್ಪ, ಅಮ್ಮ, ಮತ್ತೂ ಇನ್ನೇನೋ ಅವರ ಹೆಸರುಗಳು- ಅವರೆಲ್ಲ ಇದ್ದರು.. ಮೊದಮೊದಲು ಕೈ ಹಿಡಿದು ತಿದ್ದಿಸಿದರು, ನಂತರ ಪಕ್ಕದಲ್ಲಿ ನಿಂತು ಹುರಿದುಂಬಿಸುತ್ತಿದ್ದರು: 'ಹೂಂ, ಬರಿ ಬರಿ.. ಚನಾಗ್ ಬಿಡಿಸ್ತೀಯ.. ಬಿಡಿಸು..' ಆಮೇಲೆ ನನ್ನ ಪಾಡಿಗೆ ನನ್ನನ್ನು ಬಿಟ್ಟು ಅವರೆಲ್ಲ ಸುಮ್ಮನಾಗಿಬಿಟ್ಟರು.

ಮಂಕಾಗಿ ಕೂತಿದ್ದ ನನ್ನ ಬಳಿ ಯಾರೋ ಪುಣ್ಯಾತ್ಮರು ಬಂದು ಹಾಳೆಯ ಮೇಲೆ ಒಂದಷ್ಟು ಚುಕ್ಕಿಗಳನ್ನಿಟ್ಟು ಸ್ಕೆಚ್ ಹಾಕಿಕೊಟ್ಟರು. 'ಹೀಗೇ ಬಿಡಿಸಿದರೆ ಅದ್ಭುತ ಚಿತ್ರವಾಗೊತ್ತೆ' -ಎಂದರು. ನಾನು ಹೌದೆಂದುಕೊಂಡು ಬಿಡಿಸತೊಡಗಿದೆ. ಬಿಡಿಸಿದ ಚಿತ್ರ, ಸ್ವಲ್ಪ ಹೊತ್ತಿಗೆ ನನಗೇ ಇಷ್ಟವಾಗದೆ ಎಲ್ಲಾ ಅಳಿಸಿಹಾಕಿದೆ.

ಮತ್ತೆ ಬಿಳೀ ಖಾಲಿ ಹಾಳೆ..

ಯಾರೋ ಹೇಳಿದಂತೆ ನಾನ್ಯಾಕೆ ಬಿಡಿಸಬೇಕು? ನಾನೇ ಸ್ವಂತ ಸ್ವತಂತ್ರ ಚಿತ್ರ ಬಿಡಿಸಬೇಕೆಂಬ ಹಂಬಲು ಮೂಡಿತು. ಕುಂಚವನ್ನು ಕೈಗೆತ್ತಿಕೊಂದು ಬಿಡಿಸತೊಡಗಿದೆ... ಏನೋ ಕಲ್ಪನೆ.. ಏನೋ ಕನಸು.. ಹೌದು, ಎಷ್ಟು ಚಂದ ಮೂಡಿಬರುತ್ತಿದೆ ಚಿತ್ರ..! ಎಲ್ಲಾ ಸರಿಯಿದೆ, ಹುಬ್ಬಿಗೆ ಸ್ವಲ್ಪ ಕಪ್ಪು ತೀಡಿದರೆ ಮುಗಿಯಿತು ಎನಿಸುವಷ್ಟರಲ್ಲಿ ಯಾರೋ ಬಂದು ಇಡೀ ಚಿತ್ರದ ಮೇಲೆ ಒಂದು ಅಡ್ಡಗೆರೆ ಎಳೆದು ಹೋಗಿಬಿಡುತ್ತಾರೆ.. ನನ್ನ ಚಿತ್ರ ಹಾಳಾಗಿಬಿಡುತ್ತದೆ. ನಾನೀಗ ಅದನ್ನು ಪೂರ್ತಿ ಅಳಿಸಿ ಮತ್ತೆ ಹೊಸದಾಗಿ ಬಿಡಿಸಬೇಕು.

ಅದೇ ಚಿತ್ರವನ್ನು ಮತ್ತೆ ಬಿಡಿಸಲಾಗದು. ಬಿಡಿಸಿದರೂ ಅದೂ ಒಪ್ಪವಾಗಲಾರದು. ಆಗ ಉಷಃಕಾಲವಿತ್ತು; ಆ ರಾಗಕ್ಕದು ಒಗ್ಗುತ್ತಿತ್ತು. ಈಗ ಮಧ್ಯಾಹ್ನ; ಬೇರೆಯದೇ ರಾಗ; ಹೊಸದೇ ಚಿತ್ರ ಬೇಕು.

ಯಾರೋ ಹೇಳುತ್ತಾರೆ: 'ಪಕ್ಕದವನನ್ನು ನೋಡಿಕೊಂಡು ಬಿಡಿಸು. ಚಿತ್ರ ಯಾರದಾದರೇನು? ಚಿತ್ರಕ್ಕೆ ಜೀವ ಬರಲು ಬೇಕು ಹಚ್ಚುವವನದೇ ಭಾವ, ರಾಗ, ಬಣ್ಣ.' ಇರಬಹುದೇನೋ ಅಂದುಕೊಂಡು ನಾನು ಅವರಿವರ ಹಾಳೆ ನೋಡಿದೆ. ಕೆಲವು ಈಗ ತಾನೇ ಬಿಡಿಸಲು ಶುರುವಾದ ಚಿತ್ರಗಳು. ಇನ್ನು ಕೆಲವು ಅರ್ಧ ಬಿಡಿಸಿದ ಚಿತ್ರಗಳು. ಮತ್ತೆ ಕೆಲವಕ್ಕೆ ಢಾಳ ಬಣ್ಣಗಳು. ಕೆಲವು ಚಿತ್ರಗಳು ಇಷ್ಟವಾಗಲಿಲ್ಲ. ಕೆಲವು ಅತ್ಯಾಕರ್ಷಕವಾಗಿದ್ದವು. ನಾನೂ ಹಾಗೇ ಬಿಡಿಸಬೇಕು ಎಂದು ನನ್ನ ಒಂದು ಮನಸು ಹೇಳಿದರೆ, ಮತ್ತೊಂದು ಮನಸು ಒಪ್ಪಲಿಲ್ಲ. ನನ್ನ ಚಿತ್ರ ಯಾರದನ್ನೂ ಹೋಲಬಾರದು. ನನ್ನ ಚಿತ್ರ, ಅದಕ್ಕೆ ನನ್ನದೇ ಬಣ್ಣ -ಆಗಲೇ ಚಂದ ಎನ್ನಿಸಿತು.

ನಾನು ಮತ್ತೆ ಬಿಡಿಸಲು ತೊಡಗುತ್ತೇನೆ; ಏನು ಬಿಡಿಸಬೇಕೆಂದೇ ಗೊತ್ತಾಗದೆ ಹೆಣಗಾಡುತ್ತೇನೆ.

ಹಾಗೆ ನಮ್ಮನ್ನೆಲ್ಲ ಬರೆಯಲು ಹಚ್ಚಿ ಹಾಳೆ ಹಂಚಿಹೋದ ಮೇಷ್ಟ್ರು ಮಾತ್ರ ಇನ್ನೂ ಸಿಕ್ಕಿಲ್ಲ. ಅವಾಗಿವಾಗ ಬಂದು ನೋಡಿಕೊಂಡು ಹೋಗುತ್ತಿರುತ್ತಾರೆ, ಒಳ್ಳೆಯ ಚಿತ್ರ ಬಿಡಿಸಿದರೆ ಪ್ರಶಸ್ತಿ ಕೊಡುತ್ತಾರೆ, ಕೆಟ್ಟ ಚಿತ್ರಕ್ಕೆ ಶಾಪ ಎಂದೆಲ್ಲ ಗುಸುಗುಸು ನಮ್ಮಲ್ಲಿ... ನನಗಂತೂ ಅವರನ್ನು ನೋಡಿದ ನೆನಪೂ ಇಲ್ಲ. ಅವರು ಯಾವಾಗ ಬರುತ್ತಾರೋ, ಏನೋ, ಕಾದೂ ಕಾದೂ ಬೇಸತ್ತು ನಾನಂತೂ ಇತ್ತೀಚೆಗೆ ಅವರ ಬಗ್ಗೆ ಧೇನಿಸುವುದನ್ನೂ ಬಿಟ್ಟಿದ್ದೇನೆ.

ಯಾರೋ ಬಂದು ಪಕ್ಕದಲ್ಲಿ ಕೂರುತ್ತಾರೆ. 'ನಿನ್ನ ಹಾಳೆಯಲ್ಲಿ ನಾನೂ ಬಿಡಿಸಲಾ?' ಎನ್ನುತ್ತಾರೆ. 'ಇಬ್ಬರೂ ಸೇರಿ ಬಿಡಿಸಿದರೆ ಚಿತ್ರಕ್ಕೆ ಹೆಚ್ಚು ಸೊಗಸು ಬರುತ್ತದೆ' ಎನ್ನುತ್ತಾರೆ. ನನಗೂ ಅದು ಹಿತವೆನಿಸುತ್ತದೆ. ನಾನವರ ಮುಖ ನೋಡುತ್ತೇನೆ. ಮುಗುಳ್ನಗುತ್ತೇನೆ. ಅದನ್ನವರು ಸಮ್ಮತಿಯೆಂದು ಭಾವಿಸಿ ನನ್ನ ಜೊತೆ ಕೈಜೋಡಿಸುತ್ತಾರೆ. ಹೊಸ ಕನಸಿನ ಹೊಸ ಚಿತ್ರ ಶುರುವಾಗುತ್ತದೆ... ಆದರೆ ನನ್ನ ಅವರ ಭಾವಕ್ಕೆ ಹೊಂದಾಣಿಕೆಯಾಗದೆ, ಚಿತ್ರ ಚಿತ್ರಾನ್ನವಾಗಿ, ಅವರು ಬೇಸರಗೊಂಡು ಎಲ್ಲಾ ಅಳಿಸಿ, ಎದ್ದು ನಡೆಯುತ್ತಾರೆ.

ಮತ್ತದೇ ಬಿಳೀ ಹಾಳೆ... ಅಲ್ಲಲ್ಲಿ ಹಳೆಯ, ಅಳಿಸಿದರೂ ಪೂರ್ತಿ ಮರೆಯಾಗದ ಚಿತ್ರದ ಕುರುಹುಗಳು.. ಆ ಮತ್ತೊಬ್ಬರೊಂದಿಗೆ ಬೆಸೆದುಕೊಂಡು ಬಿಡಿಸಿ ಅಭ್ಯಾಸವಾಗಿದ್ದ ಕೈಗೆ ಸ್ವಲ್ಪ ದಿನ ಕಷ್ಟವಾಗುತ್ತದೆ; ಆಮೇಲೆ ಒಗ್ಗಿಹೋಗುತ್ತದೆ.

ಎಷ್ಟೋ ಚಿತ್ರಗಳನ್ನು ಬಿಡಿಸುತ್ತೇನೆ ನಾನು. ಬಿಡಿಸಿದ ಯಾವ ಚಿತ್ರವೂ ನನಗೆ ಪರಿಪೂರ್ಣ ಎನಿಸುವುದಿಲ್ಲ. ಒಮ್ಮೊಮ್ಮೆ ಯೋಚಿಸಿದಾಗ ದಿಗಿಲಾಗುತ್ತದೆ: ನಾನು ಚಿತ್ರ ಬಿಡಿಸಲು ತೊಡಗಿ ಎಷ್ಟೋ ವರ್ಷಗಳಾಗಿಬಿಟ್ಟಿವೆ. ಇನ್ನೂ ಈ ಚಿತ್ರ ಪೂರ್ತಿಯಾಗಿಲ್ಲ.. ಯಾವತ್ತಿಗಿದು ಮುಗಿಯುವುದು? ಎಂದಿದಕ್ಕೆ ಮುಕ್ತಿ? ಪಕ್ಕದಲ್ಲಿ ಹಣೆಗೆ ವಿಭೂತಿ ಹಚ್ಚಿ ಕೂತವನೊಬ್ಬ ಹೇಳುತ್ತಾನೆ: 'ಹಾಗೆಲ್ಲ ಚಿಂತಿಸುತ್ತಾ ಕೂರಬಾರದು. ಈ ಚಿತ್ರ ಮುಗಿಯುವುದೇ ಇಲ್ಲ. ಈಗಾಗಲೇ ಎದ್ದು ಹೋದವರೆಲ್ಲ ಮುಗಿಸಿಯೇ ಕೊಟ್ಟು ಹೋದವರೇನಲ್ಲ. ಅರ್ಧಕ್ಕೇ ಬೇಸತ್ತು ಎದ್ದು ಹೋದವರಿದ್ದಾರೆ. ಸುಸ್ತಾಗಿ ಎದ್ದು ಹೋದವರಿದ್ದಾರೆ. ಮೇಷ್ಟ್ರು ಕರೆದಂತಾಯ್ತು ಎಂದುಕೊಂಡು ಎದ್ದು ಹೋದವರಿದ್ದಾರೆ. ಚಿತ್ರ ಬಿಡಿಸೀ ಅಳಿಸಿ - ಬಿಡಿಸೀ ಅಳಿಸಿ ಹಾಳೆಯೆಲ್ಲ ಹರಿದುಹೋಗಿ ಎದ್ದು ಹೋದವರಿದ್ದಾರೆ. ನೀನ್ಯಾಕೆ ಹೀಗೆ ಚಿಂತಿಸುತ್ತ ಕುಳಿತಿದ್ದೀಯಾ? ನಿನಗೆ ತೋಚಿದಂತೆ ಬಿಡಿಸು. ಬಿಡಿಸುವಾಗ ಸಿಗುವ ಆನಂದವನ್ನು ಅನುಭವಿಸು.'

ಅವರು ಹೇಳಿದ್ದು ನನಗೆ ಸರಿಯೆನಿಸುತ್ತದೆ. ಹೊಸ ಉತ್ಸಾಹದೊಂದಿಗೆ ಬಿಡಿಸತೊಡಗುತ್ತೇನೆ...

* * *

ಬರುವ ಹೊಸ ವರ್ಷದ ಜೋಳಿಗೆಯಲ್ಲಿ ಚಿತ್ರ ಬಿಡಿಸುತ್ತಿರುವ ನಿಮಗೆ ಹೊಸ ಕಲ್ಪನೆಗಳನ್ನೂ, ವಿನ್ಯಾಸಗಳನ್ನೂ, ಪರಿಪೂರ್ಣತೆಯೆಡೆಗಿನ ತಿರುವುಗಳನ್ನೂ ಒದಗಿಸಬಲ್ಲ ಪೆನ್ಸಿಲ್ಲು - ಬಣ್ಣಗಳಿರಲಿ. ಬಿಡಿಸುವ ಮನಸಿನಲ್ಲಿ ಉಲ್ಲಾಸ ತುಂಬಿರಲಿ.

ಶುಭಾಶಯಗಳು.

Tuesday, December 18, 2007

ವಡಪ್ಪೆಯ ಎಡವಟ್ಟುಗಳು!

ಹೌದು, ವಡಪ್ಪೆ ತಿಂದಿದ್ರ ಬಗ್ಗೆ ಬರಿಯಕ್ಕು ನೋಡು ಸಂದೀಪಾ!

ತಿಂದುಂಡಿದ್ರ ಬಗ್ಗೇನೆಲ್ಲ ಏನು ಬರಿಯೋದು, ಮಾಡಿದ್ರ ಬಗ್ಗೆ ಬರೀಬೇಕು. ನಿಜ ಹೇಳಬೇಕೂಂದ್ರೆ, ವಡಪ್ಪೆ ಮಾಡಿದ್ದಷ್ಟೇ, ತಿಂದಿದ್ದು ಅಷ್ಟರಲ್ಲೇ ಇದೆ! ಆದರೆ ಮಾಡಲು ನಾವು ಪಟ್ಟ ಸಾಹಸಗಳಿವೆಯಲ್ಲ, ಅದನ್ನು ಬರೆಯದಿದ್ದರೆ ತಪ್ಪಾದೀತು.

ಅದು ಏನಾಯಿತೆಂದರೆ.... ತಾಳಿ, ಅದನ್ನು ಹೇಳುವ ಮುನ್ನ ಸ್ವಲ್ಪ ಬ್ಯಾಕ್‍ಗ್ರೌಂಡ್ ಹೇಳ್ಕೋಬೇಕು: ನನ್ನ ರೂಂಮೇಟು ವಿನೂಗೆ ಅಡುಗೆ ಮಾಡಿಕೊಂಡು ತಿನ್ನೋದು ಅಂದ್ರೆ ಒಂದು ಕ್ರೇಜು. ಈ ಮಳ್ಗದ್ದೆ ಊರೋರು ಮತ್ತೆ ನಡಳ್ಳಿ ಊರೋರು ತಿನ್ನೋದ್ರಲ್ಲಿ ಎತ್ತಿದ್ ಕೈಯಿ ಅಂತ ಕ್ಯಾಸನೂರು ಸೀಮೆಲೆಲ್ಲ ಹೆಸರುವಾಸಿ. ಅವರು ಎಷ್ಟ್ರ ಮಟ್ಟಿಗೆ ಹೆಸರುವಾಸಿ ಅಂದ್ರೆ, 'ಕ್ಯಾಸನೂರು ಸೀಮೆಯವ್ರು ತಿನ್ನೋದ್ರಲ್ಲಿ ಎತ್ತಿದ್ ಕೈ' ಅಂತ ಬೇರೆ ಸೀಮೆಯವ್ರೆಲ್ಲ ಮಾತಾಡ್ಕೋತಾರೆ! ಐ ಮೀನ್, ನಾ ಹೇಳಿದ್ದು ನಿಮ್ಗೆ ಅರ್ಥ ಆಯ್ತಲ್ಲ? ಮಳಲಗದ್ದೆ ಮತ್ತು ನಡಹಳ್ಳಿ ಊರಿನವರ ಭೋಜನ ಪ್ರಿಯತೆ ಸುತ್ನಾಲ್ಕು ಸೀಮೆಗಳಲ್ಲಿ ಕ್ಯಾಸನೂರು ಸೀಮೆಗೇ ಒಂದು ಹೆಸರನ್ನು ತಂದುಕೊಟ್ಟಿದೆ. ಲಗ್ನದ ಮನೆಗಳಲ್ಲಿ, ಗಂಡು ಅಥವಾ ಹೆಣ್ಣು ಕ್ಯಾಸನೂರು ಸೀಮೆಯದು ಅಂತಾದ್ರೆ ಛತ್ರದ ಅಡುಗೆ ಮನೆಯಲ್ಲಿ ಮಾತುಕತೆ ನಡೆದಿರುತ್ತದೆ: "ಹೋಯ್, ಬಪ್ಪೋರು ಯಾರು ಗೊತಿದಲ, ಕ್ಯಾಸ್ನೂರು ಸೀಮ್ಯೋರು. ಐಟಮ್ಮೆಲ್ಲ ಸ್ವಲ್ಪ್ ಸ್ವಲ್ಪ ಜಾಸ್ತಿ ಮಾಡವು!"

ಉಳಿದೆಲ್ಲ ವಿಷಯಗಳಲ್ಲಿ ಓಕೆಯಾದರೂ, ವಿನೂಗೆ ನಾನು ತಿನ್ನುವ ವಿಷಯದಲ್ಲಿ ಕಂಪನಿ ಅಲ್ಲವೇ ಅಲ್ಲ. ನಾನು ತಿನ್ನುವುದು ಗುಬ್ಬಿ ತಿಂದಂತೆ ತುದೀ ಬೆರಳುಗಳಲ್ಲಿ ನಾಲ್ಕು ಅಗುಳು. ಅವನದೋ ಇಡೀ ಹಸ್ತ ಬಳಸಿ ಬಳುಗಿ, ಸುರಿದು, ಕತ್ತರಿಸಿ ಮಾಡುವ ಊಟ. ಪ್ರತಿ ರಾತ್ರಿ ಊಟ ಮಾಡುವಾಗ ನಮ್ಮನೆಯಲ್ಲಿ ಇದೇ ಕಾರಣಕ್ಕೆ ಮಾತುಗಳು. ಆಫೀಸಿನಿಂದ ಹೊರಡುವುದು ಸ್ವಲ್ಪ ತಡವಾದರೂ ನಾನು ಅವನಿಗೆ ಫೋನ್ ಹಚ್ಚಿ 'ಏಯ್ ಹೋಟ್ಲಲ್ಲೆ ಊಟ ಮಾಡ್ಕೊಂಡು ಹೋಗೋಣ ಮಾರಾಯಾ' ಅನ್ನುತ್ತೇನೆ. ಅವನು ನನ್ನ ಮಾತನ್ನು ಅಲ್ಲೇ ತುಂಡರಿಸಿ 'ಮನೇಲೆ ಅಡುಗೆ ಮಾಡೋಣ ಬಾ. ನೀ ಕಾಯಿ ಹೆರ್ಕೊಡು ಸಾಕು. ನಾನು ಅಡುಗೆ ಮಾಡ್ತೀನಿ' ಅನ್ನುತ್ತಾನೆ. ನಾನು ಸ್ಟ್ರಾಂಗ್ ಕಾಫಿ, ಖಾರದ ಚಿಪ್ಸು, ಚಾಕ್ಲೇಟು, ಬಿಸ್ಕೇಟು, ಕೇಕು ಎಂದೇನೇನೋ ಹಾಳುಮೂಳನ್ನೆಲ್ಲ ತಿಂದುಕೊಂಡು ಓಡಾಡಿಕೊಂಡಿರುತ್ತೇನೆ. ಅವನು ಹಾಲು, ಕಷಾಯ, ಹಣ್ಣು, ಹಂಪಲು ಇತ್ಯಾದಿಗಳಲ್ಲಿ ಮುಳುಗಿರುತ್ತಾನೆ.

ಇಂಥಾ ವಿನೂ 'ಒಂದು ಭಾನ್ವಾರ ತಿಂಡಿಗೆ ವಡಪ್ಪೆ ಮಾಡವಲೇ ಭಟ್ಟಾ' ಅಂತ ಅವಾಗಿವಾಗ ಹೇಳುತ್ತಿದ್ದ. ಆಗೆಲ್ಲ ನಾನು ಆ ವಡಪ್ಪೆ ಮಾಡಲು ಬೇಕಾಗುವ ಸಮಯ, ಶ್ರಮಗಳನ್ನು ನೆನೆಸಿಕೊಂಡೇ ಒಳಗೊಳಗೇ ಹಿಂಜರಿಯುತ್ತಿದ್ದೆ. ಬಹುಶಃ ನನ್ನ ಹಿಂಜರಿಕೆಯನ್ನು ನೋಡೀ ನೋಡಿ ಬೇಸತ್ತ ವಿನು ತಾನೊಬ್ಬನೇ ಕೂತು ಇದಕ್ಕೆ ಪರಿಹಾರ ಏನೆಂದು ಯೋಚಿಸಿದ್ದಾನೆ. ಆಗ ಅವನಿಗೆ ನೆನಪಾದದ್ದೇ ಸಂದೀಪ! ವಿನಾಯಕನಿಗೆ ಸಂದೀಪನಿಗಿಂತ ಬೆಸ್ಟ್ ಪಾರ್ಟನರ್ ಮತ್ತಿನ್ಯಾರು ಸಿಗಲಿಕ್ಕೆ ಸಾಧ್ಯ? ಸರಿ, ಅದೊಂದು ಭಾನುವಾರ ಅವನು ನನ್ನ ಕಣ್ತಪ್ಪಿಸಿ (ಸಾರಿ, ಕಿವಿ) ಸಂದೀಪನಿಗೆ ಫೋನ್ ಮಾಡಿದ್ದಾನೆ. ಇಬ್ಬರೂ ಸೇರಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ: ವಡಪ್ಪೆ ಮಾಡಲೇಬೇಕು.

ಸಂದೀಪ ಸಂಜೆ ಆರರ ಹೊತ್ತಿಗೆ ನನಗೆ ಫೋನ್ ಮಾಡಿದ: "ಎಲ್ಲಾ ರೆಡಿನನಾ?"
"ಏಂತು?" ನಾನು ಕೇಳಿದೆ.
"ಅದೇ ವಡಪ್ಪೆ"
"ವಡಪ್ಪೆ?!"
"ಹಾಂ, ವಿನಾಯ್ಕ ಹೇಳಲ್ಯಾ? ಇವತ್ ನಿಮ್ಮನೆಲಿ ವಡಪ್ಪೆ ಮಾಡವು ಅಂತ ಆಯ್ದಲಾ.. ನಾ ಬರ್ತಾ ಇದ್ದಿ. ಹಿಟ್ಟು ಕಲ್ಸಿಟ್ಟಿರಿ!"
"!"

ವಿಶೇಷವೆಂದರೆ, ವಡಪ್ಪೆಯ ಬಗ್ಗೆ ಅಷ್ಟೊಂದು ನಿರಾಸಕ್ತಿ ಹೊಂದಿದ್ದ ನಾನೂ ಅದೇಕೋ ಇದ್ದಕ್ಕಿದ್ದಂತೆ ಹುಜುರತ್ತಾಗಿಬಿಟ್ಟೆ! ನಾನೂ-ವಿನು ಹೋಗಿ ಒಂದು ಕೇಜಿ ಅಕ್ಕಿ ಹಿಟ್ಟು ತಂದೆವು. ಈರುಳ್ಳಿ, ಹಸಿಮೆಣಸು, ತೆಂಗಿನಕಾಯಿ, ವಳ್ಳೆಣ್ಣೆ ತಂದು ಸಂದೀಪ ಬರುವ ಹೊತ್ತಿಗೆ ನಾವು ಸಕಲ ಶಸ್ತ್ರಸನ್ನದ್ಧರಾಗಿ ಕೂತಿದ್ದೆವು. ಸಂದೀಪ ಬಂದಮೇಲೆ ಈರುಳ್ಳಿ ಹೆಚ್ಚಲು ಕೂತೆವು. ಸಣ್ಣಕೆ ಹೆಚ್ಚಬೇಕು ಎಂದಾಯಿತು. ವಿನು ಸ್ವಲ್ಪ ಹೆಚ್ಚಿದ. ಅಂವ ಹೆಚ್ಚಿದ್ದು ದೊಡ್ಡಕಾತು ಅಂತ ಸಂದೀಪ ಸ್ವಲ್ಪ ಹೆಚ್ಚಿದ. ಅಂವ ಹೆಚ್ಚಿದ್ದೂ ದೊಡ್ಡಕಾತು ಅಂತ ನಾ ಹೆಚ್ಚಿದೆ. ನಾ ಹೆಚ್ಚಿದ್ದು ದೊಡ್ಡಕಾತು ಅಂತ ಹೇಳಲು ಯಾರೂ ಇರಲಿಲ್ಲವಾದ್ದರಿಂದ ಅನಿವಾರ್ಯವಾಗಿ ಕಣ್ಣೀರು ಸುರಿಸುತ್ತ ಪೂರ್ತಿ ಈರುಳ್ಳಿಯನ್ನು ನಾನೇ ಹೆಚ್ಚಬೇಕಾಯಿತು. ಆಮೇಲೆ ಹಸಿಮೆಣಸು ಕತ್ತರಿಸಿ ಹಾಕಿದೆವು. ಕಾಯಿಯನ್ನು ಪುಟ್ಟ ಪುಟ್ಟ ಚೂರುಗಳನ್ನಾಗಿ ಕತ್ತರಿಸಿ ಮಿಕ್ಸ್ ಮಾಡಿದೆವು. ನಂತರ ಸುಮಾರು ಅರ್ಧ ಕೆಜಿ ಹಿಟ್ಟು ಬೇಸಿನ್ನಿಗೆ ಹಾಕಿಕೊಂಡು ಅದಕ್ಕೆ ನೀರು-ಎಣ್ಣೆ ಹಾಕಿ, ಹೆಚ್ಚಿದ್ದ ಈರುಳ್ಳಿ, ಮೆಣಸಿನಕಾಯಿ, ತೆಂಗಿನಕಾಯಿ, ಸ್ವಲ್ಪ ಉಪ್ಪು ಎಲ್ಲಾ ಹಾಕಿ ಕಲಸಲು ಶುರು ಮಾಡಿದೆವು. ಸ್ವಲ್ಪ ಗಟ್ಟಿಯಾಯಿತು ಎನಿಸಿತು. ನೀರು ಹಾಕಿದೆವು. ನೀರು ಜಾಸ್ತಿಯಾಯಿತು ಎನ್ನಿಸಿತು. ಹಿಟ್ಟು ಹಾಕಿದೆವು. ಮತ್ತೆ ಗಟ್ಟಿಯಾಯಿತೆನ್ನಿಸಿ ನೀರು ಹಾಕಿದೆವು... ಹೀಗೇ ಜಾಸ್ತಿಯಾಗುತ್ತಾ ಕಮ್ಮಿಯಾಗುತ್ತಾ ಅಂತೂ ಹಿಟ್ಟು ಹದಕ್ಕೆ ಬಂತು ಎನಿಸುವಷ್ಟರಲ್ಲಿ ಹಿಟ್ಟಿನ ಪ್ಯಾಕೆಟ್ಟು ಖಾಲಿಯಾಗಿತ್ತು!

ಸರಿ, ಹಿಟ್ಟೇನೋ ಹದಕ್ಕೆ ಬಂತು, ಈಗ ಅದನ್ನು ತಟ್ಟಿ ಕಾವಲಿಯ ಮೇಲೆ ಹಾಕಬೇಕಲ್ಲ... ತಟ್ಟಲಿಕ್ಕೇನಿದೆ ನಮ್ಮ ಬಳಿ? ಸಂದೀಪನ ಬಳಿ ಬರುವಾಗ ಬಾಳೆ ಎಲೆ ತಗೋಂಬಾ ಎಂದಿದ್ದೆವು. ಎಲ್ಲೂ ಸಿಕ್ಕಲಿಲ್ಲವಂತೆ, ಅವನು ತಂದಿರಲಿಲ್ಲ. ಈಗ ಇರುವುದರಲ್ಲಿಯೇ ಏನರಲ್ಲಾದರೂ ಅಡ್ಜಸ್ಟ್ ಮಾಡಬೇಕಾಯ್ತಲ್ಲ.. ನಾವು ಮೊದಲು ಆಯ್ದುಕೊಂಡದ್ದು ಪ್ಲಾಸ್ಟಿಕ್ ಕವರುಗಳು!

ದಪ್ಪ ಪ್ಲಾಸ್ಟಿಕ್ ಕವರೊಂದನ್ನು ಹುಡುಕಿ, ನೀಟಾಗಿ ಕತ್ತರಿಸಿ ಅದರ ಮೇಲೆ ಒಂದು ಮುಷ್ಟಿ ಹಿಟ್ಟಿಟ್ಟು ತಟ್ಟಿದ್ದಾಯ್ತು. ತಟ್ಟಿದ ವಡಪ್ಪೆಗೆ ನಾಲ್ಕಲ್ಲ, ಐದು ತೂತು ಮಾಡಿದ್ದಾಯ್ತು. ಒಲೆಯ ಮೇಲೆ ಕಾವಲಿ ಕಾಯುತ್ತಿತ್ತು. ಸಂದೀಪ ಎತ್ತಿಕೊಟ್ಟ. 'ಕಾವ್ಲಿ ಮೇಲೆ ಹಾಕ್ತಿದ್ದಾಂಗೆ ಕವರ್ ಎತ್ಕ್ಯಳವು' ಎಂದು ಕಾಶನ್ ಕೊಟ್ಟ. 'ಏಯ್ ಎತ್ತಿರೆ ಸೈ ತಗಳಾ' ಎಂದು ಭಾರೀ ಹುರುಪಿನಿಂದ ನಾನೇ ಎತ್ತಿಕೊಂಡು ಹೋಗಿ ಕಾವಲಿ ಮೇಲೆ ಮಗುಚಿಯೇಬಿಟ್ಟೆ! ಆದರೆ ನಾನು ಕವರನ್ನು ಎತ್ತುವುದರೊಳಗೇ ಕಾದಿದ್ದ ಕಾವಲಿಗೆ ಪ್ಲಾಸ್ಟಿಕ್ಕೆಲ್ಲ ಮೆತ್ತಿಕೊಂಡು, ಕರಗಿ, ಹೊಗೆಯೆದ್ದು, ಕಮರು ಅಡುಗೆಮನೆಯನ್ನೆಲ್ಲ ತುಂಬಿಕೊಂಡು, ಸಂದೀಪ-ವಿನಾಯಕರ ಮೂಗು ತಲುಪಿ, ಅದನ್ನವರ ಮೆದುಳು ಪ್ರೊಸೆಸ್ ಮಾಡಿ, ಇದು ಪ್ಲಾಸ್ಟಿಕ್ ಸುಟ್ಟ ವಾಸನೆ ಎಂಬುದವರಿಗೆ ಹೊಳೆದು, 'ಏಯ್ ಎಂಥಾತಾ??' ಎಂದು ಕೇಳುವುದಕ್ಕೂ ನಾನು 'ಅಯ್ಯೋ ಹಿಡ್ಕಂಡೇಬುಡ್ಚ!' ಅನ್ನುವುದಕ್ಕೂ ಸರಿಹೋಯಿತು. ಆದರೂ ಅವರು ಅಡುಗೆಮನೆಗೆ ನುಗ್ಗುವುದರೊಳಗೆ ನಾನು ಹರಸಾಹಸ ಮಾಡಿ ಅಷ್ಟಿಷ್ಟು ಪ್ಲಾಸ್ಟಿಕ್ಕು ಎತ್ತಿ ಮರ್ಯಾದೆ ಉಳಿಸಿಕೊಳ್ಳುವ ಯತ್ನ ಮಾಡಿದೆ. ನಮ್ಮ ಮೊದಲ ವಡಪ್ಪೆ ಹೀಗೆ ವೇಸ್ಟಾಯಿತು. ಆಮೇಲೆ ಕಾವಲಿಯನ್ನು ನೆನೆಸಿ, ಕಾಯಿಸಿ, ಕೆರಚಿ, ವ್ಹಿಮ್ ಹಚ್ಚಿ ಏನೇನೋ ಮಾಡಿ ತೊಳೆದು ಕ್ಲೀನ್ ಮಾಡಿದೆವು.

ನಮ್ಮ ಮುಂದಿನ ಪ್ರಯೋಗಕ್ಕೆ ಕತ್ತರಿಸಲ್ಪಟ್ಟದ್ದು ರಟ್ಟುಗಳು! ಬಟ್ಟೆ ಕಂಪನಿಯವರು ನಮ್ಮ ಅಂಗಿಗಳಿಗೆ ರೇಟ್ ಹೆಚ್ಚಿಸಲು ಮುಚ್ಚಿ ಕೊಟ್ಟಿದ್ದ ಚಂದನೆಯ ಬಾಕ್ಸ್‍ಗಳನ್ನು ಕತ್ತರಿಸಿದೆವು. ಅದರ ಮೇಲೆ ಸಂದೀಪ ವಡಪ್ಪೆ ತಟ್ಟಿದ. ನಾನು ಎತ್ತಿಕೊಂಡು ಹೋಗಿ ಕಾವಲಿ ಮೇಲೆ ಹಾಕಿದೆ. ಆದರೆ ಈ ವಡಪ್ಪೆ ಹಿಟ್ಟಿಗೆ ಈ ಅಂಗಿ ಬಾಕ್ಸಿನ ಮೇಲೆ ಅದೇನೋ ಪ್ರೀತಿಯೋ ಏನೋ, ನಾನೆಷ್ಟೇ ಪರಿಪರಿಯಾಗಿ ಬೇಡಿಕೊಂಡರೂ ಅದು ರಟ್ಟಿನಿಂದ ಬಿಡಲೇ ಇಲ್ಲ! ಹಾಲಿನಲ್ಲಿ ಕೂತಿದ್ದ ಅವರು 'ಎಂಥಾತಾ ಎಂಥಾತಾ' ಎನ್ನುತ್ತಿದ್ದರು. ನಾನು ರಟ್ಟಿನಿಂದ ಹಿಟ್ಟು ಬಿಡಿಸುವುದರಲ್ಲೇ ಮಗ್ನನಾಗಿದ್ದೆ. ನನ್ನಿಂದ ಯಾವುದೇ ರಿಪ್ಲೇ ಬಾರದಿದ್ದುದನ್ನು ನೋಡಿ ಅವರೇ ಅಡುಗೆಮನೆಗೆ ಬಂದರು. ನನ್ನ ಕಷ್ಟದ ಬಗ್ಗೆ ಸಂತಾಪ ವ್ಯಕ್ತಪಡಿಸುವುದನ್ನು ಬಿಟ್ಟು ಮತ್ತಿನ್ನೇನೋ ಮಾಡುವುದು ಅವರಿಗೂ ಸಾಧ್ಯವಿರಲಿಲ್ಲ. ಹೀಗೆ ನಮ್ಮ ಎರಡನೇ ಪ್ರಯೋಗವೂ ಫೇಲಾಯಿತು.

ನಾವು ಈಗಾಗಲೇ ಹೇಗೆಹೇಗೋ ಅಷ್ಟಿಷ್ಟು ಬೆಂದು ತಯಾರಾಗಿದ್ದ ವಡಪ್ಪೆಯ ಚೂರುಗಳನ್ನು ಮೂವರೂ ಹಂಚಿಕೊಂಡು ತಿಂದಿದ್ದೆವು. ಅದು ಅದೆಷ್ಟು ರುಚಿಯಾಗಿಬಿಟ್ಟಿತ್ತು ಅಂದ್ರೆ, ನಾವು ವಡಪ್ಪೆ ಮಾಡುವುದನ್ನು ಎಟ್ಟೆನಿಕಾಸ್ಟ್ ಮುಂದುವರಿಸಲೇಬೇಕಿತ್ತು.

ಈ ಬಾರಿ ಹೊಸ ಪ್ರಯೋಗಕ್ಕೆ ಮುನ್ನಾಗುವ ಮೊದಲು ನಾವು ಸ್ವಲ್ಪ ಹೊತ್ತು ಯೋಚಿಸಿದೆವು. ಬಟ್ಟೆಯ ಮೇಲೆ ತಟ್ಟುವುದು ನಮ್ಮ ಐಡಿಯಾವಾಗಿತ್ತು. ವಿನಾಯಕನ ಹಳೆಯ ಶಾಲೊಂದನ್ನು ಕಪಾಟಿನಿಂದ ತೆಗೆದೆವು. 'ಮೊನ್ನೆಯಷ್ಟೇ ತೊಳೆದದ್ದು' ಅಂತ ವಿನು ಅಂದ. ನಾವು ನಂಬಿದೆವು. ಕತ್ತರಿಸಿ ಅದರ ಮೇಲೆ ಸಂದೀಪ ವಡಪ್ಪೆ ತಟ್ಟಿದ. ಎರಡೆರೆಡು ಬಾರಿ ಪ್ರಯೋಗಿಸಿ ಮುಖಭಂಗವಾಗಿದ್ದ ನಾನು ಈ ಬಾರಿ ಮುಗುಮ್ಮಾಗಿ ಪೇಪರ್ರೋದುತ್ತ ಕುಳಿತಿದ್ದೆ. ವಿನು ವಡಪ್ಪೆ ತಟ್ಟಲ್ಪಟ್ಟಿದ್ದ ಬಟ್ಟೆಯನ್ನು ಹಿಡಿದು ಅಡುಗೆಮನೆ ಹೊಕ್ಕ -ನಾನು ಮೊದಲ ಬಾರಿ ಹೊಕ್ಕಷ್ಟೇ ಗತ್ತಿನಿಂದ. ನಾನು ಪೇಪರ್ರನ್ನು ಕೈಯಲ್ಲಿ ಹಿಡಿದಿದ್ದೆನಷ್ಟೇ, ಕಿವಿಯೆಲ್ಲಾ ಇದೀಗ ಅಡುಗೆಮನೆಯಿಂದ ಕೇಳಿಬರಬಹುದಾದ ವಿನಾಯಕನ 'ಛೇ ತೂ' ಗಳನ್ನೇ ನಿರೀಕ್ಷಿಸುತ್ತಿತ್ತು. ಆದರೆ ನಾನು ನಿಬ್ಬೆರಗಾಗುವಂತೆ ವಿನು 'ಆಹಾಹ! ಏನು ಸಲೀಸಾಗಿ ಬಿಡ್ಚಲೇ! ನಾ ಆಗ್ಲೇನೇ ಹೇಳಿದ್ದಿ ಬಟ್ಟೆ ಮೇಲ್ ಹಾಕನ ಅಂತ' ಎನ್ನುತ್ತಾ ಖಾಲಿ ಬಟ್ಟೆಯನ್ನು ಹಿಡಿದು ಬಂದ. ನಾನು ಬೆಪ್ಪನಂತೆ ಮಿಕಿಮಿಕಿ ನೋಡಿದೆ. ಅಂತೂ ನಾವು ಮೂವರು ಗಂಡುಗಲಿಗಳ ಸಾಹಸದಿಂದ ಸುಂದರ ವಡಪ್ಪೆಯೊಂದು ಕಾವಲಿಯ ಮೇಲೆ ಬೆಂದು ಕೆಂಪಾಗಿ ಹೊರಬಂತು. ನಮಗೆ ದ್ರೌಪದಿಯನ್ನೇ ಗೆದ್ದಷ್ಟು ಖುಷಿ!

ಆಮೇಲೆಲ್ಲ ಸುಲಭವಾಯಿತು. ಒಂದರ ಮೇಲೊಂದು ವಡಪ್ಪೆ ತಟ್ಟಿದೆವು. ಐದೇ ನಿಮಿಷದಲ್ಲಿ ಕಾಯಿಚಟ್ನಿ ತಯಾರಾಯಿತು. ಊರಿಂದ ತಂದಿದ್ದ ಜೋನಿ ಬೆಲ್ಲವಂತೂ ಇತ್ತು. ತುಪ್ಪದ ಬಾಟ್ಲಿಯೂ ಇತ್ತು. ಆದರೆ ಪೂರ್ತಿ ವಡಪ್ಪೆ ತಟ್ಟಿಯಾಗಿ, ಅವು ಬೆಂದು, ನಾವು ಪ್ಲೇಟೆಲ್ಲ ಹಾಕಿಕೊಂಡು, ಮಧ್ಯದಲ್ಲಿ ಸಿದ್ಧವಾಗಿದ್ದ ವಡಪ್ಪೆ ಗುಡ್ಡೆ ಇಟ್ಟುಕೊಂಡು ಕೂರುವ ಹೊತ್ತಿಗೆ ಎರಡು ಎಡವಟ್ಟುಗಳಾಗಿದ್ದವು:

ಮಾಡುತ್ತ ಮಾಡುತ್ತಲೇ ನಾವು ಸುಮಾರು ವಡಪ್ಪೆಗಳನ್ನು ತಿಂದುಬಿಟ್ಟಿದ್ದರಿಂದ ನಮ್ಮೆಲ್ಲರ ಹೊಟ್ಟೆಯೂ ತುಂಬಿಹೋಗಿತ್ತು. ಮತ್ತು ಎಂಟು ಗಂಟೆಗೆ ಶುರು ಮಾಡಿದ್ದ ನಮ್ಮ ವಡಪ್ಪೆ ತಯಾರಿಕೆ ಫ್ಯಾಕ್ಟರಿ ಮುಗಿದಾಗ ರಾತ್ರಿ ಹನ್ನೊಂದೂವರೆ ಆಗಿತ್ತು! ಇನ್ನೆಲ್ಲಿಂದ ತಿನ್ನುವುದು? ಒಂದು ಕಡೆಗೆ ನಿದ್ರೆ ಎಳೆಯುತ್ತಿತ್ತು. ಸಂದೀಪ ಜೋಕಿನ ಮೇಲೆ ಜೋಕು ಹೇಳುತ್ತಿದ್ದ. ಚಟ್ನಿ ಬೇರೆ ಖಾರವಾಗಿತ್ತು. ನನಗಂತೂ ನಗುವುದೋ ಅಳುವುದೋ ಒಂದೂ ಗೊತ್ತಾಗದೆ, ತಿಂಗಳಿಗೆ ಕನಿಷ್ಟ ನಾಲ್ಕು ದಿನ ಸ್ವಲ್ಪವೂ ಬೇಸರಿಸಿಕೊಳ್ಳದೆ ಬೆಳಗ್ಗೆ ತಿಂಡಿಗೆ ವಡಪ್ಪೆ ಮಾಡುವ ಅಮ್ಮನನ್ನು ನೆನೆಸಿಕೊಳ್ಳುತ್ತಾ, ಚೂರು ಚೂರೇ ಮುರಿಯುತ್ತ ಮೆಲ್ಲತೊಡಗಿದೆ. ತಲಾ ಎರಡು ವಡಪ್ಪೆ ತಿನ್ನುವುದರೊಳಗೆ ನಾವೆಲ್ಲ ಸುಸ್ತು! 'ನಾಳೆ ತಿಂದ್ರಾತು ತಗಳಾ' ಎಂದು ಗೊಣಗಿಕೊಂಡು ಮಲಗಿದೆವು. ಸಂದೀಪನೂ ಆ ರಾತ್ರಿ ನಮ್ಮನೆಯಲ್ಲೇ ಉಳಿದ.

ಆದರೆ ಬೆಳಗ್ಗೆ ಮತ್ತೆ ಅದೇ ವಡಪ್ಪೆಯನ್ನು ತಿನ್ನುವ ಉತ್ಸಾಹ ಯಾರಿಗೂ ಇರಲಿಲ್ಲ. ಹೀಗಾಗಿ, ಆ ಉಳಿದ ವಡಪ್ಪೆಗಳು ನಮ್ಮನೆ ಗ್ಯಾಸ್ ಕಟ್ಟೆ ಮೇಲೆ ಮೂರ್ನಾಲ್ಕು ದಿನ ಕೂತಿದ್ದು, ಆಮೇಲೆ ಡಸ್ಟ್‍ಬಿನ್ನು ಸೇರಿ, ನಂತರ ಕಸ ಸಂಗ್ರಹಿಸುವವರ ತಳ್ಳುಗಾಡಿ ಹತ್ತಿ, ಆಮೇಲೆ ದೊಡ್ಡದೊಂದು ಲಾರಿಯಲ್ಲಿ ಕೂತು ರಾಜಧಾನಿಯ ಬೀದಿಯಲ್ಲಿ ಮೆರವಣಿಗೆ ಹೋಗಿ, ನಮಗ್ಯಾರಿಗೂ ಗೊತ್ತಿಲ್ಲದ ತಗ್ಗು ಪ್ರದೇಶವೊಂದರಲ್ಲಿ ಅಂತರ್ಧಾನವಾಗಿಹೋದವು.

Thursday, November 22, 2007

ಸಿಡಿಯಲಿರುವ ಪಟಾಕಿ

ಅಪ್ಪ ಪ್ರತಿ ಕವಳವನ್ನೂ ತುಂಬಾ ಅಚ್ಚುಕಟ್ಟಾಗಿ, ಕ್ರಮಬದ್ಧವಾಗಿ ಹಾಕುತ್ತಿದ್ದ. ಅದು ಅವನ ಬಾಯಲ್ಲಿರುವುದು ಐದೇ ನಿಮಿಷವಿರಬಹುದು, ಆದರೆ ಮೊದಲು ಒಂದಿಡೀ ಕೆಂಪಡಿಕೆ ಕತ್ತರಿಸಿ ನಾಲ್ಕು ಹೋಳು ಮಾಡಿ ಬಾಯಿಗೆ ಹಾಕಿಕೊಂಡು, ಅದು ಹಲ್ಲ ಮಿಕ್ಸರಿಗೆ ಸಿಕ್ಕು ನಲವತ್ನಾಲ್ಕು ಹೋಳಾಗಿ, ನಂತರ ಲೆಕ್ಕಕ್ಕೇ ಸಿಗದಷ್ಟು ಸಂಖ್ಯೆಯಲ್ಲಿ ಪುಡಿಪುಡಿಯಾಗುತ್ತಿರುವಾಗ ಅಪ್ಪ ಒಂದು ಸುಂದರ ಅಂಬಡೆ ಎಲೆಯ ತೊಟ್ಟು ಮುರಿದು, ನಂತರ ಅದರ ಕೆಳತುದಿಯನ್ನು ಮುರಿದು ತಲೆ ಮೇಲೆಸೆದುಕೊಂಡು, ಎಲೆಯ ಹಿಂಬದಿಯ ದಪ್ಪ ಗೀರುಗಳನ್ನು ನಾಜೂಕಾಗಿ ಚರ್ಮದಂತೆ ಬಿಡಿಸಿ ಎಳೆದು ತೆಗೆದು, ನಂತರ ಸುಣ್ಣದ ಕರಡಿಗೆಯಿಂದ ಸುಣ್ಣ ತೆಗೆದು ಎಲೆಯ ಬೆನ್ನಿಗೆ ನೀಟಾಗಿ ಸವರಿ, ಸಾಲಂಕೃತ ಎಲೆಯನ್ನು ಮಡಿಚಿ ಮಡಿಚಿ ಮಡಿಚಿ ಬಾಯಿಗಿಟ್ಟುಕೊಳ್ಳುತ್ತಿದ್ದ. ಅಡಿಕೆಯ ಕೆಂಪು ರಸ ತುಂಬಿದ್ದ ಬಾಯೊಳಗೆ ಈ ಅಂಬಡೆ ಎಲೆ ತನ್ನ ಹಸಿರು ಕಂಪಿನೊಂದಿಗೆ ಬೆರೆತು ಸಾಮ್ರಾಜ್ಯ ಸ್ಥಾಪಿಸುವ ವೇಳೆಯಲ್ಲಿ ಅಪ್ಪ ಕಪ್ಪು ತಂಬಾಕಿನ ಎಸಳಿನಿಂದ ಚೂರೇ ಚೂರನ್ನು ಚಿವುಟಿ ಮುರಿದು, ಅದನ್ನು ಅಂಗೈಯಲ್ಲಿ ಸ್ವಲ್ಪ ಸುಣ್ಣದೊಂದಿಗೆ ತಿಕ್ಕಿ ಸಣ್ಣ ಉಂಡೆ ಮಾಡಿ ಬಾಯಿಗೆಸೆದುಕೊಳ್ಳುತ್ತಿದ್ದ. ಅಪ್ಪನ ಈ ಕವಳ ತಯಾರಿಕಾ ಕ್ರಮವನ್ನೂ, ನಂತರ ಆ ಕವಳ ಅಪ್ಪನನ್ನು ಅನಿರ್ವಚನೀಯ ಬ್ರಹ್ಮಾನಂದದಲ್ಲಿ ಐದಾರು ನಿಮಿಷಗಳ ಕಾಲ ತೇಲಿಸುತ್ತಿದ್ದ ವಿಸ್ಮಯವನ್ನೂ ಕಣ್ಣು ಮಿಟುಕಿಸದೇ ನೋಡುತ್ತಾ ಪಕ್ಕದಲ್ಲಿ ಕೂತಿರುತ್ತಿದ್ದ ನನಗೂ ಅಪ್ಪ ಒಮ್ಮೊಮ್ಮೆ ಪುಟ್ಟ ಸಿಹಿಗವಳ ಮಾಡಿಕೊಡುತ್ತಿದ್ದ. 'ಅವಂಗೆಂತಕೆ ಕವಳ ಮಾಡ್ಕೊಡ್ತಿ? ಕವಳ ಹಾಕಿರೆ ನಾಲ್ಗೆ ದಪ್ಪ ಆಗ್ತು. ಕೊನಿಗೆ ಶಾಲೆಲಿ ಮಗ್ಗಿ ಹೇಳಕ್ಕರೆ ತೊದಲೋ ಹಂಗೆ ಆಗ್ತು ಅಷ್ಟೆ' ಎಂಬ ಅಮ್ಮನ ಅಸಹನೆಯ ಕಿಸಿಮಾತನ್ನು ಅಪ್ಪ ಕವಳ ತುಂಬಿದ ಮುಚ್ಚಿದ ಬಾಯಿಂದಲೇ, ಅದರಿಂದಲೇ ಮೂಡಿಸುತ್ತಿದ್ದ ಮುಗುಳ್ನಗೆ ಬೆರೆತ ಅನೇಕ ಭಾವಸಂಜ್ಞೆಗಳಿಂದಲೇ ಸಂಭಾಳಿಸುತ್ತಿದ್ದ. ಅಪ್ಪ ಮಾಡಿಕೊಟ್ಟ ಸಿಹಿಗವಳ ಹದವಾಗಿರುತ್ತಿತ್ತು, ನನ್ನ ಮೈಯನ್ನು ಬಿಸಿ ಬಿಸಿ ಮಾಡುತ್ತಿತ್ತು.

ಅಪ್ಪ ಸದಾ ನನ್ನನ್ನು ಬೆಚ್ಚಗಿಟ್ಟಿರಲು ಪ್ರಯತ್ನಿಸುತ್ತಿದ್ದ. ಅಥವಾ, ಅಪ್ಪನೊಂದಿಗೆ ನಾನಿರುತ್ತಿದ್ದ ಸಂದರ್ಭವೆಲ್ಲ ಬೆಚ್ಚನೆಯ ಹವೆಯೇ ಸುತ್ತ ಇರುತ್ತಿತ್ತು. ಅಪ್ಪ ನನ್ನ ಚಳಿಗೊಂದು ಕೌದಿಯಂತಿದ್ದ.

ಮಲೆನಾಡಿನ - ಹೊಳೆಯಾಚೆಗಿನ ಊರು ನಮ್ಮದು. ದಟ್ಟ ಕಾಡು - ಬೆಟ್ಟಗಳ ನಡುವಿನ, ಎಂಟೇ ಎಂಟು ಮನೆಗಳ ಪುಟ್ಟ ಊರು. ಒಂದು ಮನೆಗೂ ಮತ್ತೊಂದು ಮನೆಗೂ ಕೂಗಳತೆಯ ಅಂತರ. ಸದಾ ಮಳೆ, ಇಲ್ಲವೇ ಇಬ್ಬನಿ, ಅಪರೂಪಕೊಮ್ಮೆ ಉರಿಬಿಸಿಲು. ದೊಡ್ಡ ಭವಂತಿ ಮನೆಯ ಆಚೆ ಕಡೆ ಕೊಟ್ಟಿಗೆ, ಅದರ ಪಕ್ಕದಲ್ಲೇ ಬಚ್ಚಲುಮನೆ, ನಡುವೆ ಹಾವಸೆಗಟ್ಟಿದ - ಜಾರುವ ಅಂಗಳ. ಅಪ್ಪ-ನಾನು ಕವಳದ ತಬಕು, ಚಿಮಣಿ ಬುರುಡೆಯೊಂದಿಗೆ ಬೆಳಗ್ಗೆ ಎದ್ದಕೂಡಲೇ ಬಚ್ಚಲು ಒಲೆಗೆ ಬೆಂಕಿ ಒಟ್ಟಲು ಹೋಗುತ್ತಿದ್ದೆವು. ಒಟ್ಟು ಕುಟುಂಬವೆಂದಮೇಲೆ ಸ್ನಾನಕ್ಕೆ ಎಷ್ಟು ಬಿಸಿ ನೀರಿದ್ದರೂ ಬೇಕು. ಹಂಡೆಯ ನೀರನ್ನು ಸದಾ ಬಿಸಿಯಾಗಿಡುವ ಕೆಲಸ ಸಾಮಾನ್ಯವಾಗಿ ಅಪ್ಪನದ್ದೇ. ಜಂಬೆಮರದ ಚಕ್ಕೆಯನ್ನು ಒಲೆಯೊಳಗೆ ಕೂಡಿ, ಚಿಮಣಿ ಬುರುಡೆಯಿಂದ ಹಾಳೆಭಾಗ ಅಥವಾ ತೆಂಗಿನ ಗರಿಯ ತುದಿಗೆ ಬೆಂಕಿ ಹತ್ತಿಸಿಕೊಂಡು ಒಲೆಯೊಳಗೆ ಕೂಡುತ್ತಿದ್ದೆವು. ಹಂಡೆಯ ಅಂಡಿನಿಂದ ವಿಸ್ತರಿಸುತ್ತಿದ್ದ ಶಾಖಕ್ಕೆ ಅದರೊಡಲ ನೀರೆಲ್ಲ ಬಿಸಿ ಬಿಸಿ ಬಿಸಿಯಾಗಿ ಕಾಲು ಗಂಟೆಯೊಳಗೆ ಕೊತ ಕೊತ! ಬೆಂಕಿ ಒಟ್ಟಲು ಕೂತ ನನ್ನ ಚಳಿ ಹಾರಿಹೋಗಿ, ಅಡುಗೆಮನೆಗೆ ಓಡಿಬಂದು ತಿಂಡಿ ತಿಂದು ಸ್ನಾನ ಮಾಡಿ ಶಾಲೆಗೆ ಹೊರಡಲು ತಯಾರಾಗುತ್ತಿದ್ದೆ.

ಅಣ್ಣ ಮಹೇಶನನ್ನು ದೊಡ್ಡಪ್ಪ ಸೈಕಲ್ಲಿನಲ್ಲಿ ಕೂರಿಸಿಕೊಂಡು ಬಂದು ಶಾಲೆಗೆ ಬಿಟ್ಟು ಹೋಗುತ್ತಿದ್ದ. ನಾನು ಮಾತ್ರ ರೈತರ ಕೇರಿಯ ಹುಡುಗರೊಂದಿಗೆ ನಡೆದೇ ಹೋಗುತ್ತಿದ್ದೆ. ಮಹೇಶನಿಗೆ ಪ್ರತಿವರ್ಷವೂ ಹೊಸ ಯುನಿಫಾರಂ ಹೊಲಿಸುತ್ತಿದ್ದ ದೊಡ್ಡಪ್ಪ. ನನಗೆ ಎರಡು ವರ್ಷಕ್ಕೊಮ್ಮೆ. 'ನಿನ್ ಯುನಿಫಾರ್ಂ ಹೊಸದರಂಗೆ ಚನಾಗೇ ಇದ್ದಲಾ.. ನಮ್ಮನೆ ಮಾಣಿಗೆ ಒಂದು ಬಟ್ಟೆಯೂ ತಡಿಯದಿಲ್ಲೆ.. ಹರಕೈಂದ ನೋಡು' ಎನ್ನುತ್ತ ನನ್ನ ಬಳಿ ಮಹೇಶನ ಬಗ್ಗೆ ಸುಳ್ಳೇ ಸಿಟ್ಟು ವ್ಯಕ್ತಪಡಿಸುತ್ತಿದ್ದ. ಮಹೇಶನ ಈ ವರ್ಷದ ಪಠ್ಯ ಪುಸ್ತಕಗಳೇ ನನಗೆ ಮುಂದಿನ ವರ್ಷಕ್ಕೆ. ಪೇಟೆಯಿಂದ ತಂದ ಬಿಸ್ಕೇಟ್ ಪ್ಯಾಕನ್ನು ಮಹೇಶ ಜಗಲಿ ಬಾಗಿಲಿನಲ್ಲೇ ಕಸಿದುಕೊಂಡು ನನಗೆ ಎರಡೇ ಎರಡು ಕೊಟ್ಟು ಉಳಿದಿದ್ದನ್ನು ಅವನೇ ಗುಳುಂ ಮಾಡುತ್ತಿದ್ದ. ಹಾಗಂತ ನನಗೇನು ಮಹೇಶನ ಮೇಲೆ ಯಾವುದೇ ತರಹದ ದ್ವೇಷವಿರಲಿಲ್ಲ. ದಿನಾ ಸಂಜೆ ಒಟ್ಟಿಗೇ ಆಡಿಕೊಳ್ಳುತ್ತಿದ್ದೆವು. ಆದರೆ ಎಲ್ಲಾದರೊಮ್ಮೆ ದೊಡ್ಡಪ್ಪ-ದೊಡ್ಡಮ್ಮ ಹೀಗೆ ನನಗೂ-ಅವನಿಗೂ ಮಾಡುತ್ತಿದ್ದ ಆರೈಕೆಯಲ್ಲಿನ ವ್ಯತ್ಯಾಸ ನನ್ನ ಅರಿವಿಗೆ ಬೇಡವೆಂದರೂ ಬರುತ್ತಿತ್ತು.

ಅಮ್ಮ ಪ್ರತಿ ರಾತ್ರಿ ಕೋಣೆಯಲ್ಲಿ ಅಪ್ಪನೊಂದಿಗೆ ಗುಸುಗುಸು ಮಾಡುತ್ತಿದ್ದಳು. 'ಅಕ್ಕಯ್ಯ ಹಂಗೆ ಹಿಂಗೆ. ನಿಮಗೆ ಏನೂ ಗೊತ್ತಾಗ್ತಲ್ಲೆ, ಅಣ್ಣ ಅಂದ್ರೆ ದೇವ್ರು, ಅವ್ರು ಒಳಗಿಂದೊಳಗೇ ದುಡ್ಡು ಮಾಡಿಟ್ಕಳ್ತಿದ್ದ, ಅತ್ತೆಮ್ಮನೂ ಅವ್ರಿಗೇ ಸಪೋರ್ಟು, ಒಂದು ದಿನ ಹಿಸೆ ಮಾಡಿ ನಮ್ಮುನ್ನ ಬರಿಗೈಯಲ್ಲಿ ಹೊರಡುಸ್ತ ಅಷ್ಟೆ' ಇತ್ಯಾದಿ. ನನಗೆ ಪೂರ್ತಿ ಅರ್ಥವಾಗುತ್ತಿರಲಿಲ್ಲ. ಆದರೆ ಎಲ್ಲರ ಕಿವಿ ತಪ್ಪಿಸಿ ಅಪ್ಪನ ಬಳಿ ಅಮ್ಮ ಆಡುತ್ತಿದ್ದ ಈ ಗುಸುಗುಸು-ಪಿಸಪಿಸಗಳೇ ನನಗೆ ದೊಡ್ಡಪ್ಪ-ದೊಡ್ಡಮ್ಮ ನಮಗೇನೋ ಮೋಸ ಮಾಡುತ್ತಿದ್ದಾರೆ ಎಂಬಂತಹ ಸೂಚನೆ ಕೊಟ್ಟು, ಅವರೆಡೆಗಿನ ನನ್ನ ನೋಟಕ್ಕೆ ಗುಮಾನಿಯ ಕನ್ನಡಕ ತೊಡಿಸುತ್ತಿತ್ತು. ಅಪ್ಪ ಮಾತ್ರ ಸದಾ ಮೌನಮೂರ್ತಿ. ಅಮ್ಮನ ಈ ರಾತ್ರಿಯ ಗುಸುಗುಸುಗಳಿಗೆ 'ಥೋ ಸಾಕು ಸುಮ್ನಿರೇ. ನಂಗೆಲ್ಲ ಗೊತ್ತಿದ್ದು' ಎಂದು ಸಿಡುಕಿದಂತೆ ಉತ್ತರಿಸಿ ಅತ್ತ ತಿರುಗಿ ಮಲಗುತ್ತಿದ್ದ. ಅಮ್ಮ ಇತ್ತ ತಿರುಗಿ ಮಲಗುತ್ತಿದ್ದಳು. ನಾನು ಕಣ್ಮುಚ್ಚಿ ನಿದ್ರೆ ಹೋಗುತ್ತಿದ್ದೆ.

ಅಪ್ಪ, ಈ ರಾತ್ರಿಯ ಗುಸುಗುಸುಗಳಿಂದ ತಪ್ಪಿಸಿಕೊಂಡಿರಲೇನೋ ಎಂಬಂತೆ, ಅವಕಾಶ ಸಿಕ್ಕಿದಾಗಲೆಲ್ಲ, ಯಕ್ಷಗಾನ - ತಾಳಮದ್ದಲೆ ಎಂದು ಹೋಗಿಬಿಡುತ್ತಿದ್ದ. ನಮ್ಮ ಸೀಮೆಯದೇ ಆದ 'ಶ್ರೀ ಮೂಕಾಂಬಿಕಾ ಯಕ್ಷಗಾನ ಮಂಡಲಿ'ಯಲ್ಲಿ ಅಪ್ಪನೊಬ್ಬ ಮುಖ್ಯ ಭಾಗವತ. ಮರುದಿನ ರಜಾದಿನವಾಗಿದ್ದರೆ ನಾನೂ ಅಪ್ಪನೊಟ್ಟಿಗೆ ಹೋಗುತ್ತಿದ್ದೆ. ತುಮರಿ, ಬ್ಯಾಕೋಡು, ಸುಳ್ಳಳ್ಳಿ, ನಿಟ್ಟೂರು, ಸಂಪೆಕಟ್ಟೆ ಹೀಗೆ ತಿಂಗಳಿಕೆ ನಾಲ್ಕು ಬಯಲಾಟವೋ ತಾಳಮದ್ದಲೆಯೋ ಇದ್ದೇ ಇರುತ್ತಿತ್ತು. ಅಪ್ಪ ತಾಳ ಹಿಡಿದು ಮೈಕಿನ ಮುಂದೆ ಕೂತರೆ ಹಾರ್ಮೋನಿಯಂ ಎದುರು ನಾನು. ಕೈ ಸೋಲುವವರೆಗೆ ಅಥವಾ ನಿದ್ರೆ ಬರುವವರೆಗೆ ಹಾರ್ಮೋನಿಯಂನ ಬಾಟಿ ಎಳೆಯುವುದು. ನನಗೇನು ಯಕ್ಷಗಾನದ ಪದ್ಯಗಳಾಗಲೀ, ಪೂರ್ತಿ ಪ್ರಸಂಗವಾಗಲೀ ಅರ್ಥವಾಗುತ್ತಿತ್ತೆಂದಲ್ಲ, ಆದರೆ ಎಲ್ಲ ಕತೆಯೂ ಗೊತ್ತಿತ್ತು ಮತ್ತು, ಹಾಗೆ ಅಪ್ಪನ ಪಕ್ಕ ಸ್ವೆಟರು - ಜುಬ್ಬ ಹಾಕಿ ಕೂತಾಗ ತುಂಬಾ ಬೆಚ್ಚನೆ ಹಿತಾನುಭವವಾಗುತ್ತಿತ್ತು. ನಾಗೇಶಣ್ಣ ಚಂಡೆಯ ಮೇಲೆ ಆ ಎರಡು ಕಡ್ಡಿಗಳಿಂದ ಆಡುತ್ತಿದ್ದ ಆಟ, ಗಣಪಣ್ಣ ಮೃದಂಗದೊಂದಿಗೆ ತನ್ನ ಬೆರಳುಗಳಲ್ಲೇ ಮೂಡಿಸುತ್ತಿದ್ದ ಮಾಟ, ಸುರೇಶ ಶೆಟ್ಟಿ - ಮಂಜಪ್ಪಣ್ಣರ ಚಕ್ರಮಂಡಿ ಕುಣಿತಗಳೆಡೆಗೆ, ಆಟದ ಮಧ್ಯೆ ಮಧ್ಯೆ ನಮಗೆ ತಂದುಕೊಡುತ್ತಿದ್ದ ಬಿಸಿಬಿಸಿ ಚಹಾದಷ್ಟೇ ವಿಚಿತ್ರ ಸೆಳೆತವಿತ್ತು.

ಅಪ್ಪ ಈ ಯಕ್ಷಗಾನ - ತಾಳಮದ್ದಲೆಗಳಲ್ಲಿ ಸಿಗುತ್ತಿದ್ದ ನೂರು - ಇನ್ನೂರು ರೂಪಾಯಿ ಸಂಭಾವನೆಗಳಿಂದಾಗಿಯೋ ಏನೋ ತನ್ನ ಪಾಡಿಗೆ ತಾನು ನಿರುಮ್ಮಳವಾಗಿದ್ದುಬಿಡುತ್ತಿದ್ದ. ದೊಡ್ಡಪ್ಪ ಒಂದು ಕಡೆಯಿಂದ ಒಪ್ಪವಾಗಿ ನಮ್ಮೆಡೆಗೆ ಹೂಡುತ್ತಿದ್ದ ಸಂಚುಗಳು ಅವನಿಗೆ ತಿಳಿಯುತ್ತಲೇ ಇರಲಿಲ್ಲವೆನಿಸುತ್ತೆ. ಅಮ್ಮನಿಗೆ ತಿಳಿಯುತ್ತಿತ್ತು. ಆದರೆ ನನಗೆ ಮಾತ್ರ ಸದಾ ಅಪ್ಪನ ಮೇಲೆ ಸಿಡುಕುವ ಅವಳ ಬಗ್ಗೆ ಕೋಪವಿತ್ತು. ಅಪ್ಪ ತುಂಬಾ ಪಾಪ ಎನಿಸುತ್ತಿದ್ದ.

ಆ ವರ್ಷ ಜೋರು ಚಳಿಯಿತ್ತು. ಪ್ರತಿವರ್ಷಕ್ಕಿಂತ ಜಾಸ್ತಿಯೇ ಇದೆ ಅಂತ ಜನ ಮಾತಾಡಿಕೊಳ್ಳುತ್ತಿದ್ದರು. ಕಾರ್ತೀಕ ಮಾಸ. ಊರಲ್ಲೆಲ್ಲಾ ಅಡಿಕೆ ಸುಗ್ಗಿಯ ಭರಾಟೆ. 'ಮುಂದಿನ ವಾರ ನಮ್ಮನೇಲಿ ಕೊಯ್ಸವು. ಕೊನೆಕಾರಂಗೆ ಹೇಳಿಕ್ ಬೈಂದಿ' ಅಂತ ದೊಡ್ಡಪ್ಪ ಹೇಳುತ್ತಿದ್ದ. ಅವತ್ತು ತುಳಸೀಕಟ್ಟೆ ಕಾರ್ತೀಕವಿತ್ತು. ನಾನು-ಮಹೇಶ-ಅಮ್ಮ-ದೊಡ್ಡಮ್ಮ ಮನೆಮನೆಗೂ ಹೋಗಿ, ತುಳಸೀಕಟ್ಟೆ ಪೂಜೆಯಲ್ಲಿ ಪಾಲ್ಗೊಂಡು, ಮಂಗಳರಾತಿ ಸಮಯದಲ್ಲಿ ಝಾಂಗ್ಟೆ ಬಡಿದು, ಹಣತೆ ದೀಪಗಳ ಬೆಳಕಲ್ಲಿ ಕೋಸಂಬರಿ - ಚೀನಿಕಾಯಿ ಶೀಂಗಳ ಪನಿವಾರ ತಿಂದು, ರಾತ್ರಿ ಒಂಭತ್ತರ ಹೊತ್ತಿಗೆ ಮನೆ ತಲುಪುವಷ್ಟರಲ್ಲಿ ನಮಗೊಂದು ಆಘಾತ ಕಾದಿತ್ತು.

ಅಪ್ಪ ಎದೆನೋವು, ಹೊಟ್ಟೆಲೆಲ್ಲಾ ಸಂಕಟ, ಕರುಳು ಉರೀತಾ ಇದ್ದು ಎಂದೇನೇನೋ ಹೇಳುತ್ತಾ ಕೋಣೆಯಲ್ಲಿ ಮಲಗಿಕೊಂಡಿದ್ದ. ಅಮ್ಮ ಆತಂಕಗೊಂಡು ದೊಡ್ಡಪ್ಪನಿಗೆ ಹೇಳಿ, ಮನೆಯವರೆಲ್ಲಾ ಕೋಣೆಯಲ್ಲಿ ಸೇರಿದ್ದಾಯ್ತು. 'ಗ್ಯಾಸು ಆಗಿಕ್ಕು, ಸುಮ್ನೆ ಹೊಟ್ಟೆ ಮುರ್ವು ಕಾಣ್ತು, ಅದಾಗಿಕ್ಕು ಇದಾಗಿಕ್ಕು' ಅಂತೆಲ್ಲಾ ಒಬ್ಬರಿಗೊಬ್ಬರು ಹೇಳಿಕೊಳ್ಳುತ್ತಾ, ಏನೇನೋ ಕಷಾಯ ಅದೂ ಇದೂ ಕಾಸಿ ಬೀಸಿ ಅಪ್ಪನಿಗೆ ಕುಡಿಸಿದರು. ಕೊಲ್ಲೂರು ಮೂಕಾಂಬಿಕೆಗೆ ಕಾಯಿ ತೆಗೆದಿಟ್ಟದ್ದಾಯ್ತು. ಆದರೆ ರಾತ್ರಿ ಹನ್ನೊಂದರ ಹೊತ್ತಿಗೆ ಅಪ್ಪನ ನೋವು-ನರಳಾಟಗಳು ಜಾಸ್ತಿಯಾದವು. ದಡಬಡಾಯಿಸಿ, ಹೊಸಕೊಪ್ಪದಿಂದ ಸುಬ್ಬಣ್ಣನ ಜೀಪು ತರಿಸಿ, ಬ್ಯಾಕೋಡಿನ ಸರ್ಕಾರಿ ಆಸ್ಪತ್ರೆ ಕಾಂಪೌಂಡರಿನ ಬಳಿ ಅಪ್ಪನನ್ನು ಕರೆದೊಯ್ದದ್ದಾಯ್ತು. ದೊಡ್ಡಪ್ಪ, ಪಕ್ಕದಮನೆ ನಾಗೇಶಣ್ಣ, ಅಮ್ಮ, ಅಮ್ಮನನ್ನು ಬಿಟ್ಟಿರದ ನಾನೂ ಜೊತೆಗೆ. ಕಾಂಪೌಂಡರು ಅಲ್ಸರು, ಅಪೆಂಡಿಕ್ಸು ಎಂದೇನೇನೋ ಅಂದರು. ಇಲ್ಲಿ ಆಗುವುದಿಲ್ಲ, ಸಾಗರಕ್ಕೇ ಕರೆದೊಯ್ಯಬೇಕು ಎಂದರು. ಆಪರೇಶನ್ ಆಗಬೇಕು ಎಂದರು. ಸರಿ, ಬೆಳಗಿನ ಮೊದಲ ಲಾಂಚಿಗೇ ಹೋಗುವುದು ಎಂದಾಯಿತು. ಆದರೆ ರಾತ್ರಿ ಮೂರರ ಹೊತ್ತಿಗೆ, ಏನಾಯಿತು ಎಂತಾಯಿತು ಎಂಬುದು ಯಾರಿಗೂ ಸರಿಯಾಗಿ ಅರ್ಥವಾಗುವ ಮೊದಲೇ ಅಪ್ಪ ನರಳಾಡುವುದನ್ನೂ ಹೊರಳಾಡುವುದನ್ನೂ ನಿಲ್ಲಿಸಿ, ಕೊನೆಗೆ ಉಸಿರಾಡುವುದನ್ನೂ ನಿಲ್ಲಿಸಿಬಿಟ್ಟ. ಅಪ್ಪನ ಬಿಸಿ ದೇಹ ತಣ್ಣಗಾಗುತ್ತಾ ಆಗುತ್ತಾ, ಅಳು, ದಿಗ್ಭ್ರಮೆ, ಹೇಳಲಾರದ ನೋವು, ಮುಂದೇನೆಂದೇ ತಿಳಿಯದ ಮುಗ್ಧ-ಮೂಢತೆಯ ಸೂತಕ ನಮ್ಮನ್ನಾವರಿಸಿ, ಘೋರ ಚಳಿಯಂತೆ ಮೈ ಮರಗಟ್ಟಿಸಿಬಿಟ್ಟಿತು. ಅಪ್ಪನ ನಿಶ್ಚೇಷ್ಟಿತ ತಣ್ಣನೆ ದೇಹವನ್ನು ಜೀಪಿನ ಸದ್ದು ಬೆರೆತ ಮೌನದಲ್ಲಿ ಮನೆಗೆ ತಂದಾಗ, ತುಳಸೀಕಟ್ಟೆಯ ಸುತ್ತ ಹಚ್ಚಿಟ್ಟಿದ್ದ ದೀಪಗಳು ಆಗ ತಾನೇ ಆರಿದ್ದವು.

ನಂತರ ದೊಡ್ಡಪ್ಪನ ಯಜಮಾನಿಕೆ ಮತ್ತೂ ಜೋರಾಗಿದ್ದು, ವಿಧವೆ ಅಮ್ಮ ಬಾಯಿ ಬಿಡಲೂ ಆಗದಂತೆ ಕಟ್ಟಿ ಹಾಕಲ್ಪಟ್ಟಿದ್ದು, ಅದೇ ಕಲಕಿದ ವಾತಾವರಣದಲ್ಲೇ ನಾನು ಎಸ್ಸೆಸ್ಸೆಲ್ಸಿಯವರೆಗೆ ಓದಿದ್ದು, ಇನ್ನು ಅಲ್ಲಿರಲಾಗದೇ ಈ ಬೆಂಗಳೂರಿಗೆ -ಚಿಕ್ಕ ಮಾವನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಲಿಕ್ಕೆ ಬಂದದ್ದು ...ಏನೆಲ್ಲ ಆಗಿ ಹೋಯಿತು! ಅಮ್ಮ ಮೊನ್ನೆ ಫೋನ್ ಮಾಡಿದ್ದಳು. 'ನಿನಗೆ ಮುಂದಿನ ತಿಂಗಳಿಗೆ ಹದಿನೆಂಟು ವರ್ಷ ತುಂಬುತ್ತದೆ. ಊರಿಗೆ ಬಾ. ದೊಡ್ಡಪ್ಪನ ಬಳಿ ಮಾತಾಡು. ಒಪ್ಪಲಿಲ್ಲ ಎಂದರೆ ಅವನ ಮೇಲೆ ದಾವೆ ಹೂಡೋಣ. ನಿನ್ನ ದೊಡ್ಡ ಮಾವ ಲಾಯರ್ ಹತ್ರ ಎಲ್ಲಾ ಮಾತಾಡಿದಾನಂತೆ. ಲಾಯರು ಕೇಸು ಗೆದ್ದುಕೋಡೋಣ ಎಂದಿದಾರಂತೆ. ಅಲ್ಲಿ ಇದ್ದು ನೀನು ಸಾಧಿಸೋದು ಅಷ್ಟರಲ್ಲೇ ಇದೆ. ನಮಗೆ ಸೇರಬೇಕಾದ ಆಸ್ತೀನ ನಾವು ಪಡೆದುಕೊಂಡು, ಒಂದು ಮನೆ-ಗಿನೆ ಕಟ್ಟಿಕೊಂಡು ಆರಾಮಾಗಿರೋಣ. ನಮಗೆ ಯಾರ ಹಂಗೂ ಬ್ಯಾಡ...' ಅಮ್ಮ ನಾನಾಗೇ ಫೋನಿಡುವವರೆಗೂ ಮಾತಾಡುತ್ತಲೇ ಇದ್ದಳು.

ಇಲ್ಲಿ ಇವತ್ತು ಮತ್ತೆ ತುಳಸೀಕಟ್ಟೆ ಕಾರ್ತೀಕ. ಅಂದರೆ ಅಪ್ಪ ಸತ್ತು ಇವತ್ತಿಗೆ ಹತ್ತು ವರ್ಷವಾಯ್ತು. ಹೊರಗಿನಿಂದ ಒಂದೇ ಸಮನೆ ಪಟಾಕಿಗಳ ಶಬ್ದ ಕೇಳಿಬರುತ್ತಿದೆ. ಪ್ರತಿ ಮನೆಯ ಎದುರೂ ಬಿರುಸಿನಕುಡಿಕೆಯ ಹೂಕುಂಡಗಳು. ತುಳಸೀಪಾಟಿನ ಸುತ್ತ ದೀಪಗಳು. ಒಂದು ನೆಲ್ಲಿರೆಂಬೆ. ಸುರುಸುರುಬತ್ತಿ ಹಿಡಿದ ಪುಟ್ಟ ಮಕ್ಕಳು... ಸಂಭ್ರಮವೋ ಸಂಭ್ರಮ.

ನಾನು ಯೋಚಿಸುತ್ತಿದ್ದೇನೆ: ಬೆಂಗಳೂರಿಗೆ ಬಂದು ಎರಡು ವರ್ಷವಾಯಿತು. ಇಷ್ಟಿಷ್ಟೇ ದುಡ್ದು ಮಾಡಿಕೊಳ್ಳುತ್ತಾ, ಇಲ್ಲಿ ನನ್ನದೇ ಆದ ಬದುಕೊಂದನ್ನು ರೂಪಿಸಿಕೊಳ್ಳುವ ಛಲ ಮೈದಾಳುತ್ತಿದೆ. ಬೆಂಗಳೂರು ಬದುಕುವುದನ್ನು ಕಲಿಸಿಬಿಟ್ಟಿದೆ. ಇಷ್ಟೆಲ್ಲ ಪ್ರಬುದ್ಧವಾಗಿ ಯೋಚಿಸುವಷ್ಟು ದೊಡ್ಡವ ನಾನಾದದ್ದಾದರೂ ಹೇಗೆ ಎಂದು ನನಗೇ ಒಮ್ಮೊಮ್ಮೆ ಆಶ್ಚರ್ಯವಾಗುತ್ತದೆ. ಈ ಇಂತಹ ಸಂದರ್ಭದಲ್ಲಿ ಮತ್ತೆ ಊರಿಗೆ ಹೋಗಿ, ದೊಡ್ಡಪ್ಪನೆದುರು ಮಂಡಿಯೂರಿ ಕೂತು ಹಿಸೆ ಕೇಳುವುದು, ಅವನು ಒಪ್ಪದಿದ್ದರೆ ಅವನ ಮೇಲೇ ದಾವೆ ಹೂಡುವುದು ಎಲ್ಲಾ ಬೇಕಾ? ಜೊತೆಗೇ ಆಟವಾಡುತ್ತಿದ್ದ ಮಹೇಶನ ಜೊತೆಗೂ ಹಲ್ಲು ಮಸೆಯುವಂತಹ ದ್ವೇಷ ಕಟ್ಟಿಕೊಳ್ಳುವುದು ಬೇಕಾ? ಬೇಡವೆಂದು ಬಿಟ್ಟುಬಿಟ್ಟರೆ ಅಮ್ಮನ ಈ ಬೇಗುದಿಗೆ ಬಿಡುಗಡೆಯೆಂದು? ನಾನು ದುಡಿದು ದುಡ್ದು ಮಾಡಿ, ನನ್ನ ಕಾಲಮೇಲೆ ನಾನು ನಿಂತು, ಅಮ್ಮನನ್ನೂ ಸಾಕುವ, ಸಂಸಾರ ಸಂಭಾಳಿಸುವ ಹಂತ ತಲುಪಲಿಕ್ಕೆ ಇನ್ನೂ ಎಷ್ಟು ವರ್ಷ ಬೇಕಾಗಬಹುದು? ಇಷ್ಟೆಲ್ಲ ಸ್ವಾಭಿಮಾನ ಮೆರೆದು ಸಾಧಿಸುವುದಾದರೂ ಏನಿದೆ? ನ್ಯಾಯಯುತವಾಗಿ ನನಗೆ ಬರಬೇಕಾದ ಪಾಲನ್ನು ನಾನು ಕೇಳಿ ಪಡೆಯುವುದರಲ್ಲಿ ತಪ್ಪೇನಿದೆ? ಅದಿಲ್ಲದಿದ್ದರೆ ಜನರಿಂದ 'ಮಗನೂ ಅಪ್ಪನಂತೆ ದಡ್ಡ' ಎಂಬ ಹೀಯಾಳಿಕೆಗೆ ಗುರಿಯಾಗಬೇಕಾಗುತ್ತದಲ್ಲವೇ? ಹಾಗಾದರೆ ಈಗ ಊರಿಗೆ ಹೋಗಿ ದೊಡ್ಡಪ್ಪನೆದುರು ಪಟಾಕಿ ಸಿಡಿಸಿಯೇ ಬಿಡಲೇ?

ನಾನು ಸುಮ್ಮನೆ ನಿಂತಿರುವುದನ್ನು ನೋಡಿದ ನಮ್ಮನೆ ಓನರ್ರಿನ ಮೊಮ್ಮಗ ನಿಶಾಂತ್ ಓಡಿ ಬಂದು 'ಅಣ್ಣಾ ನೀನೂ ಪಟಾಕಿ ಹಚ್ಚು ಬಾ' ಎಂದು ಕೈ ಹಿಡಿದು ಎಳೆಯುತ್ತಿದ್ದಾನೆ. 'ನಾನು ಬರಲೊಲ್ಲೆ; ಇವತ್ತು ನನ್ನ ಅಪ್ಪನ ತಿ..' ಎಂದೇನೋ ಹೇಳಹೊರಟವನು ಅಲ್ಲಿಗೇ ತಡೆದು ಸುಮ್ಮನೆ ನಿಶಾಂತ್ ಜೊತೆ ಹೋಗುತ್ತೇನೆ. ಪಟಾಕಿಯ ಬತ್ತಿಯನ್ನು ಚೂರೇ ಸುಲಿದು, ಊದುಬತ್ತಿಯಿಂದ ಕಿಡಿ ತಾಕಿಸುತ್ತೇನೆ. ದೂರ ಬಂದು ನಿಶಾಂತ್ ಜೊತೆ ನಿಲ್ಲುತ್ತೇನೆ. ನಿಶಾಂತ್ ಎರಡೂ ಕೈಗಳಿಂದ ಕಿವಿ ಮುಚ್ಚಿಕೊಂಡು ಇನ್ನೇನು ಸಿಡಿಯಲಿರುವ ಆ ಪಟಾಕಿಯನ್ನೇ, ಅದರ ಬತ್ತಿಗುಂಟ ಸಾಗುತ್ತಿರುವ ಬೆಂಕಿಯ ಕಿಡಿಯನ್ನೇ ನೋಡುತ್ತಿದ್ದಾನೆ... ನನಗೆ ಹತ್ತು ವರ್ಷಗಳ ಹಿಂದೆ ಅಪ್ಪನ ಪಕ್ಕ ಹೀಗೇ ನಿಂತಿರುತ್ತಿದ್ದ ನನ್ನ ಚಿತ್ರದ ಕಲ್ಪನೆ ಕಣ್ಣಮುಂದೆ ಬರುತ್ತದೆ...

[ಈ ಕತೆ 'ಮಯೂರ' ಮಾಸಿಕದ ಮೇ 2008ರ ಸಂಚಿಕೆಯಲ್ಲಿ ಪ್ರಕಟವಾಗಿದೆ.]

Wednesday, November 14, 2007

ಆಮೆ-ಮೊಲ

ಮೂರನೇ ಕ್ಲಾಸಿನಲ್ಲೋ ನಾಲ್ಕನೇ ಕ್ಲಾಸಿನಲ್ಲೋ ಇದ್ದ ಈ ನೀತಿಕತೆಯನ್ನು ನಿಮ್ಮ ಕನ್ನಡ ಮೇಷ್ಟ್ರು ತುಂಬಾ ಚೆನ್ನಾಗಿ ಪಾಠ ಮಾಡಿ ಹೇಳಿರುತ್ತಾರೆ. ಮಾಡಿರದಿದ್ದರೂ, ಆ ಪಾಠದೊಂದಿಗಿದ್ದ ಓಡುತ್ತಿದ್ದ ಮೊಲ-ಚಿಪ್ಪಿನೊಳಗಿಂದ ಕತ್ತು ಹೊರಹಾಕಿ ಹಿಂದೆ ನೋಡುತ್ತಿದ್ದ ಆಮೆಯ ಬಣ್ಣ ಬಣ್ಣದ ಚಿತ್ರಗಳು ನಿಮಗೆ ನೆನಪಿರುತ್ತವೆ. ಮರೆತು ಹೋಗಿದ್ದಿದ್ದರೂ ನಾನೀಗ ಹೇಳಿದಮೇಲೆ ನೆನಪಾಗಿರುತ್ತದೆ. ನೀವಿದನ್ನು ಓದಿರದಿದ್ದರೂ ನಿಮ್ಮ ಮಗನೋ, ಪಕ್ಕದ ಮನೆ ಪುಟ್ಟಿಯೋ ಶಾಲೆಯಿಂದ ಬಂದೊಡನೆ 'ಇವತ್ತು ಮಿಸ್ಸು ಆಮೆ-ಮೊಲದ ಕಥೆ ಹೇಳಿದ್ರು.. ಎಷ್ಟು ಚೆನ್ನಾಗಿತ್ತು.. ನಿಂಗೊತ್ತಾ ಅದು?' ಎನ್ನುತ್ತಾ ಮೊಲದಂತೆಯೇ ಮುದ್ದಾಗಿ-ಪೆದ್ದಾಗಿ ಪಿಳಿಪಿಳಿ ಕಣ್ಣು ಬಿಡುತ್ತಾ ಕೇಳಿದಾಗ ನೆನಪಾಗುತ್ತಿತ್ತು. ಮರೆತು ಹೋಗಿದ್ದರೂ, ನಿನಪಿದ್ದರೂ, ಹಿಂದೆಲ್ಲೂ ಕೇಳಿರದಿದ್ದರೂ, ಓದಿರದಿದ್ದರೂ ನೀವೀ ಕತೆಯನ್ನು ಮತ್ತೊಮ್ಮೆ ಓದಲಿಕ್ಕೇನು ಅಡ್ಡಿಯಿಲ್ಲ. ಏಕೆಂದರೆ, ಈ ಕತೆ ತುಂಬಾ ಚೆನ್ನಾಗಿದೆ.

ಆಮೆ ಮತ್ತು ಮೊಲದ ಮಧ್ಯೆ ಒಮ್ಮೆ ಓಟದ ಸ್ಪರ್ಧೆ ಏರ್ಪಟ್ಟಿತ್ತು. ಎಲ್ಲರಿಗೂ ಗೊತ್ತಿರುವಂತೆಯೇ ಮೊಲದ ಓಟಕ್ಕೆ ವೇಗ ಹೆಚ್ಚು. ಆಮೆ ಅಂಗುಲ ಸಾಗಲೂ ಗಂಟೆ ಬೇಕು. ಕಾಡಿನ ಪ್ರಾಣಿಗಳೆಲ್ಲ ಈ ತಮಾಷೆಯನ್ನು ನೋಡಲು ಸೇರಿದ್ದವು. ಸಿಂಹರಾಜನೂ ಬಂದಿದ್ದ. ಮಂತ್ರಿ ನರಿ ಶಿಳ್ಳೆ ಊದುತ್ತಿದ್ದಂತೆಯೇ ಓಟ ಶುರುವಾಯಿತು.

ಮೊಲ ಜೋರಾಗಿ ಓಡಿತು. ಸುಮಾರು ದೂರ ಓಡಿಯಾದ ಮೇಲೆ ಹಿಂದೆ ತಿರುಗಿ ನೋಡಿದರೆ ಆಮೆ ಇನ್ನೂ ಎಷ್ಟೋ ಹಿಂದಕ್ಕೆ ನಿಧಾನವಾಗಿ ಬರುತ್ತಿದೆ. ಮೊಲ ಮುಖದಲ್ಲಿ ಗರ್ವದ ಗಹಗಹ ನಗುವನ್ನು ತಂದುಕೊಂಡು, ಒಮ್ಮೆ ಆಕಳಿಸಿ, 'ಅದು ಇಲ್ಲಿಗೆ ಬರುವುದರೊಳಗೆ ಒಂದು ನಿದ್ರೆ ಮಾಡಿ ತೆಗೆಯುವಾ' ಅಂದುಕೊಂಡು, ಅಲ್ಲೇ ಮರದ ಬುಡದಲ್ಲಿ ಮಲಗಿಬಿಟ್ಟಿತು. ಬಿಸಿಲಿನ ಜಳಕ್ಕೋ ಏನೋ, ಆಲಸಿ ಮೊಲಕ್ಕೆ ಜೋರು ನಿದ್ರೆ ಬಂದುಬಿಟ್ಟಿತು.

ಸುಮಾರು ಹೊತ್ತಿನ ಮೇಲೆ ಚಪ್ಪಾಳೆ, ಶಿಳ್ಳೆಗಳ ಶಬ್ದ ಕೇಳಿದಂತಾಗಿ ಮೊಲಕ್ಕೆ ಎಚ್ಚರಾಗಿ ಕಣ್ತೆರೆದು ನೋಡಿದರೆ ಆಮೆ ಹಾಗೇ ನಿಧಾನವಾಗಿ ನಡೆಯುತ್ತ ಓಡುತ್ತ ಮಲಗಿದ್ದ ಮೊಲವನ್ನು ದಾಟಿ ಮುಂದೆ ಹೋಗಿ ಆಗಲೇ ಗುರಿಯ ಸಮೀಪ ತಲುಪಿಬಿಟ್ಟಿದೆ...! ಮೊಲ ಹೌಹಾರಿ ಎದ್ದೆನೋ ಬಿದ್ದೆನೋ ಎಂಬಂತೆ ಓಡತೊಡಗಿತು. ಆದರೆ ಅದು ಏದುಸಿರು ಬಿಡುತ್ತಾ ಗುರಿ ತಲುಪುವುದರೊಳಗೆ ಆಮೆ ಗೆರೆ ದಾಟಿ ಪಂದ್ಯದಲ್ಲಿ ಗೆದ್ದಾಗಿತ್ತು.

ಈ ಕತೆಯ ನೀತಿ ನಿಮಗೆ ಗೊತ್ತಿದ್ದದ್ದೇ. ಸೋಮಾರಿತನ ಒಳ್ಳೇದಲ್ಲ; ಯಾರನ್ನೂ ಕಡೆಗಣಿಸಬಾರದು; ಕಷ್ಟ ಪಟ್ಟರೆ ಎಂಥವರನ್ನು ಬೇಕಾದರೂ ಸೋಲಿಸಬಹುದು; ಇತ್ಯಾದಿ.

ಈ ಕತೆ ಇಲ್ಲಿಗೇ ನಿಲ್ಲುವುದಿಲ್ಲ; ಮುಂದುವರೆಯುತ್ತದೆ. ಈ ಮುಂದುವರಿಕೆಯನ್ನು ನಾನು ಓದಿದ್ದು ವಿಶ್ವೇಶ್ವರ ಭಟ್ಟರ 'ನೂರೆಂಟು ಮಾತು' ಅಂಕಣದಲ್ಲಿ, ನಾಲ್ಕಾರು ವರ್ಷಗಳ ಹಿಂದೆ. ಇಂಗ್ಲೆಂಡಿನಲ್ಲಿ ಬೆಕರ್(?) ಅಂತ ಒಬ್ಬನಿದ್ದಾರಂತೆ. ಬೆಕರ್‌ನ ಕೆಲಸವೆಂದರೆ ಕತೆ ಹೇಳುವುದು. ಜಗತ್ತಿನ ಅತಿರಥ ಮಹಾರಥರೆಲ್ಲ ಈತನ ಸ್ಪೂರ್ತಿ ನೀಡುವ ಕತೆ ಕೇಳಲು ಬರುತ್ತಾರಂತೆ. ಕತೆ ಕೇಳಿ, ಕೇಳಿದಷ್ಟು ಡಾಲರ್ ದುಡ್ಡು ಕೊಟ್ಟು ಹೋಗುತ್ತಾರಂತೆ.

ಬೆಕರ್‌ನ ಬಳಿ ಅಂದು ಲಂಡನ್ನಿನ ದೊಡ್ಡ ಉದ್ಯಮಿಯೊಬ್ಬ ಬಂದಿದ್ದ. ತನ್ನದೇ ಉದ್ಯಮದಲ್ಲಿನ ಮತ್ತೊಂದು ಕಂಪನಿ ತನಗೆ ಕೊಡುತ್ತಿರುವ ಪೈಪೋಟಿಯನ್ನು ಎದುರಿಸಲು ಅವನಿಗೆ ನಾಲ್ಕು ಸ್ಪೂರ್ತಿಭರಿತ ಮಾತು ಬೇಕಿತ್ತು. ಬೆಕರ್ ಇದೇ ಆಮೆ-ಮೊಲದ ಕತೆ ಹೇಳಲು ಶುರು ಮಾಡಿದ. ಈ ಕತೆ ಆ ಉದ್ಯಮಿಗೂ ಗೊತ್ತಿತ್ತು. 'ಅಯ್ಯೋ, ಇದೇನು ಗೊತ್ತಿರೋ ಕತೆಯನ್ನೇ ಹೇಳುತ್ತಿದ್ದಾನಲ್ಲ..' ಅಂದುಕೊಂಡ. ಬೆಕರ್ ಕತೆಯನ್ನು ಮುಂದುವರೆಸಿದ:

ಅವಮಾನಿತ ಮೊಲ ಆಮೆಯನ್ನು ಮತ್ತೊಮ್ಮೆ ಪಂದ್ಯಕ್ಕೆ ಆಹ್ವಾನಿಸುತ್ತದೆ. ಆಮೆ ಒಪ್ಪಿಕೊಳ್ಳುತ್ತದೆ. ಪ್ರಾಣಿಗಳೆಲ್ಲವೂ ಸೇರುತ್ತವೆ. ನರಿ ಶಿಳ್ಳೆ ಊದುತ್ತದೆ. ಓಟ ಶುರುವಾಗುತ್ತದೆ. ಈ ಬಾರಿ ಮೊಲ ಸ್ವಲ್ಪವೂ ಆಲಸ್ಯ ತೋರದೆ, ಯಾವುದೇ 'ಛಾನ್ಸ್' ತೆಗೆದುಕೊಳ್ಳದೆ ಜೋ..ರಾಗಿ ಓಡಿ ಗುರಿ ತಲುಪಿ ಕಿಲೋಮೀಟರುಗಟ್ಟಲೆ ಅಂತರದಿಂದ ಆಮೆಯನ್ನು ಸೋಲಿಸುತ್ತದೆ.

ಈ ಕತೆಯ ನೀತಿಯೆಂದರೆ, ನಮಗಿರುವ ಸಾಮರ್ಥ್ಯವನ್ನು ನಾವು ಸಂಪೂರ್ಣವಾಗಿ ಬಳಸಿಕೊಂಡರೆ ಗೆಲುವು ನಮ್ಮದೇ.

ಕತೆ ಅಷ್ಟಕ್ಕೇ ನಿಲ್ಲುವುದಿಲ್ಲ; ಮುಂದುವರೆಯುತ್ತದೆ:

ಆಮೆಗೆ ತನ್ನ ಸೋಲನ್ನು ಒಪ್ಪಿಕೊಂಡು ಸುಮ್ಮನಿರುವ ಮನಸ್ಸಿಲ್ಲ. ಅದಕ್ಕೆ ಹೇಗಾದರೂ ಮಾಡಿ ಮೊಲವನ್ನು ಸೋಲಿಸಲೇಬೇಕೆಂಬ ತುಡಿತ. ಅದೊಂದು ಪ್ಲಾನ್ ಮಾಡುತ್ತದೆ. ಮೊಲವನ್ನು ಮತ್ತೆ ಸ್ಪರ್ಧೆಗೆ ಆಹ್ವಾನಿಸುತ್ತದೆ.

ಕಾಡಿನ ಪ್ರಾಣಿಗಳಿಗೆಲ್ಲ ಇದೆಂಥಾ ತಮಾಷೆಯಪ್ಪಾ, ಈ ಆಮೆಗೆ ಬುದ್ಧಿಯಿಲ್ಲ ಅಂತ ಅಪಹಾಸ್ಯ. ಆದರೂ ಎಲ್ಲವೂ ಸೇರುತ್ತವೆ. ಸ್ಪರ್ಧೆ ಶುರುವಾಗುತ್ತದೆ. ಮೊಲ ಓಡತೊಡಗುತ್ತದೆ. ಓಡಿ ಓಡಿ ಓಡಿ ಸುಮಾರು ದೂರ ಬಂದಮೇಲೆ ಅದಕ್ಕೆ ಅರಿವಾಗುತ್ತದೆ: ಓಟದ 'ಟ್ರಾಕ್' ಬದಲಾಗಿಬಿಟ್ಟಿದೆ! ಮಧ್ಯದಲ್ಲೊಂದು ಹೊಳೆ ಅಡ್ಡ ಬಂದುಬಿಟ್ಟಿದೆ! ಈ ಹಿಂದಿನ ಸ್ಪರ್ಧೆಗಳಲ್ಲಿ ಬರೀ ನೆಲದ ಮೇಲೆ ಓಟವಿರುತ್ತಿತ್ತು. ತಾನು ಮೋಸ ಹೋದದ್ದು ಮೊಲಕ್ಕೆ ಅರಿವಾಗುತ್ತದೆ. ಅದು ಇಡೀ ಹೊಳೆಯನ್ನು ದಡದಗುಂಟ ಸುತ್ತುವರೆದು ಓಡಿ ಬಂದು ಗುರಿಯನ್ನು ತಲುಪುವುದರೊಳಗೆ ಆಮೆ ಸಲೀಸಾಗಿ ಹೊಳೆಯನ್ನು ಈಜಿ ಆಚೆ ದಡ ಸೇರಿ ಗುರಿಯನ್ನು ತಲುಪುತ್ತದೆ. ವನ್ಯಮೃಗಗಳೆಲ್ಲ ಆಮೆಯ ಬುದ್ಧಿವಂತಿಕೆಯನ್ನು ಮೆಚ್ಚಿ ಹರ್ಷೋದ್ಗಾರ ಮಾಡುತ್ತವೆ.

ಈ ಕತೆಯ ನೀತಿಯೆಂದರೆ ಗೆಲ್ಲಲೇಬೇಕು ಎಂದಾದರೆ ಹೇಗಾದರೂ ಗೆಲ್ಲಬಹುದು. ಆಟದಲ್ಲಿ ಮೋಸ ಸಾಮಾನ್ಯ ಮತ್ತು ಕ್ಷಮ್ಯ! ಪ್ರತೀ ಆಟಕ್ಕೂ ಮುಂಚೆ ಅದರ ನಿಯಮಾವಳಿಗಳನ್ನು ಸ್ಪರ್ಧಿಗಳು ಚರ್ಚಿಸಿ ಮನದಟ್ಟು ಮಾಡಿಕೊಂಡಿರಬೇಕು. ಇತ್ಯಾದಿ.

ಕತೆ ಇಲ್ಲಿಗೂ ನಿಲ್ಲುವುದಿಲ್ಲ! ಮತ್ತೂ ಮುಂದುವರೆಯುತ್ತದೆ:

ಮೊಲಕ್ಕೆ ಅರಿವಾಗುತ್ತದೆ, ನಮ್ಮಿಬ್ಬರಿಗೂ ಅವರವರದ್ದೇ ಆದ ಸಾಮರ್ಥ್ಯಗಳಿವೆ. ನಾವಿಬ್ಬರೂ ಹೀಗೆ ಸ್ಪರ್ಧೆ ಮಾಡಿಕೊಂಡು ಇದ್ದರೆ ಒಮ್ಮೆ ನಾನು ಸೋಲುತ್ತೇನೆ, ಇನ್ನೊಮ್ಮೆ ಆಮೆ ಸೋಲುತ್ತದೆ. ಅಷ್ಟೇ ವಿನಃ ಮತ್ತೇನೂ ಪ್ರಯೋಜನವಿಲ್ಲ. ಹೀಗೆ ಯೋಚಿಸಿದ ಮೊಲ ಆಮೆಯ ಮನೆಗೆ ಹೋಗಿ ಒಪ್ಪಂದ ಮಾಡಿಕೊಳ್ಳುತ್ತದೆ. ಇಬ್ಬರೂ ಫ್ರೆಂಡ್ಸ್ ಆಗುತ್ತವೆ. ಮತ್ತೆ ತಮ್ಮ ಮಧ್ಯೆ ಸ್ಪರ್ಧೆ ನಡೆಯುತ್ತಿರುವುದಾಗಿ ಕಾಡಿನಲ್ಲಿ ಡಂಗುರ ಸಾರುತ್ತವೆ.

ಇಷ್ಟೊತ್ತಿಗಾಗಲೇ ಆಮೆ-ಮೊಲದ ಓಟದ ಸ್ಪರ್ಧೆ ಕಾಡಿನಲ್ಲೆಲ್ಲಾ ಜನಪ್ರಿಯ (ಪ್ರಾಣಿಪ್ರಿಯ?)ವಾಗಿರುತ್ತದೆ. ಎಲ್ಲಾ ಕಡೆ ಬ್ಯಾನರ್ರು ಕಟ್ಟಲಾಗುತ್ತದೆ. ರಾಜ ಸಿಂಹ ತನ್ನ ಹೆಂಡತಿ ಮಕ್ಕಳ ಸಮೇತ ಬಂದು ಗ್ಯಾಲರಿಯಲ್ಲಿ ಕೂರುತ್ತದೆ. ಟ್ರಾಕಿನ ಇಕ್ಕೆಲಗಳಲ್ಲೂ ಪ್ರಾಣಿಗಳು ಓಟವನ್ನು ವೀಕ್ಷಿಸಲು ನಿಂತಿರುತ್ತವೆ. ಕ್ಷಣಗಣನೆ ಆರಂಭವಾಗುತ್ತದೆ. ನರಿ ವಿಶಲ್ ಊದುತ್ತದೆ.

ಮೊದಲೇ ಗುಪ್ತವಾಗಿ ಮಾತಾಡಿಕೊಂಡಿದ್ದಂತೆ, ಶಿಳ್ಳೆ ಶಬ್ದ ಕೇಳುತ್ತಿದ್ದಂತೆಯೇ ಆಮೆ ಮೊಲದ ಬೆನ್ನೇರಿ ಕೂರುತ್ತದೆ. ಆಮೆ ಜೋರಾಗಿ ಓಡುತ್ತದೆ. ಮಧ್ಯದಲ್ಲಿ ಹೊಳೆ ಬರುತ್ತದೆ. ಆಗ ಆಮೆ ಕೆಳಗಿಳಿದು ತನ್ನ ಬೆನ್ನ ಮೇಲೆ ಮೊಲವನ್ನು ಕೂರಿಸಿಕೊಳ್ಳುತ್ತದೆ. ಹೊಳೆ ದಾಟಿಯಾದ ಮೇಲೆ ಮತ್ತೆ ಮೊಲದ ಬೆನ್ನಮೇಲೆ ಆಮೆ ಕೂರುತ್ತದೆ. ಜೋರಾಗಿ ಓಡಿ, ವೀಕ್ಷಕರೆಲ್ಲ ಬೆಕ್ಕಸ ಬೆರಗಾಗುವಂತೆ, ಸ್ಪರ್ಧೆ ಶುರುವಾದ ಕೆಲವೇ ನಿಮಿಷಗಳಲ್ಲಿ ಆಮೆ-ಮೊಲ ಎರಡೂ ಒಟ್ಟಿಗೇ ಗುರಿ ತಲುಪುತ್ತವೆ.

ಕತೆಯ ನೀತಿಯನ್ನು ಅರಿತ ಲಂಡನ್ನಿನ ಆ ವ್ಯಾಪಾರಿ ವಾಪಸು ತೆರಳಿ ಆ ಮತ್ತೊಂದು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಾನೆ. ಎರಡೂ ಕಂಪನಿಗಳೂ ವಿಲೀನವಾಗಿ, ಮುಂದಿನ ವರ್ಷ ದುಪ್ಪಟ್ಟು ಲಾಭ ಗಳಿಸಿ, ಲಂಡನ್ನಿನ ವಿಖ್ಯಾತ ಕಂಪನಿಗಳಾಗುತ್ತವೆ.

ಕತೆ, ಯಕ್ಚುವಲಿ ಇಲ್ಲಿಗೆ ಮುಗಿಯಿತು. ಆದರೆ ನನಗೆ ಇತ್ತೀಚೆಗೊಂದು ಎಸ್ಸೆಮ್ಮೆಸ್ ಬಂದಿತ್ತು. ಈಗ ನೀವು ಈ ಸೀಕ್ವೆಲ್ಲುಗಳನ್ನೆಲ್ಲ ಒಂದು ಕ್ಷಣ ಮರೆತು, ಒರಿಜಿನಲ್ ಆಮೆ-ಮೊಲದ ಕತೆಯನ್ನಷ್ಟೇ ನೆನಪಿಟ್ಟುಕೊಳ್ಳಿ. ನನಗೆ ಬಂದ ಎಸ್ಸೆಮ್ಮೆಸ್ಸು ಹೀಗಿದೆ:

ಆಮೆ ಮತ್ತು ಮೊಲ ಸಿಇಟಿ ಪರೀಕ್ಷೆಗೆ ಕಟ್ಟಿದ್ದವು. ಇಬ್ಬರೂ ಸಮಾನ ಬುದ್ಧಿವಂತರು, ಇಬ್ಬರ ಕೈಯಲ್ಲೂ ಸಮಾನ ಅಂಕಗಳಿದ್ದ ಅಂಕಪಟ್ಟಿಗಳಿದ್ದವು. ಆದರೆ ಕೊನೆಯಲ್ಲಿ, ಆಮೆಗೆ ಸಿಇಟಿಯಲ್ಲಿ ಸೀಟು ಸಿಗುತ್ತದೆ; ಮೊಲಕ್ಕೆ ಸಿಗುವುದಿಲ್ಲ. ಯಾಕೆ?

ಉ: ಯಾಕೇಂದ್ರೆ, ಆಮೆಗೆ ಸ್ಪೋರ್ಟ್ಸ್ ಕೋಟಾದಲ್ಲಿ ಸೀಟ್ ಸಿಕ್ತು! (ಹಿಂದೆ ಆಮೆ ಓಟದ ಸ್ಪರ್ಧೇಲಿ ಗೆದ್ದಿದ್ದು ನೆನಪಿದೆಯಲ್ವಾ?) :-)

ನನಗೆ ಈ ಎಸ್ಸೆಮ್ಮೆಸ್ಸು ಇಷ್ಟವಾಗಿ ನನ್ನೊಂದಿಷ್ಟು ಗೆಳೆಯ-ಗೆಳತಿಯರಿಗೆ ಫಾರ್ವರ್ಡ್ ಮಾಡಿದೆ. ಅವರಲ್ಲಿ ಒಬ್ಬ ಗೆಳತಿ ರಿಪ್ಲೇ ಮಾಡಿದ್ದಳು:

ಓಹ್ ಅದಕ್ಕೇನಾ ಮೊಲ ಬೇಜಾರಾಗಿ 'ಮುಂಗಾರು ಮಳೆ' ಫಿಲ್ಮಲ್ಲಿ ದೇವದಾಸ್ ಆಗಿ ಗಣೇಶನ ಜೊತೆ ಸೇರಿಕೊಂಡಿದ್ದು..? ಅಂತ!

ಕತೆಯೊಂದು ಮುಂದುವರೆಯುವ ಬಗೆ ಕಂಡು ನನಗೆ ಅಚ್ಚರಿ!

(ಈ 'ಕತೆಗಳ ಕತೆ'ಯನ್ನು ಓದುವಾಗ ನೀವೂ ಮಗುವಾಗಿದ್ದಿರಿ ಅಂತ ನಂಗೊತ್ತು. ನಿಮಗೆ ಮಕ್ಕಳ ದಿನಾಚರಣೆಯ ಶುಭಾಷಯಗಳು!)

Tuesday, November 06, 2007

ದೀಪವಾಗಬೇಕಿದೆ...

ಜನಿಯ ನೆರವಿಗೆ ಅದೆಷ್ಟೊಂದು ಚಿಕ್ಕೆಗಳು..! ದಿಟ್ಟಿ ಹಾಯಿಸಿದಷ್ಟೂ ವಿಸ್ತರಿಸಿರುವ, ದಿಗಂತದಂತೆ ಕಂಡರೂ ಅಂತ್ಯವಲ್ಲದ ಈ ಅಗಾಧ ನಭದ ಅಧಿಪತಿ ಚಂದಿರನ ಒಡ್ಡೋಲಗದಲ್ಲಿ ಅದೆಷ್ಟು ಕೋಟಿ ಕೋಟಿ ತಾರೆಗಳ ಒಟ್ಟಿಲು..! ಸುತ್ತ ಕವಿದಿರುವ ತಿಮಿರದ ಕಣಗಳ ಅಪ್ಪುಗೆಗೆ ಸಿಲುಕಿ ಕುಳಿತಿರುವ ನನ್ನ ನೆರವಿಗೆ ಬರುವ ಯಾವ ಕರುಣೆಯನ್ನೂ ತೋರದೇ ಅಲ್ಲಲ್ಲೇ ತಮ್ಮ ತಮ್ಮ ಗ್ರಹಗಳಿಗೆ ಬೆಳಕು ನೀಡುತ್ತಾ ನಿಶ್ಚಿಂತೆಯಿಂದಿರುವ ನಕ್ಷತ್ರಗಳು..! ಚಂದ ತುಂಬಿದ ಚಂದ್ರಮ, ಚಿಕ್ಕೆ ತುಂಬಿದ ಗಗನ, ಕನಸು ತುಂಬಿದ ನಿದ್ರೆ ...ಎಂದೇನೇನೋ ಸುಳ್ಳೇ ಭರವಸೆಗಳನಿತ್ತು ಸಂಜೆಯಾಗುತ್ತಿದ್ದಂತೆಯೇ ಮತ್ಯಾವುದೋ ದೇಶದವರಿಗೆ ಬೆಳಗು ಮಾಡಲು, ಅಲ್ಲಿಯ ಹಕ್ಕಿಗಳನ್ನು ಗೂಡಿನಿಂದ ಪುರ್ರನೆ ಹಾರಿಸಲು ಓಡಿ ಹೋದ ಸೂರ್ಯ... ಬೇಗ ಬಾ ಭೂಪಾ, ಈ ಅಂಧಃಕಾರವ ಕಳೆ...

ಹತ್ತಿರದಲ್ಲೊಂದು ಹಣತೆ... ಈ ನಿಶೆಯ ಮೌನದಲ್ಲಿ ಏನೋ ಗೊಣಗುತ್ತಿದೆಯಲ್ಲ.. ಏನದು..? ನಾನು ಕಿವಿಗೊಟ್ಟು ಕೇಳುತ್ತೇನೆ: ಸೂರ್ಯನಿಗಾಗಿ ಕಾಯಬೇಡ. ಅವನ ಬೆಳಕನ್ನೇ ಪ್ರತಿಫಲಿಸುತ್ತಾ, ನಾಲ್ಕು ದಿನ ನಿನ್ನ ಮನಸೂರೆಗೊಳ್ಳುವಂತೆ ಕಂಗೊಳಿಸುತ್ತಾ, ಕೊನೆಗೆ ಅಮಾವಾಸ್ಯೆಯ ನೆಪವೊಡ್ಡಿ ಮಾಯವಾಗಿಬಿಡುವ ಚಂದ್ರನನ್ನು ನಂಬಬೇಡ. ಮಿನುಗು ತಾರೆಗಳ ಕಣ್ಮಿಣುಕನ್ನು ದೃಷ್ಟಿಸುತ್ತಾ ಏನನ್ನೋ ಹುಡುಕುತ್ತಾ ಹಂಬಲಿಸಬೇಡ. ಬಾ, ನನ್ನೊಡಲಿಗೆ ಒಂದೇ ಒಂದು ಮಿಳ್ಳೆ ಎಣ್ಣೆಯೆರೆ.. ಬತ್ತಿಯ ತುದಿಗೆ ಬೆಂಕಿ ಸೋಕಿಸು ಸಾಕು.. ನಿನ್ನ ಸುತ್ತ ಕವಿದಿರುವ ಈ ತಮಕ್ಕೆ ನಾನು ಬುದ್ಧಿ ಹೇಳುತ್ತೇನೆ.. ರಾತ್ರಿಯಿಡೀ ನಿನ್ನ ಮನೆಯನ್ನು ಬೆಳಗುತ್ತೇನೆ.. ದಾರಿ ತೋರುತ್ತೇನೆ.. ನಾಳೆಯೆಂಬ ಹೊಸ ಜಗತ್ತಿಗೆ ಕರೆದೊಯ್ಯುತ್ತೇನೆ...

ದೀಪದ ಸ್ಪೂರ್ತಿಭರಿತ ಮಾತುಗಳು ನನ್ನಲ್ಲೊಂದು ಅಂತಃಶಕ್ತಿಯನ್ನು ತುಂಬುತ್ತವೆ... ನಾನು ಎದ್ದುಹೋಗಿ ಎಣ್ಣೆ ತಂದೆರೆದು, ಬತ್ತಿಯ ಕುಡಿಗೆ ಬೆಂಕಿ ತಾಕಿಸುತ್ತೇನೆ.. ಮಂದ್ರದ ಸ್ವರದಂತೆ ಕೋಣೆಯನ್ನೆಲ್ಲಾ ತುಂಬಿಕೊಳ್ಳುತ್ತದೆ ಬೆಳಕು... ನನ್ನ ಕಣ್ಗಳಲ್ಲಿ ಉಲ್ಲಾಸದ ಲಾಸ್ಯ ಮಿನುಗಿದ್ದು ದೀಪದ ಎಣ್ಣೆಯಲ್ಲಿ ಪ್ರತಿಫಲಿಸುತ್ತದೆ... ಧನ್ಯತಾ ಭಾವದಿಂದ ದೀಪದೆಡೆಗೊಂದು ಮುಗುಳ್ನಗೆಯನ್ನು ಚೆಲ್ಲುತ್ತೇನೆ.

ಥಟ್ಟನೆ ಹಣತೆಯ ಬುಡ ಕಣ್ಣಿಗೆ ಬಿದ್ದರೆ ಅಲ್ಲಿ ಕತ್ತಲೆ! "ಏನಿದು ದೀಪಾ, ನಿನ್ನ ಬುಡದಲ್ಲೇ ಕತ್ತಲೆ?!" ನಾನು ಆತಂಕಗೊಂಡು ಕೇಳುತ್ತೇನೆ. ದೀಪದ್ದು ನಿರುಮ್ಮಳ ಉತ್ತರ: "ಹ್ಮ್..! ಅದರ ಬಗ್ಗೆ ನನಗೆ ಕಾಳಜಿಯಿಲ್ಲ. ನನ್ನ ತಳದ ತಮದ ಬಗ್ಗೆ ಚಿಂತಿಸುತ್ತಾ ಕೂರುವುದು ನನ್ನ ಕೆಲಸವಲ್ಲ. ಒಡಲಿನ ಎಣ್ಣೆ ಬತ್ತುವವರೆಗೆ, ಬತ್ತಿ ಸುಟ್ಟು ಭಸ್ಮವಾಗುವವರೆಗೆ ಪರರ ಮನೆಯನ್ನು ಬೆಳಗುವುದಷ್ಟೇ ನನ್ನ ಕರ್ತವ್ಯ... ನನ್ನ ಬೆಳಕಿನ ದೆಸೆಯಿಂದ ಯಾರೋ ನಲಿದಾಡುವುದನ್ನು ನೋಡುವುದೇ ನನ್ನ ಜ್ವಾಲೆಯ ಬಳುಕಿಗೆ ಹಿತದ ಆಮ್ಲಜನಕದ ಸೇಚನ... ಅಷ್ಟು ಸಾಕು ನನಗೆ... ನನ್ನ ಬಗ್ಗೆ ನಿನಗೆ ಚಿಂತೆ ಬೇಡ. ಹೋಗು, ನಿನ್ನ ಕೆಲಸ ಮಾಡಿಕೋ."

ಅಲ್ಲಿಂದ ಕದಲದೇ ನನ್ನನ್ನೇ ನಾನು ನೋಡಿಕೊಳ್ಳುತ್ತೇನೆ: ಸದಾ ನನಗೆ ಯಾರಾದರೂ ಬೆಳಕು ನೀಡುತ್ತಿರಬೇಕು. ಹಗಲಿಡೀ ಬೆಳಕಾಗಿದ್ದರೂ ಸಂಜೆ ಹೊರಟು ನಿಂತಾಗ ಸೂರ್ಯನೆಡೆಗೆ ಕೋಪ.. ಆಗಾಗ ಮರೆಯಾಗುತ್ತಾನೆಂದು ಚಂದ್ರನ ಮೇಲೆ ಆರೋಪ.. ಬೆಳಕನ್ನೇ ಕೊಡುವುದಿಲ್ಲವೆಂದು ನಕ್ಷತ್ರಗಳ ಬಗ್ಗೆ ಅಸಮಾಧಾನ.. ಎಲ್ಲಾ ಮುಗಿದಮೇಲೆ ಹಣತೆಯೆದುರು ನನ್ನ ದುಮ್ಮಾನ.. ಹೌದೂ, ನಾನ್ಯಾರಿಗೆ ಬೆಳಕಾಗಿದ್ದೇನೆ?

ಎಷ್ಟೊತ್ತಿಗೂ ನನ್ನ ಬಗ್ಗೆಯೇ ಚಿಂತೆ ನನಗೆ. ಎಲ್ಲಿ ಯಾರು ಅಳುತ್ತಿದ್ದರೂ ನನ್ನ ಮನೆಯಲ್ಲಿ ನಗುವಿರಬೇಕು. ಎಲ್ಲಿ ಯಾರು ಹಸಿವಿನಿಂದ ಸಾಯುತ್ತಿದ್ದರೂ ನನ್ನ ಬಾಳೆಯಲ್ಲಿ ಮೃಷ್ಟಾನ್ನವಿರಬೇಕು. ಎಲ್ಲಿ ಚಂಡಮಾರುತ ಬೀಸಿ ಎಲ್ಲಾ ನಿರಾಶ್ರಿತರಾಗಿದ್ದರೂ ನನ್ನ ಮನೆಯ ಫ್ಯಾನು ತಿರುಗುತ್ತಿರಬೇಕು. ಎಲ್ಲಿ ಯಾರು ಸತ್ತು ಉಳಿದವರ ಬದುಕು ಅಂಧಃಕಾರದಲ್ಲಿ ನರಳುತ್ತಿದ್ದರೂ ನನ್ನ ಸುತ್ತ ಬೆಳಕಿರಬೇಕು... ನಾನು ನನ್ನ ಸ್ವಾರ್ಥ ಬಿಟ್ಟು ಈ ದೀಪದಂತೆ ಬೇರೆ ಯಾರಿಗಾಗಿಯೋ ಬೆಳಗುವುದು ಯಾವಾಗ? ಜೋಪಡಿಯ ಮಕ್ಕಳೆಯಲ್ಲ ಕತ್ತಲ ಬಾಗಿಲಲ್ಲಿ ನಿಂತು ಮಿಕಮಿಕನೆ ನೋಡುತ್ತಿರುವಾಗ ನಾನು ಸುರುಸುರುಬತ್ತಿಯಿಂದ ಬಿರುಸಿನಕುಡಿಕೆಗೆ ಬೆಂಕಿ ತಾಗಿಸಿ ಗೆಳೆಯರೊಟ್ಟಿಗೆ ಕೇಕೆ ಹಾಕುವುದು ಎಷ್ಟರ ಮಟ್ಟಿಗೆ ಸರಿ?

ದೀಪಾವಳಿಯ ಎದುರಿನಲ್ಲಿ ಒಂದು ಹೊಸ ಸಂಕಲ್ಪ ಮಾಡಬೇಕಿದೆ. ಆರಿಹೋದ ಮನೆಗಳ ದೀಪಗಳನ್ನು ಬೆಳಗಬೇಕಿದೆ. ಕತ್ತಲೆ ತುಂಬಿದ್ದಲ್ಲಿ ಹಣತೆ ಒಯ್ದು ಹಚ್ಚಿಡಬೇಕಿದೆ. ಯಾರದೋ ಬಾಳಿನ ಕತ್ತಲೆಗೆ ನಾನೇ ದೀಪವಾಗುವ ಪ್ರಯತ್ನ ಮಾಡಬೇಕಿದೆ. ಕನಿಷ್ಟ, ಆ ಜೋಪಡಿಯ ಮಗುವಿನ ಕೈಗೊಂದು ಸುರುಸುರುಬತ್ತಿ ಕೊಟ್ಟು ಅದರ ಕಂಗಳಲ್ಲಾಗುವ ಭೀತ-ಸಂಭ್ರಮದ ನಕ್ಷತ್ರಪಾತವನ್ನು ಕತ್ತಲಲ್ಲಿ ನಿಂತು ನೋಡುತ್ತಾ ನಾನು ಕಳೆದುಹೋಗಬೇಕಿದೆ...

ನಿಮಗೆಲ್ಲಾ ದೀಪಾವಳಿಯ ಹಾರ್ದಿಕ ಶುಭಾಷಯಗಳು...