Friday, January 15, 2021
ಹರ್
Friday, November 13, 2020
ಉರಿದು ಮುಗಿದ ರವಿಯು
ಬಹುಶಃ 1998-99ನೇ ಸಾಲು. ನಾನು ಒಂಬತ್ತನೇ ತರಗತಿಯಲ್ಲಿದ್ದೆ. ಗಂಟಲು ಒಡೆಯುವ ವಯಸ್ಸು. ಆಗ ನಮ್ಮೂರ ಭಾಗದಲ್ಲಿ ಬಹಳವಾಗಿ ಚಾಲ್ತಿಯಲ್ಲಿದ್ದ ಸ್ವಾಮೀಜಿಯೊಬ್ಬರ ಬಗ್ಗೆ 'ಹಾಯ್ ಬೆಂಗಳೂರ್'ನಲ್ಲಿ ತನಿಖಾ ವರದಿ ಬಂದಿತ್ತು. ಸಹಜವಾಗಿಯೇ ಅಪ್ಪ ಸಾಗರದಿಂದ ಬರುವಾಗ ಪತ್ರಿಕೆಯನ್ನು ತಂದಿದ್ದ. ಆಗ ಆ ಸ್ವಾಮೀಜಿಗಳಿಗೆ ಎಷ್ಟು ಅನುಯಾಯಿಗಳಿದ್ದರೆಂದರೆ, ಮನೆಗೆ ಬಂದ ಪತ್ರಿಕೆಯನ್ನು ನಾವು ಮುಚ್ಚಿಟ್ಟುಕೊಂಡು ಓದಿದ್ದೆವು. ಅದನ್ನು ಓದಿದರೆ 12 ಸಲ ಸ್ನಾನ ಮಾಡಬೇಕಂತೆ ಅಂತ ಬೇರೆ ಅವರ ಭಕ್ತರು ಹಬ್ಬಿಸಿಬಿಟ್ಟಿದ್ದರು! ಆದರೂ ನಮ್ಮ ಮನೆಗೆ ಪತ್ರಿಕೆ ಬಂದಿರುವ ಸುದ್ದಿ ತಿಳಿದು, ಆ ಸ್ವಾಮೀಜಿಯ ಬಗ್ಗೆ ಅಷ್ಟಿಷ್ಟು ಆಕ್ಷೇಪಗಳಿದ್ದ ಊರ ಕೆಲವರು, ಕದ್ದುಮುಚ್ಚಿ ಬಂದು ಓದಿ ಹೋಗಿದ್ದರು. ಆಗಷ್ಟೆ ಬಾಲಮಂಗಳದಿಂದ ಕ್ರೈಂ, ಸ್ಪ್ರೈ, ಡಿಟೆಕ್ಟಿವ್ ಥ್ರಿಲ್ಲರ್ಗಳಿಗೆ ಶಿಫ್ಟಾಗುತ್ತಿದ್ದ ನಾನು 'ಹಾಯ್'ನ ಒಂದೇ ಒಂದು ವರದಿಗೆ ಬಿದ್ದುಹೋಗಿದ್ದೆ. ಆ ಆರ್ಟಿಕಲ್, ಆ ಬರಹದ ಶೈಲಿ, ಆ ದಿಟ್ಟತನ, ಆ ಖದರ್ -ಒಂದೇ ಹೊಡೆತಕ್ಕೆ ನನ್ನನ್ನು ಸೆಳೆದುಕೊಂಡಿದ್ದವು. ವರದಿಯೊಂದನ್ನು ಓದಲೆಂದು ತಂದುಕೊಂಡಿದ್ದ ಪತ್ರಿಕೆಯಲ್ಲಿದ್ದ ಉಳಿದ ಕಾಲಮ್ಮುಗಳಾದ 'ಹಲೋ', 'ಖಾಸ್ಬಾತ್', 'ಬಾಟಮ್ ಐಟಮ್', 'ಲವ್ಲವಿಕೆ'ಗಳನ್ನು ಮರುದಿನ ಓದಿದೆ. ಅಷ್ಟೇ: ರವಿ ಬೆಳಗೆರೆ ಎಂಬ ಮಾಂತ್ರಿಕ ಶಕ್ತಿಗೆ ನಾನು ಶರಣಾಗಿ ಹೋಗಿದ್ದೆ!
ಅಪ್ಪ ಅದಾಗಲೇ ರವಿಯ ಹಲವು ಕಥೆಗಳನ್ನು ಓದಿದ್ದನಾದರೂ ನಾನು ಅವನ ಹೆಸರೂ ಕೇಳಿರಲಿಲ್ಲ. ಅಪ್ಪನಿಗೂ ಹಾಯ್ ಇಷ್ಡವಾಯಿತು ಅನ್ನಿಸುತ್ತೆ, ಆಗ ನಮ್ಮ ಮನೆಗೆ 'ಮಂಗಳ' ಬರುತ್ತಿತ್ತು, ಅದನ್ನು ನಿಲ್ಲಿಸಿ ಮುಂದಿನ ವಾರದಿಂದ ಈ ಕಪ್ಪು ಸುಂದರಿಯನ್ನು ಹಾಕಲು ಹೇಳಲಾಯಿತು. ಪತ್ರಿಕೆಯಲ್ಲಾಗ 'ಹೇಳಿ ಹೋಗು ಕಾರಣ'ದ ಹದಿನೈದನೆಯದೋ ಇಪ್ಪತ್ತನ್ನೆಯದೋ ಕಂತು ಬರುತ್ತಿತ್ತು. ಅದನ್ನೋದಿ ನಾನೇ ಹಿಮವಂತನಾದಂತೆ, ಕನಸಿನ ಹುಡುಗಿ ಪ್ರಾರ್ಥನಾ ಆದಂತೆ, ದೇಬಶಿಶು, ಊರ್ಮಿಳಾ, ರಸೂಲ್ ಜಮಾದಾರರೆಲ್ಲ ಎದುರಿಗೇ ಓಡಾಡಿದಂತೆಲ್ಲ ಪರಿಭಾವಿಸಿ, ಪ್ರತಿ ಬುಧವಾರಕ್ಕೆ ಪತ್ರಿಕೆ ಬರುವುದನ್ನು ತುದಿಗಾಲಲ್ಲಿ ನಿಂತು ಕಾದು... ಕಾಲೇಜಿಗೆ ಹೋಗುವ ಹೊತ್ತಿಗೆ ಅಲ್ಲೂ ಕೆಲ ಬೆಳಗೆರೆ ಅಭಿಮಾನಿಗಳು ಸಿಕ್ಕು, ಆ ಧಾರಾವಾಹಿ ಮುಂದೇನಾಗಬಹುದು ಅಂತೆಲ್ಲ ಚರ್ಚಿಸುತ್ತಾ, ಲವ್ಲವಿಕೆಯನ್ನು ನಕಲು ಮಾಡಿ ನಾನೂ ಪ್ರೇಮಪತ್ರಗಳ ಬರೆಯಲೆತ್ನಿಸುತ್ತಾ, ಖಾಸ್ಬಾತ್ ಓದಿ ನಾನೂ ಕಷ್ಟಗಳನ್ನೆಲ್ಲ ದಾಟಿ ಗೆದ್ದು ಸಾಧಿಸುವ ಕನಸು ಕಾಣುತ್ತಾ, ಬಾಟಮ್ ಐಟೆಮ್ನ ಹಿತವಚನಗಳನೋದಿ ಆಹಾ ಈ ರವಿಯೆಂಬ ಬೆಳಗೆರೆ ಎಷ್ಟೊಳ್ಳೆಯವನು ಎಂದುಕೊಳ್ಳುತ್ತಾ, ಹಲೋ ಓದಿ ನಾನೂ ರಾಜಕೀಯ-ಪ್ರಸ್ತುತ-ವರ್ತಮಾನಗಳನೆಲ್ಲ ತಿಳಿದುಕೊಳ್ಳುತ್ತಾ, ಇವನಷ್ಟು ಚೆನ್ನಾಗಿ ಮತ್ಯಾರೂ ಬರೆಯಲಿಕ್ಕೆ ಸಾಧ್ಯವೇ ಇಲ್ಲ ಅಂತೆಲ್ಲ ಬೇರೆಯವರ ಬಳಿ ವಾದಿಸುತ್ತಾ... 'ರವಿ ಬೆಳಗೆರೆ ಅಂದ್ರೆ ಹೆಂಗೆ ಕೇಜಿ?' ಅಂತಿದ್ದ ಕಾಲದಿಂದ ಎಂತಹ ದೊಡ್ಡ ವ್ಯಕ್ತಿಯಾಗಿ ಬೆಳೆದ ಬೆಳಗೆರೆಯ ಬಗ್ಗೆ ಅಗಾಧ ಅಭಿಮಾನವೂ, ಆರಾಧನೆಯೂ ಬೆಳೆದುಬಿಟ್ಟಿತ್ತು. ಆರ್.ಬಿ., ರವೀ, ರವಿ ಬೆಳಗೆರೆ, ಬರೀ ಬೆಳಗೆರೆ, ವೀ -ಎಲ್ಲರೂ ಅಂದರೆ ಎಲ್ಲರೂ ಇಷ್ಟವೋ ಇಷ್ಟವಾಗಿದ್ದರು.
ನಾನು ಅರೆಬರೆ ಓದಿಕೊಂಡು ಬೆಂಗಳೂರಿಗೆ ಬರುವಾಗಲೂ ರವಿ ನಿಗಿನಿಗಿ ಉರಿಯುತ್ತಿದ್ದ: ಹೊರಗೂ, ನನ್ನೊಳಗೂ. ಎಷ್ಟರ ಮಟ್ಟಿಗೆ ಎಂದರೆ, ನಾನು ಊರಿಂದ ಹೊರಡುವಾಗ, "ನಿಂಗೆ ಎಲ್ಲೂ ಕೆಲಸ ಸಿಗಲ್ಲೆ ಅಂದ್ರೆ ರವಿ ಬೆಳಗೆರೆನ ಕಾಣ್ಲಕ್ಕೇನ, ಅಂವ ಎಂಥರು ಒಂದು ಕೆಲಸ ಕೊಡುಸ್ತ" ಅಂತ ಅಮ್ಮ ಹೇಳಿದ್ದಳು. ಮಜಾ ಎಂದರೆ, ನಾನಿಲ್ಲಿ ಮೊದಲಿಗೆ ಉಳಕೊಂಡಿದ್ದ ನಮ್ಮ ನೆಂಟರ ಮನೆಯವರೂ ಬೆಳಗೆರೆ ಅಭಿಮಾನಿಗಳೇ ಆಗಿದ್ದರು. ಹೀಗಾಗಿ, ಅವರ ಮನೆಗೆ ಪತ್ರಿಕೆ ಬಂದಾಕ್ಷಣ ನಾವೆಲ್ಲ 'ನಾ ಮೊದಲು ನಾ ಮೊದಲು' ಅಂತ ಕಿತ್ತಾಡಿಕೊಂಡು, ಪತ್ರಿಕೆಯ ಒಂದೊಂದು ಪುಟವನ್ನು ಒಬ್ಬೊಬ್ಬರು ಹಂಚಿಕೊಂಡು ಓದಿ, ಅದರ ಬಗ್ಗೆಯೇ ಮಾತಾಡಿ ಮಾತಾಡಿ ಮಾತಾಡಿ... ಆಮೇಲೆ ನಾನು ಅವರ ಮನೆ ಬಿಟ್ಟು ಒಂದಿಷ್ಟು ಸಮವಯಸ್ಕರೊಂದಿಗೆ ರೂಮು-ಗೀಮು ಮಾಡಿಕೊಂಡು ಇದ್ದಾಗ, ಬರುವ ಅಲ್ಪ ಸಂಬಳದಲ್ಲಿ ಪ್ರತಿ ವಾರ ಪತ್ರಿಕೆಯನ್ನು ಕೊಳ್ಳುವುದು ದುಬಾರಿಯೆನಿಸಿ ಪಬ್ಲಿಕ್ ಲೈಬ್ರರಿಗೆ ಹೋಗಿ ಸರತಿಯಲ್ಲಿ ಕಾದು ಕುಳಿತು ಓದಿದ್ದು... ಆಮೇಲೆ ಆರ್ಕುಟ್ನಲ್ಲಿ ರವಿ ಬೆಳಗೆರೆ ಅಭಿಮಾನಗಳ ಸಂಘದಲ್ಲಿ ನಡೆಯುತ್ತಿದ್ದ ಭಯಂಕರ ಚರ್ಚೆಗಳಲ್ಲಿ ನಾನೂ ಭಾಗವಹಿಸುತ್ತಿದ್ದುದು, ಅಲ್ಲಿಂದಲೇ ಹಲವು ಗೆಳೆಯರನ್ನು ಪಡೆದುದು... 'ನೀ ಹಿಂಗ ನೋಡಬ್ಯಾಡ ನನ್ನ'ದ ಬಾಬ್ಕಟ್ ಹುಡುಗಿ ಅಲ್ಲೆಲ್ಲೋ ಸಿಗುತ್ತಾಳೆ ಅಂದುಕೊಂಡುದು... ಅವಳಿಗೆ ದೇವತೆಗಳು ಮಾತ್ರ ಕುಡಿಯುವಂತಹ ಕಾಫಿ ಕುಡಿಸಬೇಕು ಅಂದುಕೊಳ್ಳುತ್ತಿದ್ದುದು...
ಇಷ್ಟೆಲ್ಲ ಆದರೂ ನಾನು ರವಿಯನ್ನು ಮುಖತಃ ಕಾಣುವ, ಕನಿಷ್ಟ ಒಂದು ಪತ್ರ ಬರೆಯುವ ಧೈರ್ಯ ಮಾಡಲಿಲ್ಲ ಎಂದರೆ ಅದಕ್ಕೆ ನನ್ನ ಸಂಕೋಚ-ಹಿಂಜರಿಕೆಗಳೇ ಕಾರಣ. ಮೊದಲ ಸಲ ರವಿಯನ್ನು ನಾನು ನೋಡಿದ್ದು ಪ್ರಾರ್ಥನಾ ಶಾಲೆಯ ಸ್ವಾತಂತ್ರೋತ್ಸವದ ಪೆರೇಡಿನಲ್ಲಿ. ಅವತ್ತು ಆತ ಒಂದು ಕಪ್ಪು ಗಾಗಲ್ ಧರಿಸಿ ನೂರಾರು ಜನರೊಂದಿಗೆ ನಡೆದು ಬರುತ್ತಿದ್ದ. ನಂತರ ಬೆಂಗಳೂರಿನ ಸುಮಾರು ಸಾಹಿತ್ಯ ಕಾರ್ಯಕ್ರಮಗಳಲ್ಲಿ ರವಿ ಎದುರಾದರೂ ಯಾಕೋ ಹೋಗಿ ಮಾತನಾಡಿಸಬೇಕು ಅಂತ ಅನಿಸಲೇ ಇಲ್ಲ. ಪತ್ರಿಕೆಯದೇ ಹಲವು ಕಾರ್ಯಕ್ರಮಗಳಿಗೆ ಹೋದರೂ ಅವರ ಸನಿಹಕ್ಕೆ ಹೋಗಲಿಲ್ಲ.
ಈ ನಡುವೆ ರವಿ ಕಾರ್ಗಿಲ್ಲಿಗೆ ಹೋದ, ಪಾಕಿಸ್ತಾನಕ್ಕೆ ಹೋದ, ಅಫಗನಿಸ್ತಾನಕ್ಕೆ ಹೋದ, ಗುಜರಾತ್ ಭೂಕಂಪಿತ ಪ್ರದೇಶಕ್ಕೆ ಹೋಗಿಬಂದ, ರಾಜ್ಕುಮಾರ್ ಅಪಹರಣವಾದಾಗ ಕಾಡಿಗೇ ನುಗ್ಗಿದ. ಪ್ರಾರ್ಥನಾ ಶಾಲೆ ಮಾಡಿದ, ಓ ಮನಸೇ ಶುರುವಾಯಿತು, ವೀಣಾ ಧರಿ ಎಂಬ ಎಚ್ಐವಿ ಪೀಡಿತ ಹೆಣ್ಣುಮಗಳನ್ನು ಸಾಕುತ್ತಿದ್ದೀನಿ ಅಂತ ಬರೆದುಕೊಂಡ, ಟೀವಿಯಲ್ಲಿ ಕ್ರೈಂ ಡೈರಿ - ಕ್ರೈಂ ಸ್ಟೋರಿ ಅಂತೆಲ್ಲ ಶುರುವಾಗಿ ಅವನ ಕಂಠಕ್ಕೆ, ಡೈಲಾಗ್ ಡೆಲಿವರಿ ಶೈಲಿಗೆ ಮರುಳಾದ ಹೊಸ ಅಭಿಮಾನಿಗಳು ಹುಟ್ಟಿಕೊಂಡರು. ಹೆಚ್ಚುಕಮ್ಮಿ ಅಲ್ಲಿಯವರೆಗೂ ರವಿ ನನ್ನ ದೃಷ್ಟಿಯಲ್ಲಿ ಉನ್ನತ ಸ್ಥಾನದಲ್ಲೇ ಇದ್ದ.
ಆದರೆ ಅದ್ಯಾವಾಗಲೋ ರವಿಯ ಫಾಲ್ ಶುರುವಾಯಿತು: ನನ್ನ ದೃಷ್ಟಿಯಲ್ಲೂ ಮತ್ತು ಬಹುಶಃ ಆ ಕಾಲದಲ್ಲಿ ನನ್ನಂತೆಯೇ ರವಿಗೆ ಮರುಳಾಗಿದ್ದ ಹಲವರ ದೃಷ್ಟಿಯಲ್ಲೂ. ರವಿ ರಿಪಿಟಿಟೀವ್ ಅನ್ನಿಸತೊಡಗಿದ. ಅವಕಾಶವಾದಿ ಅನ್ನಿಸತೊಡಗಿದ. ತನ್ನ ಮಾತನ್ನು ತಾನೇ ಕಾಯ್ದುಕೊಳ್ಳಲಾಗದ ಚೀಟರ್ ಅನ್ನಿಸತೊಡಗಿದ. 'ಲಾರಿ ಟೈರ್ ಮಾರುವವನಿಗೆ ಪತ್ರಿಕೋದ್ಯಮದ ಬಗ್ಗೆ ಹೇಗೆ ಗೊತ್ತಾಗಬೇಕು?' ಅಂತೆಲ್ಲ ಟೀಕಿಸಿ ಬರೆದಿದ್ದ ವಿಜಯ ಸಂಕೇಶ್ವರರನ್ನ ನಂತರ 'ನನ್ನ ಗುರು' ಅಂತ ಕರೆದ. ರವಿಯನ್ನು ನಂಬಿ ಯಾರದಾದರೂ ಬಗ್ಗೆ ಒಂದು ಅಭಿಪ್ರಾಯಕ್ಕೆ ಬಂದಿದ್ದ ನಮಗೆ ಈತ ಉಲ್ಟಾ ಹೊಡೆದಾಗ ಏನು ಮಾಡಬೇಕು ತಿಳಿಯಲಿಲ್ಲ. ಅನಾವಶ್ಯಕವಾಗಿ ಯಾರ್ಯಾರನ್ನೋ ಟಾರ್ಗೆಟ್ ಮಾಡಿ ಬರೀತಿದಾನೆ ಅನ್ನಿಸಲಿಕ್ಕೆ ಶುರುವಾಯಿತು. ಕ್ರೈಂ-ಸೆಕ್ಸ್-ಆತ್ಮಪ್ರಶಂಸೆಗಳು ಬೇಸರ ತರಿಸಿದ್ದವು. ಅವನೀಗ ಅಂಡರ್ವರ್ಲ್ಡ್ ಡಾನುಗಳ ಬಗ್ಗೆ ಬರೆವುದು ಬಿಟ್ಟು ಸಣ್ಣಪುಟ್ಟ ರಾಜಕಾರಣಿಗಳು, ಸಿನೆಮಾ ರಂಗದವರು, ಮಠಾದೀಶರನ್ನು ಟಾರ್ಗೆಟ್ ಮಾಡಿ ಬರೆಯುತ್ತಿದ್ದ. "ಇವಳ ಲೈಫಲ್ಲಿ ಏನಾಯ್ತು ಗೊತ್ತೇ?", "ಇವನ ಅಪ್ಪ ಎಂತವ ಗೊತ್ತೇ?" ಮುಂತಾದ ಹೆಡ್ಡಿಂಗುಗಳಿಂದ ಬರುತ್ತಿದ್ದ ಹಾಯ್, ಪುಟಗಳನ್ನು ತೆರೆದು ನೋಡಿದರೆ ಆ ವರದಿಯಲ್ಲಿ ಹೂರಣವೇ ಇರುತ್ತಿರಲಿಲ್ಲ. ಅವು ಯಾರದೋ ಇಮೇಜ್ ಕೆಡಿಸಲೆಂದೇ ಬರೆದಹಾಗೆ ಕಾಣತೊಡಗಿದವು. ತನ್ನ ಬಗ್ಗೆ ಹೇಳಿಕೊಳ್ಳುವ ಮೂಲಕವೇ ಅಷ್ಟೊಂದು ಅಭಿಮಾನಿಗಳನ್ನು ಸಂಪಾದಿಸಿದ್ದ ಬೆಳಗೆರೆಗೆ ಅದೇ ದೌರ್ಬಲ್ಯವೂ ಆಗಿತ್ತು. ಏನೇ ಬರೆದರೂ, ಏನೇ ಹೇಳಹೊರಟರೂ ಕೊನೆಗೆ 'ತಾನು ತಾನು ತಾನು' ಎಂಬ ಜಪದೊಂದಿಗೆ ಕೊನೆಯಾಗುತ್ತಿದ್ದ ರವಿಯ ಬರಹ-ಭಾಷಣಗಳು ರುಚಿ ಕಳೆದುಕೊಳ್ಳತೊಡಗಿದವು. ಇಡೀ ರಾಜ್ಯವೇ ಹೇವರಿಕೆಯಿಂದ ನೋಡುತ್ತಿದ್ದ ಬಳ್ಳಾರಿ ಗಣಿಧಣಿಗಳ ಪರವಾಗಿ ಪ್ರಚಾರ ಮಾಡಿದ. ಇಂವ ದುಡ್ಡಿಗಾಗಿ ಏನು ಬೇಕಾದರೂ ಮಾಡುತ್ತಾನೆ ಅನ್ನಿಸುವ ಹಾಗೆ ಆಯಿತು.
ಎಲ್ಲಕ್ಕಿಂತ ಮುಖ್ಯವಾಗಿ, ನಾನೀಗ ಹೊರಗೆ ಕಣ್ಬಿಟ್ಟು ನೋಡತೊಡಗಿದ್ದೆ. ಕನ್ನಡದ ಹಲವು ಬರಹಗಾರರನ್ನು ಓದತೊಡಗಿದ್ದೆ. ನೋಟ ವಿಶಾಲದಂತೆ, ಆಕಾಶ ದೊಡ್ಡದಾದಂತೆ ರವಿ ಚಿಕ್ಕವನೆನಿಸುತ್ತ ಹೋದ. 'ಬರೀ ಇವನನ್ನೇ ಓದುತ್ತ ಎಂತೆಂಥಾ ಸಾಹಿತ್ಯವನ್ನು ಬಿಟ್ಟುಬಿಟ್ಟಿದ್ದೆ' ಎನಿಸತೊಡಗಿತು. ಮತ್ತೆ ನಾನೂ ಈಗ ನಾಕಕ್ಷರ ಬರೆವವನಾಗಿ, ವೃತ್ತಿ-ಜವಾಬ್ದಾರಿ-ಬದುಕು ಇತ್ಯಾದಿಗಳು ಶುರುವಾಗಿ, ನನ್ನದೆಂಬ ವ್ಯಕ್ತಿತ್ವವೂ ರೂಪುಗೊಳ್ಳತೊಡಗಿತ್ತಿರಬೇಕು.
ಹೆಚ್ಚುಕಮ್ಮಿ ಇದೇ ಹೊತ್ತಿಗೆ ರವಿಯ ಕಲರ್ಫುಲ್ ಜೀವನದ ಬಗ್ಗೆ, ಆತನ ಇನ್ನೊಂದು ಮುಖದ ಬಗ್ಗೆ, ವಿಚಿತ್ರ ಖಯಾಲಿಗಳ ಬಗ್ಗೆ, ಹುಚ್ಚುಚ್ಚು ವರ್ತನೆಗಳ ಬಗ್ಗೆ, ದುಷ್ಟತನಗಳ ಬಗ್ಗೆ, ದೌರ್ಬಲ್ಯಗಳ ಬಗ್ಗೆ, ಹೆಣ್ಣುಮಕ್ಕಳನ್ನು ಹೇಗ್ಹೇಗೋ ನಡೆಸಿಕೊಳ್ಳುತ್ತಾನಂತೆ ಎಂಬ ಗಂಭೀರ ಆರೋಪದ ಬಗ್ಗೆ, ವೈಯಕ್ತಿಕ ಜೀವನದ ಬಗ್ಗೆ - ಕೆಲವು ಪತ್ರಿಕೆಗಳು, ಅನಾಮಧೇಯ ವ್ಯಕ್ತಿಗಳು, ಪ್ರತ್ಯಕ್ಷವಾಗಿ ಕಂಡಿದ್ದೇನೆ ಅಂತ ಹೇಳಿಕೊಳ್ಳುವವರಿಂದ ಥರಹೇವಾರಿ ಮಾತುಗಳು, ಗಾಸಿಪ್ಪುಗಳು ಶುರುವಾಗಿದ್ದವು. ಇವನ್ನೆಲ್ಲಾ ಕೇಳಿ ಕೇಳಿ, ಅರೆ, ಇಷ್ಟು ಕಾಲ 'ಗುರುವಲ್ಲದ ಗುರು, ಅಪ್ಪನಲ್ಲದ ಅಪ್ಪ' ಅಂತೆಲ್ಲ ಅಂದುಕೊಂಡಿದ್ದು ಇವನ ಬಗ್ಗೆಯೇನಾ ಅಂತಂದುಕೊಳ್ಳುವ ಮಟ್ಟಿಗೆ ರವಿಯೆಡಿಗಿನ ನನ್ನ ಅಭಿಪ್ರಾಯ ಬದಲಾಗಿಹೋಯಿತು. ಕುಡಿತ-ಸಿಗರೇಟು ಎಲ್ಲಾ ಬಿಟ್ಟು ಬಹಳ ಕಾಲವಾಯ್ತು ಅಂತ ಅವನು ಬರಕೊಂಡ ಕೆಲವೇ ಕಾಲಕ್ಕೆ ಅದೆಲ್ಲ ಸುಳ್ಳೇಸುಳ್ಳು ಅಂತ ಸಾಕ್ಷ್ಯ ಸಿಕ್ಕಿತು. ಗಳಸ್ಯ-ಕಂಠಸ್ಯ ಅಂತ ಕರೆದುಕೊಳ್ಳುತ್ತಿದ್ದ ವಿಶ್ವೇಶ್ವರ ಭಟ್ಟರ ವಿರುದ್ಧ ಬರೆದು, ಆಮೇಲೆ ಅವರೂ-ಅವರ ತಂಡದವರೂ ತಿರುಗಿ ಇವನ ಬಗ್ಗೆ ಬರೆದು, ಅವರೆಲ್ಲಾ ಬೀದಿಜಗಳ ಆಡಿದಾಗಲಂತೂ ಬೆಳಗೆರೆ ಬಹುಶಃ ಹಲವರ ದೃಷ್ಟಿಯಲ್ಲಿ ಸಣ್ಣವನಾದ. ಆಮೇಲೆ ಅದ್ಯಾರದೋ ಕೊಲೆಗೆ ಸುಪಾರಿ ಕೊಟ್ನಂತೆ ಅಂತ ಜೈಲಿಗೂ ಹೋಗಿ ಬಂದ.
ಯಾರಾದರೂ ತೀರಿಕೊಂಡಾಗ ಅವರ ಬಗ್ಗೆ ಒಳ್ಳೆಯದಷ್ಟನ್ನೇ ಬರೆಯಬೇಕು ಎನ್ನುತ್ತಾರೆ. ಬರಹಗಾರನೇ ಬೇರೆ, ಅವನ ವೈಯಕ್ತಿಕ ಬದುಕೇ ಬೇರೆ - ಅವೆರಡನ್ನು ತಳುಕು ಹಾಕಬಾರದು ಎನ್ನುತ್ತಾರೆ. ಆದರೆ ಬೆಳಗೆರೆಯ ವಿಷಯದಲ್ಲಿ ಹಾಗೆ ಮಾಡುವುದು ಕಷ್ಟ ಎನಿಸುತ್ತದೆ ನನಗೆ. ಯಾಕೆಂದರೆ, ನಾವು ಬರೀ ರವಿಯ ಕಥೆ-ಕಾದಂಬರಿಗಳನ್ನು ಓದಲಿಲ್ಲ; ಅವನ ಬಗ್ಗೆ ಅವನೇ ಬರೆದುಕೊಂಡುದನ್ನು ಓದಿದೆವು, ಅವನ್ನೆಲ್ಲ ನಿಜವೆಂದು ಭಾವಿಸಿದೆವು, ಅವನೊಬ್ಬ ಸಂಭಾವಿತ ಎಂದು ನಂಬಿದೆವು, ಪ್ರೀತಿಸಿದೆವು, ಆರಾಧಿಸಿದೆವು: ಆದರೆ ಮುಂದೊಂದು ದಿನ ಅವೆಲ್ಲ ಸುಳ್ಳು, ಆತ ಅಷ್ಟೆಲ್ಲ ಪ್ರೀತಿಗೆ, ಆರಾಧನೆಗೆ, ನಂಬುಗೆಗೆ ಅರ್ಹ ವ್ಯಕ್ತಿಯಾಗಿರಲಿಲ್ಲ ಅಂತ ಗೊತ್ತಾದಾಗ ಆಗುವ ಆಘಾತ - ನಿರಾಶೆ ದೊಡ್ಡ ಮಟ್ಟದ್ದು. ರವಿಯ 'ಫಸ್ಟ್ ಹಾಫ್' ಮಾತ್ರ ಇಷ್ಟ, ಅಥವಾ ಅವನೇ ಅಫಿಡವಿಟ್ಟಿನಲ್ಲಿ ಬರೆದುಕೊಳ್ಳುತ್ತಿದ್ದಂತೆ ಅವನ ಬರಹ-ಸಾಹಿತ್ಯಪ್ರೀತಿ-ಭಾಷಣ-ನಿರೂಪಣೆ-ಶಾಲೆ ಇತ್ಯಾದಿ ಸಾಧನೆಗಳನ್ನು ಬಿಟ್ಟು ಉಳಿದ ವಿವರಗಳೆಲ್ಲ ಅನ್-ಇಂಟರೆಸ್ಟಿಂಗ್ ಅಂತ ಬಿಟ್ಟುಬಿಡುವುದು ಹೇಗೆ ಸಾಧ್ಯ?
ರವೀ, ಸುಮಾರು ಎಂಟ್ಹತ್ತು ವರ್ಷ ನಿಮ್ಮ ಬರಹದ ಮೋಡಿಗೆ ಒಳಗಾಗಿದ್ದೆ, ಹೇಳಿ ಹೋಗು ಕಾರಣವನ್ನೂ - ಪತ್ರಿಕೆಯನ್ನೂ ಹುಚ್ಚು ಹಿಡಿಸಿಕೊಂಡು ಓದಿದ್ದೆ, ನಿಮ್ಮ ಕಥೆಗಳನ್ನು, ಕೆಲವು ಕಾದಂಬರಿಗಳನ್ನು, ಒಂದಷ್ಟು ಅನುವಾದಗಳನ್ನು ಇವತ್ತಿಗೂ ಅತ್ಯುತ್ತಮವೆಂದು ಒಪ್ಪುತ್ತೇನೆ. ನಿಮ್ಮ ಬರಹಗಳಿಂದ - ಮಾತುಗಳಿಂದ ಸ್ಫೂರ್ತಿ ಪಡೆದಿದ್ದೇನೆ. ಇವತ್ತು ನಾನೂ ಏನಾದರೂ ಬರೆಯುತ್ತಿದ್ದರೆ ಅದಕ್ಕೆ ನಿಮ್ಮನ್ನು ಓದಿದ್ದೂ ಒಂದು ಕಾರಣ ಅಂತ ನಿಸ್ಸಂಕೋಚವಾಗಿ ಒಪ್ಪಿಕೊಳ್ಳುತ್ತೇನೆ. ನಿಮ್ಮ ಪತ್ರಿಕೆ ಹಲವು ಒಳ್ಳೆಯ ಅಂಕಣಕಾರರನ್ನು - ಬರಹಗಾರರನ್ನೂ ಕನ್ನಡಕ್ಕೆ ಕೊಟ್ಟಿರುವುದೂ ನಿಜ. ಹಾಗೆಯೇ, ನಿಮ್ಮ ಪತ್ರಿಕೆಯೇ ಹತ್ತು-ಹಲವು ಶ್ರೇಷ್ಠ ಸಾಹಿತಿಗಳನ್ನು ನಾನು ಓದಲು ಬೆಳಕಿಂಡಿಯಾಯಿತು ಅಂತಲೂ ಹೇಳುತ್ತೇನೆ.
ನಿಮ್ಮ ಬರಹದ ಚುಂಬಕ ಶೈಲಿಗೆ, ಅಗಾಧ ಬರಹಗಾರಿಕೆಗೆ, ನನ್ನನ್ನು ಓದಲು-ಬರೆಯಲು ಹಚ್ಚಿದ್ದಕ್ಕೆ ಧನ್ಯವಾದ, ನಮಸ್ಕಾರ.
Tuesday, November 03, 2020
ಗೀಚು
ತನ್ನ ಪುಟ್ಟ ಬೆರಳುಗಳಲ್ಲಿ ಪೆನ್ನು ಹಿಡಿದು
ಬರೆಯುತ್ತಿದ್ದಾಳೆ ಮಗಳು ಬಿಳಿಹಾಳೆಯಲ್ಲಿ
ಹೀಗೇ ಒಂದೊಂದಕ್ಷರ ಕಲಿತು
ಆಮೇಲವನ್ನು ಜೋಡಿಸಿ ಪದಗಳಾಗಿಸಿ
ಪದಕೆ ಪದ ಪೋಣಿಸಿ ವಾಕ್ಯ ರಚಿಸಿ
ವಾಕ್ಯದ ಮುಂದೆ ವಾಕ್ಯವನಿಟ್ಟು ಮಹಾಪ್ರಬಂಧ ಬರೆದು
ಈ ನಡುವೆ ಆಕೆಗೆ ಗೀಚುವುದು ಬಿಟ್ಟು ಹೋಗಿರುತ್ತೆ
ಇಷ್ಟು ದಿನ ಗೋಡೆ ನೆಲ ಟೇಬಲು ಅಪ್ಪನ ಪುಸ್ತಕ
ಅಮ್ಮನ ಬಿಳಿಯಂಗಿ ತನ್ನದೇ ಮೈಕೈ-
ಗಳ್ಯಾವುದರಲೂ ಭೇದವೆಣಿಸದೆ
ಮನಸಿಗೆ ಬಂದುದ ಗೀಚುತ್ತಿದ್ದ ಮಗಳು
ಈಗ ಅಕ್ಷರಗಳನರಿತು
ಬರೆವುದ ಕಲಿತ ಮೇಲೆ ಗೀಚುವ ಹಾಗಿಲ್ಲ
ನಡೆವುದ ಕಲಿತ ಮೇಲೆ ಬೀಳುವ ಹಾಗಿಲ್ಲ
ಮಾತು ಕಲಿತ ಮೇಲೆ ತೊದಲುವ ಹಾಗಿಲ್ಲ
ಮುಗ್ದತೆಯ ತೊಡೆಯಲೆಂದೇ ಇರುವ
ಈ ಜಗದ ರೀತಿಗೆ ಬಲಿಯಾದ ಮಗಳು
ಒಂದೊಂದಾಗಿ ಕಲಿಯುತ್ತ ಕಲಿಯುತ್ತ
ಆಮೇಲೆ ನಾವೂ ಈ ಮನೆ ಬದಲಿಸಿ
ಮಾಲೀಕರು ಗೋಡೆಗೆ ಹೊಸ ಬಣ್ಣ ಬಳಿಸಿ
ಇನ್ನೆಂದೂ ಕಾಣಿಸದಂತೆ ನನ್ನ ಮಗಳ ಗೀಚು
ಹಳೇ ಪರಿಚಯ ಹಳೇ ನೆನಪುಗಳ
ಮೆಲುಕು ಹಾಕೋಣವೆಂದು
ಮತ್ತೆ ಆ ಮನೆಗೆ ಬಂದರೆ ಮೊಂದೊಂದು ದಿನ
ಗೋಡೆಯ ಹೊಸ ಬಣ್ಣಪದರದ ಮೇಲೆ
ಹೊಸ ಬಾಡಿಗೆದಾರರ ಮಗುವಿನ ಮುದ್ದುಗೀಚು
ಈಗಾಗಲೇ ದೊಡ್ಡವಳಾಗಿಹೋಗಿರುವ ಮಗಳು
ತನಗಿಂತ ಸಣ್ಣ ವಯಸಿನ ಆ ಮಗುವಿಗೆ
ಗೋಡೆಯ ಮೇಲೆ ಗೀಚಬಾರದೆಂದು
ತಿಳಿ ಹೇಳುತ್ತಿದ್ದಾಳೆ.
Tuesday, September 22, 2020
ಅಕ್ಷಯ ಕಾವ್ಯದ ಅಕ್ಷಯ ಓದು
ಈ ದಿನ ಹೇಳಿಯೇಬಿಡುವೆನೆಂದು ಅವಳೂ
ಎಷ್ಟೊಂದು ದೂರ ನಡೆದರು
ಅಣಬೆಗಳ ಹುಡುಕುತ್ತ
‘ಅಕ್ಷಯ ಕಾವ್ಯ’ ಎಂಬ ಈ ಹೊತ್ತಗೆಯನ್ನು ನಾನು ತಂದಿಟ್ಟುಕೊಂಡು ಎರಡು ವರ್ಷದ ಮೇಲಾಯಿತು. ಈ ದಿನ ಓದಿ ಮುಗಿಸಿಯೇಬಿಡುತ್ತೇನೆಂದು ಎಷ್ಟು ಸಲ ಅದನ್ನು ಕೈಗೆತ್ತಿಕೊಂಡಿಲ್ಲ... ಆದರೆ ಮುಗಿಸಲು ಸಾಧ್ಯವಾಗಿಯೇ ಇಲ್ಲ. ಮುಗಿಸುವುದಿರಲಿ, ಕೆಲವೊಂದು ಸಲ ಎರಡ್ಮೂರು ಪುಟದ ಮುಂದೆ ಹೋಗಲಿಕ್ಕೂ ಸಾಧ್ಯವಾಗಿಲ್ಲ. ಹಾಗಾದರೆ ಇದು ಅಷ್ಟೊಂದು ಸಂಕೀರ್ಣವಾದ ಗ್ರಂಥವೇ? ಹಾಗೂ ಅನಿಸಿಲ್ಲ. ಸರಳ ಶಬ್ದಗಳು, ಸರಳ ವಾಕ್ಯಗಳು, ಸರಳ ಪ್ರತಿಮೆಗಳು, ಎಲ್ಲೂ ಗಂಟಲಿಗೆ ಸಿಕ್ಕದ ಮೃದು ಆಹಾರವೇ. ಆದರೂ, ಈ ಎರಡು ವರ್ಷಗಳಲ್ಲಿ ಕನಿಷ್ಟ ನೂರು ಸಲ ಈ ಪುಸ್ತಕ ನನ್ನ ಕೈಗಳನ್ನಲಂಕರಿಸಿದ್ದರೂ, ‘ಓದಿ ಮುಗಿದ ಪುಸ್ತಕ’ಗಳ ಗುಂಪಿಗೆ ಇದನ್ನು ಸೇರಿಸಲಾಗುತ್ತಿಲ್ಲ ಯಾಕೆ?
ಬಹುಶಃ ಈ ಪುಸ್ತಕದ ಹೆಗ್ಗಳಿಕೆಯೇ ಅದು. ಗದ್ಯಸಾಹಿತ್ಯವನ್ನೇ ಹೆಚ್ಚು ನೆಚ್ಚಿಕೊಂಡಿದ್ದ ನಾನು ಈಗ ಏಳೆಂಟು ವರ್ಷಗಳಿಂದ ಕಾವ್ಯದ ಹುಚ್ಚಿಗೆ ಬಿದ್ದು, ‘ಹೊಸ ತರಹದ್ದು’ ಅಂತ ಕಂಡ ಕಾವ್ಯವನ್ನೆಲ್ಲ ಆಸೆ ಪಟ್ಟು ಕೊಂಡು ಓದಿ, ಕೆಲವಷ್ಟು ಸಲ ಅದರದೇ ಪ್ರಭಾವಕ್ಕೊಳಗಾಗಿ ಬರೆಯುತ್ತಿರುವವನು. ನವ್ಯದ ರುಚಿಗೆ ಮಾರುಹೋದವನು. ಆದಿಪ್ರಾಸ-ಅಂತ್ಯಪ್ರಾಸ-ಗಣ-ಪ್ರಸ್ತಾರಗಳ ಹಂಗು ಮುರಿದಮೇಲೂ ಕವಿ ಹೇಗೆ ಲಯ ಕಂಡುಕೊಂಡ ತನ್ನ ಕಾವ್ಯದಲ್ಲಿ? ಹೇಗೆ ತನ್ನ ರಚನೆ ಅಕಾವ್ಯವಾಗುವುದನ್ನು ತಪ್ಪಿಸಿದ? ಹೇಗೆ ವಸ್ತುವೊಂದು ಕವಿತೆಯಾಗಿ ರೂಪುಗೊಳ್ಳುತ್ತೆ? -ಎಂಬುದು ನನಗೆ ಇನ್ನೂ ಆಶ್ಚರ್ಯದ ವಿಷಯ. ಹೀಗಿರುವಾಗ, ಖಚಿತ ಸಂಗತಿಯಿಲ್ಲದ, ನಿಶ್ಚಿತ ವಾಹಿನಿಯಿಲ್ಲದ, ಲಿಖಿತ ಕ್ರಮವಿಲ್ಲದ, ಬದ್ಧ ರೂಪವಿಲ್ಲದ ಅಖಂಡ ಬರಹವೊಂದು ಹೇಗೆ ಕಾವ್ಯವಾಗಿ ಮೈತಳೆಯುತ್ತದೆ?
‘ಅಕ್ಷಯ ಕಾವ್ಯ’ವನ್ನು ಓದುವಾಗೆಲ್ಲ ನನ್ನನ್ನು ಕಾಡುವ ಪ್ರಶ್ನೆಗಳು ಇವು. ಇಲ್ಲಿ ಬರುವ ತೊಂಬತ್ತು ಪ್ರತಿಶತ ಕಥೆಗಳು-ಉಲ್ಲೇಖಗಳ ಪರಿಚಯ ನನಗಿಲ್ಲ. ಗೂಗಲ್ ಮಾಡಿದರೆ ತಿಳಿಯುತ್ತಿತ್ತೇನೋ, ಆದರೆ ಯಾವತ್ತೂ ಆ ಗೋಜಿಗೆ ಹೋಗಿಲ್ಲ. ತಿಳಿದುಕೊಳ್ಳಬೇಕು ಅಂತ ಅನಿಸಿಯೇ ಇಲ್ಲ. ಇಷ್ಟಕ್ಕೂ ಈ ಪುಸ್ತಕವನ್ನು ‘ಅರ್ಥ ಮಾಡಿಕೊಳ್ಳಬೇಕು’ ಅಂತಲೇ ನನಗೆ ಇದುವರೆಗೆ ಅನಿಸಿಲ್ಲ. ಆದಾಗ್ಯೂ ಇದು ನಿರರ್ಥಕ ಓದು ಎಂಬ ಭಾವನೆ ಬಂದಿಲ್ಲ!
ಕಸ ಪಿಪಾಯಿಯೊಳಗೆರಡು ನಾಯಿಗಳು
ಅಂಡ ಅಂಡಾಶಯ ಕಂಫೀಟುಗಳ ಜಾಲಾಡಿಸುತ್ತಿವೆ
ಸಕಲರೂ ಕಾಯುತ್ತ ಭಿಕ್ಷುಕರೂ ಹಾಗೇ
ಸೇಂಟ್ ಥಾಮಸ್ ಅಕ್ವಿನಾಸ್ ಹೇಳಿದ ಹಾಗೆ
ಕಾರಣ ವಿನಾ ಕಾರ್ಯವಿಲ್ಲ
ಮನುಷ್ಯರ ದೃಷ್ಟಿಗಳ ಕತ್ತರಿಸುವ ಹಾಗೆ
ಯುಗಾಂತರದ ಗಾಡಿ
-ಈ ಸಾಲುಗಳಲ್ಲಿ ಬರುವ ಸೇಂಟ್ ಥಾಮಸ್ ಅಕ್ವಿನಾಸ್ ಯಾರು? ನನಗೆ ಅದು ಮುಖ್ಯ ಅಂತ ಅನಿಸಿಯೇ ಇಲ್ಲ. ಹುಡುಕಿದರೆ ಅವನೊಬ್ಬ ಇಟಲಿ ದೇಶದ ಫಿಲಾಸಫರ್ ಅಂತ ಗೊತ್ತಾಗುತ್ತಿತ್ತು. ಅಂವ ಏನು ಬರೆದ, ಏನೇನು ಮಾಡಿದ, ಯಾಕೆ ಹಾಗೆ ಹೇಳಿದ –ಎಲ್ಲಾ ವಿಷಯ ಸಂಗ್ರಹಿಸಬಹುದಿತ್ತು. ಆದರೆ ಕವಿತೆಯ ಓದನ್ನು ಮುಂದರಿಸಿಕೊಂಡು ಹೋಗಲು ನನಗೆ ಯಾವ ತೊಡಕೂ ಆಗಲಿಲ್ಲ. ಹಾಗೆಯೇ ಈ ಪುಸ್ತಕದಲ್ಲಿ ಬರುವ ಅರಬೀ ಸಮುದ್ರವೋ, ಅರಾರತ್ ಪರ್ವತವೋ, ಮೆಡಿಟರೇನಿಯನ್ ಬಿಸಿಲೋ, ರೋಡಿನ್ನ ಶಿಲ್ಪವೋ, ಬಾಮಿಯಾನಿನ ಬುದ್ಧನೋ –ನಾನು ಕಂಡವಲ್ಲ. ಇದರೊಳಗೆ ಪ್ರಸ್ತಾಪ ಮಾಡಲಾಗಿರುವ ಯಾವ್ಯಾವುದೋ ದೇಶಗಳ ಯಾವ್ಯಾವುದೋ ಭಾಷೆಗಳ ಕವಿಗಳ ಸಾಲುಗಳು ನಾನೆಂದೂ ಓದಿದವಲ್ಲ. ಮೆಂಡೆಲ್ಸ್ಟಾಮ್ ಬರೆದ ಒಂದು ಕವಿತೆಯನ್ನೂ ನಾನು ಓದಿದಂತಿಲ್ಲ. ಹಾಗಿದ್ದೂ ನನ್ನ ಓದು ಆ ಸಾಲುಗಳಲ್ಲಿ ನಿಲ್ಲಲಿಲ್ಲ. ಯಾಕೆಂದರೆ, ಈ ಗುಚ್ಛಗಳಲ್ಲಿ ನನ್ನ ನಿಲುಕಿಗೆ ಸಿಗದ ಯಾವುದೋ ದೇಶಭಾಷೆಗಳ ದಾರ್ಶನಿಕರ ಜತೆ ನನ್ನದೇ ದೇಶದ ನನ್ನದೇ ಜನವೂ ಏಕಕಾಲದಲ್ಲಿ ಇದ್ದಾರೆ. ನನಗೆ ಅಷ್ಟೇನು ಪರಿಚಿತವಲ್ಲದ ಸೂಫಿ ಭಜನೆಯ ಕೆಳಸಾಲುಗಳಲ್ಲೇ ಡಿಸೆಂಬರ್ ಬಂದರೆ ನನ್ನ ಕಿವಿಗೆ ಬೀಳುವ ಅಯ್ಯಪ್ಪ ಭಕ್ತರ ಭಜನೆ ಸದ್ದು ಇದೆ. ಅಮೆರಿಕೆಯ ಅಪರಿಚಿತ ಓಣಿಯ ಜತೆಜತೆಗೇ ಪರ್ಕಳದ ಬೀದಿಯೂ ಇದೆ. ಜಪಾನೀ ನಾಟಕದ ದೃಶ್ಯದ ಬೆನ್ನ ಹಿಂದೆಯೇ ವಿವಿಧಭಾರತಿಯ ಗಾನವಿದೆ.
ಬಹುಶಃ ಇದೇ ಕಾರಣಕ್ಕೆ ಈ ಕೃತಿ ನನ್ನನ್ನು ಹಿಡಿದಿಟ್ಟುಕೊಂಡಿರುವುದು. ಪೂರ್ತಿ ಅರ್ಥವಾಗುವುದಿಲ್ಲ, ಆದರೆ ಇದರಲ್ಲೇನೋ ಅರ್ಥವಿದೆ ಅಂತ ಅನಿಸುತ್ತದೆ. ತಿಳಿದವರು ಹೇಳುವಂತೆ, ಕಾವ್ಯದ ಸಾರ್ಥಕತೆಯೂ ಅಷ್ಟೆಯೇ ಅಲ್ಲವೇ? ಯಾವುದೇ ಕವಿತೆ ಕಾಡಬೇಕಾದರೆ ಅದು ಪೂರ್ತಿ ಅರ್ಥವಾಗಬಾರದು: ಇದರಲ್ಲಿ ‘ಇನ್ನೇನೋ ಇದೆ, ಇನ್ನೇನೋ ಇದೆ’ ಅನ್ನಿಸುತ್ತಿರಬೇಕು!
ಒಂದು ದಿನ ನಾನೂ ಕೆಲವು ಮಹಾವಾಕ್ಯಗಳ ಬರೆಯುವೆ
ಬರೆದು ಸರ್ಕಸ್ ಡೇರೆಗಳ ಸುತ್ತ ಆಡಲು ಬಿಡುವೆ
ಅವು ಕಂಡವರ ಮನಸ್ಸುಗಳ ಸೇರಲಿ ಎನ್ನುವೆ
ಕೆಲವು ಅಲ್ಲೇ ಉಳಿದಾವು
ಕೆಲವು ವಾಪಸು ಬರುತ್ತವೆ
ಬಂದಾಗ ಅವಕ್ಕೆ ಗಾಯಗಳಾಗಿರುತ್ತವೆ
ಮಹಾವಾಕ್ಯಗಳು ಈ ಕಾವ್ಯದಲ್ಲಿ ಇಲ್ಲವೆಂದೇ ಹೇಳಬೇಕು. ಇಲ್ಲಿ ಉದುರಿದ ಹಕ್ಕಿಯ ಪುಕ್ಕವೂ ಹಾರುತ್ತದೆ. ಹಗ್ಗದ ಮೇಲೆ ಒಣಹಾಕಿದ ಅಂಗಿ ಗಾಳಿಗೆ ಅಲ್ಲಾಡುತ್ತದೆ. ಆಕಾಶ ನೋಡುತ್ತಾ ನಿಂತವಳ ಕಣ್ಣಲ್ಲಿ ನಕ್ಷತ್ರಗಳು ಮೆಲ್ಲಗೆ ತೇಲುತ್ತವೆ. ಕತ್ತಲೆ ಗಾಢವಾದಂತೆ ನೆರಳುಗಳು ಕರಗುತ್ತವೆ. ಓದುತ್ತಾ ಕುಳಿತ ನಾನು ಅದರಲ್ಲೇ ಮುಳುಗುತ್ತೇನೆ. ರಾಜಧಾನಿ ಎಕ್ಸ್ಪ್ರೆಸ್ ನನ್ನನ್ನು ಮತ್ತೆಲ್ಲಿಗೋ ಕರೆದೊಯ್ಯುತ್ತದೆ. ಹುಸೇನ್ಸಾಗರದ ಬುದ್ಧನನ್ನು ತೋರಿಸುತ್ತದೆ. ಗಜಿಬಿಜಿಯ ಸಂತೆಯಲ್ಲಿ ಮಂಡಕ್ಕಿ ಕೊಳ್ಳುತ್ತೇನೆ. ಆಸ್ಪತ್ರೆ ಪಕ್ಕದ ಕ್ಯಾಂಟೀನಿನಲ್ಲಿ ಚಹಾ ಕುಡಿಯುತ್ತೇನೆ. ಹೂಗಳು ತುಂಬಿದ ಶೀತಲ ಕೊಳದಲ್ಲಿ ಸ್ನಾನ ಮಾಡುತ್ತೇನೆ. ದಟ್ಟಾರಣ್ಯದ ನಡುವಿನ ಕಣಿವೆಯ ಪಕ್ಕದಲ್ಲಿ ನಿಂತು ಬಟ್ಟೆ ಬದಲಿಸಿಕೊಳ್ಳುತ್ತೇನೆ. ರೋಡ್ರೋಲರ್ ಒಂದು ಮೈಮೇಲೆ ಹರಿದಂತಾಗುತ್ತದೆ. ಎಚ್ಚರಾದರೆ ನಮ್ಮೂರ ದೇವಸ್ಥಾನದ ಕಟ್ಟೆಯ ಮೇಲೆ ಕುಳಿತಿದ್ದೇನೆ.
ಈ ಕೃತಿಯ ಓದು ನನಗೆ ವಿಶಿಷ್ಟ ಅನುಭವ ನೀಡಿದೆ. ನಾನಿದನ್ನು ನಿದ್ರೆ ಬಾರದ ನಡುರಾತ್ರಿಗಳಲ್ಲಿ ಎದ್ದು ಕೂತು ಓದಿದ್ದೇನೆ, ಕುಟುಂಬದ ಜತೆ ಪ್ರವಾಸ ಹೋದಾಗ ಬ್ಯಾಗಿನಲ್ಲಿಟ್ಟುಕೊಂಡು ಹೋಗಿದ್ದೇನೆ, ಊರಿನ ಮಳೆ ನೋಡುತ್ತಾ ಇದನ್ನು ಧೇನಿಸಿದ್ದೇನೆ, ಲಾಕ್ಡೌನ್ ಕಾಲದ ತಳಮಳದ ದಿನಗಳಲ್ಲಿ ಕೈಗೆತ್ತಿಕೊಂಡಿದ್ದೇನೆ. ಯಾವುದೋ ಪುಟ ತೆರೆದು ಏನೂ ನಿರೀಕ್ಷೆಯಿಲ್ಲದೆ ಸುಮ್ಮನೆ ಕಣ್ಣಾಡಿಸುತ್ತಾ ಕೂತಿದ್ದೇನೆ. ಇಲ್ಲಿನ ಕೆಲ ಸಾಲುಗಳು ವಿನಾಕಾರಣ ಸುಖ ಕೊಟ್ಟಿವೆ:
ಕಾದೆ ನಾನು ಇಡೀ ವರುಷ ಒಂದು ಕಿರುನಗೆಗೆ
ಬ್ರಹ್ಮಕಮಲವಾದರೂ ಅರಳಬೇಕಿತ್ತು ಇಷ್ಟರೊಳಗೆ
ಯಾವೂರ ಕಮಲಿ ನೀನು
ಸಾವಿರ ವರುಷ ಕಾಯುವುದು ಹೇಗೆ ನಾನು
ಬಹುಶಃ ಈ ಪುಸ್ತಕವನ್ನು ನನಗೆ ಓದಿ ಮುಗಿಸಲು ಸಾಧ್ಯವಿಲ್ಲ. ಅಥವಾ ಯಾವತ್ತಾದರೂ ಇದನ್ನು ಓದಿ ಮುಗಿಸಿದ್ದೇನೆಂದು ಹೇಳುವ ಧೈರ್ಯ ಮಾಡಲಾರೆ. ಯಾರಾದರೂ ಇದರ ಬಗ್ಗೆ ಹೇಳು ಎಂದರೆ ಸರಿಯಾಗಿ ಹೇಳಲೂ ಸಾಧ್ಯವಾಗದು. ಮತ್ತು ಯಾರಾದರೂ ಇದನ್ನು ಮೊದಲ ಪುಟದಿಂದ ಕೊನೆಯ ಪುಟದವರೆಗೆ ಅವಡುಗಚ್ಚಿ ಹಿಡಿದು ಓದಿ ಮುಗಿಸಬಹುದು ಅಂತಲೂ ನನಗನಿಸುತ್ತಿಲ್ಲ. ಇದೊಂದು ಮುಗಿಯದ ಮುಂಜಾವು. ಪೂರೈಸಲಾಗದ ಅಪರಾಹ್ನ. ಸಂಪನ್ನವಾಗದ ಸಂಧ್ಯೆ. ಅಂತ್ಯವಿರದ ಇರುಳು.
ಪ್ರಯೋಗಶೀಲತೆಯ ಉತ್ತುಂಗದಂತಿರುವ ಈ ಕಾವ್ಯಧಾರೆ ನನ್ನನ್ನು ಸದಾ ಎಚ್ಚರದಲ್ಲಿಟ್ಟಿರುತ್ತದೆ ಅಂತ ನಾನು ನಂಬಿದ್ದೇನೆ. ಇಲ್ಲಿನ ಸಾಲುಗಳಿಂದ ಪ್ರೇರಿತನಾಗಿ ನಾನೂ ಏನೇನೋ ಗೀಚಿದ್ದೇನೆ. ಮತ್ತೇನನೋ ಓದುವಾಗ ಇಲ್ಲಿಯ ಸಾಲುಗಳನ್ನು ನೆನಪಿಸಿಕೊಂಡಿದ್ದೇನೆ. ಓದುವ ನನಗೇ ಇದು ಮುಗಿಯದ ತಪನೆಯಾಗಿರುವಾಗ, ಬರೆದ ಕವಿಗೆ ಇದು ಇನ್ನೆಷ್ಟು ಕಾಡಿರಬಹುದು ಅಂತ ಕಲ್ಪಿಸಿಕೊಂಡು ಅಚ್ಚರಿಯಲ್ಲಿ ಕಂಪಿಸಿದ್ದೇನೆ. ಇಂಥದ್ದೊಂದು ಪ್ರಯೋಗದ ಮೋಹಕ್ಕೆ ಸಿಲುಕಿದ ಕವಿಯ ಸ್ಥಿತಿಯನ್ನು ಊಹಿಸಿಕೊಂಡಿದ್ದೇನೆ. ಬರೆದೇ ತೀರಿಸಿಕೊಳ್ಳಬೇಕಾದ ಈ ದಾಹ ಬರೆದು ಮುಗಿಸಿದಮೇಲಾದರೂ ಅವರಿಗೆ ತೀರಿತಾ? ಗೊತ್ತಿಲ್ಲ. ಆದರೆ ಒಂದಂತೂ ಸತ್ಯ: ಇದೊಂದು ಬಗೆಹರಿಯದ ಬೇಗೆಯಂತೆ ನನ್ನೊಂದಿಗೇ ಇರಲಿದೆ ಬಹಳ ಕಾಲ ತಣ್ಣಗೆ. ಇಂಥದ್ದೊಂದು ಹೊರೆಯನ್ನು ನನಗೆ ದಾಟಿಸಿದ ಕವಿಗೆ ನಮಸ್ಕಾರ. ಆ ಕಾವ್ಯಶಕ್ತಿಗೆ ಶರಣು.
Friday, August 28, 2020
ಅಮ್ಮದಕಣ್ಣನಿಗೆ
ಸಂಜೆಯಾಗುತ್ತಿದ್ದಂತೆಯೇ ಒಂದು ಬಂಡೆಯ ಮೇಲೆ ಕೂರುತ್ತೀ-
ತುಂಗಭದ್ರೆಯ ಜುಳುಜುಳುವಿಗೆ ಕಾಲು ತಾಕಿಸಿ ಧ್ಯಾನಸ್ಥನಾಗಿ
ಕೈಯಲ್ಲಿ ಗಾಳವಿದ್ದರೂ ಪಕ್ಕದಲ್ಲಿ ಬುಟ್ಟಿಯಿಲ್ಲ
ಸಿಕ್ಕ ಮೀನುಗಳನೆಲ್ಲ ವಾಪಸು ನೀರಿಗೆ ಬಿಡುತ್ತೀ
ಊರ ಹುಡುಗರು ನಿನ್ನ ನೋಡಿ ಹೆದರಿ ಓಡುವರು
ಜನವೆಲ್ಲ ನಿನ್ನ ಬಗ್ಗೆ ಏನೇನೋ ಆಡಿಕೊಳ್ಳುವರು
ಆದರೂ ನಿನ್ನದು ನಿಷ್ಕಂಪಿತ ನಡೆ
ಕಿವಿಯಿಲ್ಲದ ನೀನು ಹೇಗೆ ಎಲ್ಲವನೂ ಕೇಳುತ್ತೀ
ಮೂಗಿಲ್ಲದ ನೀನು ಹೇಗೆ ಎಲ್ಲವನೂ ಗ್ರಹಿಸುತ್ತೀ
ತೆಂಬಕಸ್ವಾಮಿಯ ದೇಗುಲದ ಘಂಟೆನಿನಾದದ ಪ್ರತಿಧ್ವನಿಯಲಿ
ಕಂಡುಕೊಂಡೆಯೇ ನಿಮ್ಮೂರ ದೇಗುಲದ ಢಂಡಣ
ತುಂಗಭದ್ರೆಯ ಒಡಲ ತಂಪಲಿ ಸಿಕ್ಕಿತೇ
ನಿಮ್ಮೂರ ನದಿನೀರ ಸೇಚನ
ಇಲ್ಲಿ ಸುರಿಯುತ್ತಿರುವ ಧೋಮಳೆಗಿದೆಯೇ
ಕಡಲ ಮೇಲಿನ ಮಳೆಯ ಮರೆಸುವಷ್ಟು ಕಸುವು
ಹಾಗೆ ಯಾರದೋ ಕಥೆ ಕೇಳಿ ಕಣ್ಣೀರಾಗಲು
ನಮ್ಮೊಳಗೂ ಒಂದು ಕಣ್ಣೀರ ಕಥೆಯಿರಬೇಕೆ?
ಹಾಗೆ ಯಾರಿಗೋ ನಿರಪೇಕ್ಷೆಯಿಂದ ಹೆಗಲಾಗಲು
ನಮ್ಮನೂ ಹೆಗಲು ಕೊಟ್ಟು ಯಾರಾದರೂ ಎಬ್ಬಿಸಿರಬೇಕೆ?
ಹಾಗೆ ನುಡಿ ಹೊರಡದವರ ದನಿ ಅರಿಯುವಂತಾಗಲು
ನಮ್ಮೊಳಗೂ ಘನಿಗಟ್ಟಿದ ಮೌನವಿರಬೇಕೆ?
ಹೇ ವಿಜಯನಗರದ ಬಂಧುವೇ,
ಅಪರೂಪದ ಸುಂದರನೇ,
ಕೊನೆಗಾದರೂ ಸಿಕ್ಕಿತೇ ನಿನಗೆ
ನೀನು ಹುಡುಕುತ್ತಿದ್ದ ಮೀನು?
ನಿನ್ನಂತಃಕರಣಕ್ಕೊಪ್ಪುವ ಮೀನು?
[ವಸುಧೇಂದ್ರರ 'ತೇಜೋ ತುಂಗಭದ್ರಾ' ಓದಿ]