ಈ ದಿನ ಹೇಳಿಯೇಬಿಡುವೆನೆಂದು ಅವನೂ
ಈ ದಿನ ಹೇಳಿಯೇಬಿಡುವೆನೆಂದು ಅವಳೂ
ಎಷ್ಟೊಂದು ದೂರ ನಡೆದರು
ಅಣಬೆಗಳ ಹುಡುಕುತ್ತ
‘ಅಕ್ಷಯ ಕಾವ್ಯ’ ಎಂಬ ಈ ಹೊತ್ತಗೆಯನ್ನು ನಾನು ತಂದಿಟ್ಟುಕೊಂಡು ಎರಡು ವರ್ಷದ ಮೇಲಾಯಿತು. ಈ ದಿನ ಓದಿ ಮುಗಿಸಿಯೇಬಿಡುತ್ತೇನೆಂದು ಎಷ್ಟು ಸಲ ಅದನ್ನು ಕೈಗೆತ್ತಿಕೊಂಡಿಲ್ಲ... ಆದರೆ ಮುಗಿಸಲು ಸಾಧ್ಯವಾಗಿಯೇ ಇಲ್ಲ. ಮುಗಿಸುವುದಿರಲಿ, ಕೆಲವೊಂದು ಸಲ ಎರಡ್ಮೂರು ಪುಟದ ಮುಂದೆ ಹೋಗಲಿಕ್ಕೂ ಸಾಧ್ಯವಾಗಿಲ್ಲ. ಹಾಗಾದರೆ ಇದು ಅಷ್ಟೊಂದು ಸಂಕೀರ್ಣವಾದ ಗ್ರಂಥವೇ? ಹಾಗೂ ಅನಿಸಿಲ್ಲ. ಸರಳ ಶಬ್ದಗಳು, ಸರಳ ವಾಕ್ಯಗಳು, ಸರಳ ಪ್ರತಿಮೆಗಳು, ಎಲ್ಲೂ ಗಂಟಲಿಗೆ ಸಿಕ್ಕದ ಮೃದು ಆಹಾರವೇ. ಆದರೂ, ಈ ಎರಡು ವರ್ಷಗಳಲ್ಲಿ ಕನಿಷ್ಟ ನೂರು ಸಲ ಈ ಪುಸ್ತಕ ನನ್ನ ಕೈಗಳನ್ನಲಂಕರಿಸಿದ್ದರೂ, ‘ಓದಿ ಮುಗಿದ ಪುಸ್ತಕ’ಗಳ ಗುಂಪಿಗೆ ಇದನ್ನು ಸೇರಿಸಲಾಗುತ್ತಿಲ್ಲ ಯಾಕೆ?
ಬಹುಶಃ ಈ ಪುಸ್ತಕದ ಹೆಗ್ಗಳಿಕೆಯೇ ಅದು. ಗದ್ಯಸಾಹಿತ್ಯವನ್ನೇ ಹೆಚ್ಚು ನೆಚ್ಚಿಕೊಂಡಿದ್ದ ನಾನು ಈಗ ಏಳೆಂಟು ವರ್ಷಗಳಿಂದ ಕಾವ್ಯದ ಹುಚ್ಚಿಗೆ ಬಿದ್ದು, ‘ಹೊಸ ತರಹದ್ದು’ ಅಂತ ಕಂಡ ಕಾವ್ಯವನ್ನೆಲ್ಲ ಆಸೆ ಪಟ್ಟು ಕೊಂಡು ಓದಿ, ಕೆಲವಷ್ಟು ಸಲ ಅದರದೇ ಪ್ರಭಾವಕ್ಕೊಳಗಾಗಿ ಬರೆಯುತ್ತಿರುವವನು. ನವ್ಯದ ರುಚಿಗೆ ಮಾರುಹೋದವನು. ಆದಿಪ್ರಾಸ-ಅಂತ್ಯಪ್ರಾಸ-ಗಣ-ಪ್ರಸ್ತಾರಗಳ ಹಂಗು ಮುರಿದಮೇಲೂ ಕವಿ ಹೇಗೆ ಲಯ ಕಂಡುಕೊಂಡ ತನ್ನ ಕಾವ್ಯದಲ್ಲಿ? ಹೇಗೆ ತನ್ನ ರಚನೆ ಅಕಾವ್ಯವಾಗುವುದನ್ನು ತಪ್ಪಿಸಿದ? ಹೇಗೆ ವಸ್ತುವೊಂದು ಕವಿತೆಯಾಗಿ ರೂಪುಗೊಳ್ಳುತ್ತೆ? -ಎಂಬುದು ನನಗೆ ಇನ್ನೂ ಆಶ್ಚರ್ಯದ ವಿಷಯ. ಹೀಗಿರುವಾಗ, ಖಚಿತ ಸಂಗತಿಯಿಲ್ಲದ, ನಿಶ್ಚಿತ ವಾಹಿನಿಯಿಲ್ಲದ, ಲಿಖಿತ ಕ್ರಮವಿಲ್ಲದ, ಬದ್ಧ ರೂಪವಿಲ್ಲದ ಅಖಂಡ ಬರಹವೊಂದು ಹೇಗೆ ಕಾವ್ಯವಾಗಿ ಮೈತಳೆಯುತ್ತದೆ?
‘ಅಕ್ಷಯ ಕಾವ್ಯ’ವನ್ನು ಓದುವಾಗೆಲ್ಲ ನನ್ನನ್ನು ಕಾಡುವ ಪ್ರಶ್ನೆಗಳು ಇವು. ಇಲ್ಲಿ ಬರುವ ತೊಂಬತ್ತು ಪ್ರತಿಶತ ಕಥೆಗಳು-ಉಲ್ಲೇಖಗಳ ಪರಿಚಯ ನನಗಿಲ್ಲ. ಗೂಗಲ್ ಮಾಡಿದರೆ ತಿಳಿಯುತ್ತಿತ್ತೇನೋ, ಆದರೆ ಯಾವತ್ತೂ ಆ ಗೋಜಿಗೆ ಹೋಗಿಲ್ಲ. ತಿಳಿದುಕೊಳ್ಳಬೇಕು ಅಂತ ಅನಿಸಿಯೇ ಇಲ್ಲ. ಇಷ್ಟಕ್ಕೂ ಈ ಪುಸ್ತಕವನ್ನು ‘ಅರ್ಥ ಮಾಡಿಕೊಳ್ಳಬೇಕು’ ಅಂತಲೇ ನನಗೆ ಇದುವರೆಗೆ ಅನಿಸಿಲ್ಲ. ಆದಾಗ್ಯೂ ಇದು ನಿರರ್ಥಕ ಓದು ಎಂಬ ಭಾವನೆ ಬಂದಿಲ್ಲ!
ಕಸ ಪಿಪಾಯಿಯೊಳಗೆರಡು ನಾಯಿಗಳು
ಅಂಡ ಅಂಡಾಶಯ ಕಂಫೀಟುಗಳ ಜಾಲಾಡಿಸುತ್ತಿವೆ
ಸಕಲರೂ ಕಾಯುತ್ತ ಭಿಕ್ಷುಕರೂ ಹಾಗೇ
ಸೇಂಟ್ ಥಾಮಸ್ ಅಕ್ವಿನಾಸ್ ಹೇಳಿದ ಹಾಗೆ
ಕಾರಣ ವಿನಾ ಕಾರ್ಯವಿಲ್ಲ
ಮನುಷ್ಯರ ದೃಷ್ಟಿಗಳ ಕತ್ತರಿಸುವ ಹಾಗೆ
ಯುಗಾಂತರದ ಗಾಡಿ
-ಈ ಸಾಲುಗಳಲ್ಲಿ ಬರುವ ಸೇಂಟ್ ಥಾಮಸ್ ಅಕ್ವಿನಾಸ್ ಯಾರು? ನನಗೆ ಅದು ಮುಖ್ಯ ಅಂತ ಅನಿಸಿಯೇ ಇಲ್ಲ. ಹುಡುಕಿದರೆ ಅವನೊಬ್ಬ ಇಟಲಿ ದೇಶದ ಫಿಲಾಸಫರ್ ಅಂತ ಗೊತ್ತಾಗುತ್ತಿತ್ತು. ಅಂವ ಏನು ಬರೆದ, ಏನೇನು ಮಾಡಿದ, ಯಾಕೆ ಹಾಗೆ ಹೇಳಿದ –ಎಲ್ಲಾ ವಿಷಯ ಸಂಗ್ರಹಿಸಬಹುದಿತ್ತು. ಆದರೆ ಕವಿತೆಯ ಓದನ್ನು ಮುಂದರಿಸಿಕೊಂಡು ಹೋಗಲು ನನಗೆ ಯಾವ ತೊಡಕೂ ಆಗಲಿಲ್ಲ. ಹಾಗೆಯೇ ಈ ಪುಸ್ತಕದಲ್ಲಿ ಬರುವ ಅರಬೀ ಸಮುದ್ರವೋ, ಅರಾರತ್ ಪರ್ವತವೋ, ಮೆಡಿಟರೇನಿಯನ್ ಬಿಸಿಲೋ, ರೋಡಿನ್ನ ಶಿಲ್ಪವೋ, ಬಾಮಿಯಾನಿನ ಬುದ್ಧನೋ –ನಾನು ಕಂಡವಲ್ಲ. ಇದರೊಳಗೆ ಪ್ರಸ್ತಾಪ ಮಾಡಲಾಗಿರುವ ಯಾವ್ಯಾವುದೋ ದೇಶಗಳ ಯಾವ್ಯಾವುದೋ ಭಾಷೆಗಳ ಕವಿಗಳ ಸಾಲುಗಳು ನಾನೆಂದೂ ಓದಿದವಲ್ಲ. ಮೆಂಡೆಲ್ಸ್ಟಾಮ್ ಬರೆದ ಒಂದು ಕವಿತೆಯನ್ನೂ ನಾನು ಓದಿದಂತಿಲ್ಲ. ಹಾಗಿದ್ದೂ ನನ್ನ ಓದು ಆ ಸಾಲುಗಳಲ್ಲಿ ನಿಲ್ಲಲಿಲ್ಲ. ಯಾಕೆಂದರೆ, ಈ ಗುಚ್ಛಗಳಲ್ಲಿ ನನ್ನ ನಿಲುಕಿಗೆ ಸಿಗದ ಯಾವುದೋ ದೇಶಭಾಷೆಗಳ ದಾರ್ಶನಿಕರ ಜತೆ ನನ್ನದೇ ದೇಶದ ನನ್ನದೇ ಜನವೂ ಏಕಕಾಲದಲ್ಲಿ ಇದ್ದಾರೆ. ನನಗೆ ಅಷ್ಟೇನು ಪರಿಚಿತವಲ್ಲದ ಸೂಫಿ ಭಜನೆಯ ಕೆಳಸಾಲುಗಳಲ್ಲೇ ಡಿಸೆಂಬರ್ ಬಂದರೆ ನನ್ನ ಕಿವಿಗೆ ಬೀಳುವ ಅಯ್ಯಪ್ಪ ಭಕ್ತರ ಭಜನೆ ಸದ್ದು ಇದೆ. ಅಮೆರಿಕೆಯ ಅಪರಿಚಿತ ಓಣಿಯ ಜತೆಜತೆಗೇ ಪರ್ಕಳದ ಬೀದಿಯೂ ಇದೆ. ಜಪಾನೀ ನಾಟಕದ ದೃಶ್ಯದ ಬೆನ್ನ ಹಿಂದೆಯೇ ವಿವಿಧಭಾರತಿಯ ಗಾನವಿದೆ.
ಬಹುಶಃ ಇದೇ ಕಾರಣಕ್ಕೆ ಈ ಕೃತಿ ನನ್ನನ್ನು ಹಿಡಿದಿಟ್ಟುಕೊಂಡಿರುವುದು. ಪೂರ್ತಿ ಅರ್ಥವಾಗುವುದಿಲ್ಲ, ಆದರೆ ಇದರಲ್ಲೇನೋ ಅರ್ಥವಿದೆ ಅಂತ ಅನಿಸುತ್ತದೆ. ತಿಳಿದವರು ಹೇಳುವಂತೆ, ಕಾವ್ಯದ ಸಾರ್ಥಕತೆಯೂ ಅಷ್ಟೆಯೇ ಅಲ್ಲವೇ? ಯಾವುದೇ ಕವಿತೆ ಕಾಡಬೇಕಾದರೆ ಅದು ಪೂರ್ತಿ ಅರ್ಥವಾಗಬಾರದು: ಇದರಲ್ಲಿ ‘ಇನ್ನೇನೋ ಇದೆ, ಇನ್ನೇನೋ ಇದೆ’ ಅನ್ನಿಸುತ್ತಿರಬೇಕು!
ಒಂದು ದಿನ ನಾನೂ ಕೆಲವು ಮಹಾವಾಕ್ಯಗಳ ಬರೆಯುವೆ
ಬರೆದು ಸರ್ಕಸ್ ಡೇರೆಗಳ ಸುತ್ತ ಆಡಲು ಬಿಡುವೆ
ಅವು ಕಂಡವರ ಮನಸ್ಸುಗಳ ಸೇರಲಿ ಎನ್ನುವೆ
ಕೆಲವು ಅಲ್ಲೇ ಉಳಿದಾವು
ಕೆಲವು ವಾಪಸು ಬರುತ್ತವೆ
ಬಂದಾಗ ಅವಕ್ಕೆ ಗಾಯಗಳಾಗಿರುತ್ತವೆ
ಮಹಾವಾಕ್ಯಗಳು ಈ ಕಾವ್ಯದಲ್ಲಿ ಇಲ್ಲವೆಂದೇ ಹೇಳಬೇಕು. ಇಲ್ಲಿ ಉದುರಿದ ಹಕ್ಕಿಯ ಪುಕ್ಕವೂ ಹಾರುತ್ತದೆ. ಹಗ್ಗದ ಮೇಲೆ ಒಣಹಾಕಿದ ಅಂಗಿ ಗಾಳಿಗೆ ಅಲ್ಲಾಡುತ್ತದೆ. ಆಕಾಶ ನೋಡುತ್ತಾ ನಿಂತವಳ ಕಣ್ಣಲ್ಲಿ ನಕ್ಷತ್ರಗಳು ಮೆಲ್ಲಗೆ ತೇಲುತ್ತವೆ. ಕತ್ತಲೆ ಗಾಢವಾದಂತೆ ನೆರಳುಗಳು ಕರಗುತ್ತವೆ. ಓದುತ್ತಾ ಕುಳಿತ ನಾನು ಅದರಲ್ಲೇ ಮುಳುಗುತ್ತೇನೆ. ರಾಜಧಾನಿ ಎಕ್ಸ್ಪ್ರೆಸ್ ನನ್ನನ್ನು ಮತ್ತೆಲ್ಲಿಗೋ ಕರೆದೊಯ್ಯುತ್ತದೆ. ಹುಸೇನ್ಸಾಗರದ ಬುದ್ಧನನ್ನು ತೋರಿಸುತ್ತದೆ. ಗಜಿಬಿಜಿಯ ಸಂತೆಯಲ್ಲಿ ಮಂಡಕ್ಕಿ ಕೊಳ್ಳುತ್ತೇನೆ. ಆಸ್ಪತ್ರೆ ಪಕ್ಕದ ಕ್ಯಾಂಟೀನಿನಲ್ಲಿ ಚಹಾ ಕುಡಿಯುತ್ತೇನೆ. ಹೂಗಳು ತುಂಬಿದ ಶೀತಲ ಕೊಳದಲ್ಲಿ ಸ್ನಾನ ಮಾಡುತ್ತೇನೆ. ದಟ್ಟಾರಣ್ಯದ ನಡುವಿನ ಕಣಿವೆಯ ಪಕ್ಕದಲ್ಲಿ ನಿಂತು ಬಟ್ಟೆ ಬದಲಿಸಿಕೊಳ್ಳುತ್ತೇನೆ. ರೋಡ್ರೋಲರ್ ಒಂದು ಮೈಮೇಲೆ ಹರಿದಂತಾಗುತ್ತದೆ. ಎಚ್ಚರಾದರೆ ನಮ್ಮೂರ ದೇವಸ್ಥಾನದ ಕಟ್ಟೆಯ ಮೇಲೆ ಕುಳಿತಿದ್ದೇನೆ.
ಈ ಕೃತಿಯ ಓದು ನನಗೆ ವಿಶಿಷ್ಟ ಅನುಭವ ನೀಡಿದೆ. ನಾನಿದನ್ನು ನಿದ್ರೆ ಬಾರದ ನಡುರಾತ್ರಿಗಳಲ್ಲಿ ಎದ್ದು ಕೂತು ಓದಿದ್ದೇನೆ, ಕುಟುಂಬದ ಜತೆ ಪ್ರವಾಸ ಹೋದಾಗ ಬ್ಯಾಗಿನಲ್ಲಿಟ್ಟುಕೊಂಡು ಹೋಗಿದ್ದೇನೆ, ಊರಿನ ಮಳೆ ನೋಡುತ್ತಾ ಇದನ್ನು ಧೇನಿಸಿದ್ದೇನೆ, ಲಾಕ್ಡೌನ್ ಕಾಲದ ತಳಮಳದ ದಿನಗಳಲ್ಲಿ ಕೈಗೆತ್ತಿಕೊಂಡಿದ್ದೇನೆ. ಯಾವುದೋ ಪುಟ ತೆರೆದು ಏನೂ ನಿರೀಕ್ಷೆಯಿಲ್ಲದೆ ಸುಮ್ಮನೆ ಕಣ್ಣಾಡಿಸುತ್ತಾ ಕೂತಿದ್ದೇನೆ. ಇಲ್ಲಿನ ಕೆಲ ಸಾಲುಗಳು ವಿನಾಕಾರಣ ಸುಖ ಕೊಟ್ಟಿವೆ:
ಕಾದೆ ನಾನು ಇಡೀ ವರುಷ ಒಂದು ಕಿರುನಗೆಗೆ
ಬ್ರಹ್ಮಕಮಲವಾದರೂ ಅರಳಬೇಕಿತ್ತು ಇಷ್ಟರೊಳಗೆ
ಯಾವೂರ ಕಮಲಿ ನೀನು
ಸಾವಿರ ವರುಷ ಕಾಯುವುದು ಹೇಗೆ ನಾನು
ಬಹುಶಃ ಈ ಪುಸ್ತಕವನ್ನು ನನಗೆ ಓದಿ ಮುಗಿಸಲು ಸಾಧ್ಯವಿಲ್ಲ. ಅಥವಾ ಯಾವತ್ತಾದರೂ ಇದನ್ನು ಓದಿ ಮುಗಿಸಿದ್ದೇನೆಂದು ಹೇಳುವ ಧೈರ್ಯ ಮಾಡಲಾರೆ. ಯಾರಾದರೂ ಇದರ ಬಗ್ಗೆ ಹೇಳು ಎಂದರೆ ಸರಿಯಾಗಿ ಹೇಳಲೂ ಸಾಧ್ಯವಾಗದು. ಮತ್ತು ಯಾರಾದರೂ ಇದನ್ನು ಮೊದಲ ಪುಟದಿಂದ ಕೊನೆಯ ಪುಟದವರೆಗೆ ಅವಡುಗಚ್ಚಿ ಹಿಡಿದು ಓದಿ ಮುಗಿಸಬಹುದು ಅಂತಲೂ ನನಗನಿಸುತ್ತಿಲ್ಲ. ಇದೊಂದು ಮುಗಿಯದ ಮುಂಜಾವು. ಪೂರೈಸಲಾಗದ ಅಪರಾಹ್ನ. ಸಂಪನ್ನವಾಗದ ಸಂಧ್ಯೆ. ಅಂತ್ಯವಿರದ ಇರುಳು.
ಪ್ರಯೋಗಶೀಲತೆಯ ಉತ್ತುಂಗದಂತಿರುವ ಈ ಕಾವ್ಯಧಾರೆ ನನ್ನನ್ನು ಸದಾ ಎಚ್ಚರದಲ್ಲಿಟ್ಟಿರುತ್ತದೆ ಅಂತ ನಾನು ನಂಬಿದ್ದೇನೆ. ಇಲ್ಲಿನ ಸಾಲುಗಳಿಂದ ಪ್ರೇರಿತನಾಗಿ ನಾನೂ ಏನೇನೋ ಗೀಚಿದ್ದೇನೆ. ಮತ್ತೇನನೋ ಓದುವಾಗ ಇಲ್ಲಿಯ ಸಾಲುಗಳನ್ನು ನೆನಪಿಸಿಕೊಂಡಿದ್ದೇನೆ. ಓದುವ ನನಗೇ ಇದು ಮುಗಿಯದ ತಪನೆಯಾಗಿರುವಾಗ, ಬರೆದ ಕವಿಗೆ ಇದು ಇನ್ನೆಷ್ಟು ಕಾಡಿರಬಹುದು ಅಂತ ಕಲ್ಪಿಸಿಕೊಂಡು ಅಚ್ಚರಿಯಲ್ಲಿ ಕಂಪಿಸಿದ್ದೇನೆ. ಇಂಥದ್ದೊಂದು ಪ್ರಯೋಗದ ಮೋಹಕ್ಕೆ ಸಿಲುಕಿದ ಕವಿಯ ಸ್ಥಿತಿಯನ್ನು ಊಹಿಸಿಕೊಂಡಿದ್ದೇನೆ. ಬರೆದೇ ತೀರಿಸಿಕೊಳ್ಳಬೇಕಾದ ಈ ದಾಹ ಬರೆದು ಮುಗಿಸಿದಮೇಲಾದರೂ ಅವರಿಗೆ ತೀರಿತಾ? ಗೊತ್ತಿಲ್ಲ. ಆದರೆ ಒಂದಂತೂ ಸತ್ಯ: ಇದೊಂದು ಬಗೆಹರಿಯದ ಬೇಗೆಯಂತೆ ನನ್ನೊಂದಿಗೇ ಇರಲಿದೆ ಬಹಳ ಕಾಲ ತಣ್ಣಗೆ. ಇಂಥದ್ದೊಂದು ಹೊರೆಯನ್ನು ನನಗೆ ದಾಟಿಸಿದ ಕವಿಗೆ ನಮಸ್ಕಾರ. ಆ ಕಾವ್ಯಶಕ್ತಿಗೆ ಶರಣು.
ಈ ದಿನ ಹೇಳಿಯೇಬಿಡುವೆನೆಂದು ಅವಳೂ
ಎಷ್ಟೊಂದು ದೂರ ನಡೆದರು
ಅಣಬೆಗಳ ಹುಡುಕುತ್ತ
‘ಅಕ್ಷಯ ಕಾವ್ಯ’ ಎಂಬ ಈ ಹೊತ್ತಗೆಯನ್ನು ನಾನು ತಂದಿಟ್ಟುಕೊಂಡು ಎರಡು ವರ್ಷದ ಮೇಲಾಯಿತು. ಈ ದಿನ ಓದಿ ಮುಗಿಸಿಯೇಬಿಡುತ್ತೇನೆಂದು ಎಷ್ಟು ಸಲ ಅದನ್ನು ಕೈಗೆತ್ತಿಕೊಂಡಿಲ್ಲ... ಆದರೆ ಮುಗಿಸಲು ಸಾಧ್ಯವಾಗಿಯೇ ಇಲ್ಲ. ಮುಗಿಸುವುದಿರಲಿ, ಕೆಲವೊಂದು ಸಲ ಎರಡ್ಮೂರು ಪುಟದ ಮುಂದೆ ಹೋಗಲಿಕ್ಕೂ ಸಾಧ್ಯವಾಗಿಲ್ಲ. ಹಾಗಾದರೆ ಇದು ಅಷ್ಟೊಂದು ಸಂಕೀರ್ಣವಾದ ಗ್ರಂಥವೇ? ಹಾಗೂ ಅನಿಸಿಲ್ಲ. ಸರಳ ಶಬ್ದಗಳು, ಸರಳ ವಾಕ್ಯಗಳು, ಸರಳ ಪ್ರತಿಮೆಗಳು, ಎಲ್ಲೂ ಗಂಟಲಿಗೆ ಸಿಕ್ಕದ ಮೃದು ಆಹಾರವೇ. ಆದರೂ, ಈ ಎರಡು ವರ್ಷಗಳಲ್ಲಿ ಕನಿಷ್ಟ ನೂರು ಸಲ ಈ ಪುಸ್ತಕ ನನ್ನ ಕೈಗಳನ್ನಲಂಕರಿಸಿದ್ದರೂ, ‘ಓದಿ ಮುಗಿದ ಪುಸ್ತಕ’ಗಳ ಗುಂಪಿಗೆ ಇದನ್ನು ಸೇರಿಸಲಾಗುತ್ತಿಲ್ಲ ಯಾಕೆ?
ಬಹುಶಃ ಈ ಪುಸ್ತಕದ ಹೆಗ್ಗಳಿಕೆಯೇ ಅದು. ಗದ್ಯಸಾಹಿತ್ಯವನ್ನೇ ಹೆಚ್ಚು ನೆಚ್ಚಿಕೊಂಡಿದ್ದ ನಾನು ಈಗ ಏಳೆಂಟು ವರ್ಷಗಳಿಂದ ಕಾವ್ಯದ ಹುಚ್ಚಿಗೆ ಬಿದ್ದು, ‘ಹೊಸ ತರಹದ್ದು’ ಅಂತ ಕಂಡ ಕಾವ್ಯವನ್ನೆಲ್ಲ ಆಸೆ ಪಟ್ಟು ಕೊಂಡು ಓದಿ, ಕೆಲವಷ್ಟು ಸಲ ಅದರದೇ ಪ್ರಭಾವಕ್ಕೊಳಗಾಗಿ ಬರೆಯುತ್ತಿರುವವನು. ನವ್ಯದ ರುಚಿಗೆ ಮಾರುಹೋದವನು. ಆದಿಪ್ರಾಸ-ಅಂತ್ಯಪ್ರಾಸ-ಗಣ-ಪ್ರಸ್ತಾರಗಳ ಹಂಗು ಮುರಿದಮೇಲೂ ಕವಿ ಹೇಗೆ ಲಯ ಕಂಡುಕೊಂಡ ತನ್ನ ಕಾವ್ಯದಲ್ಲಿ? ಹೇಗೆ ತನ್ನ ರಚನೆ ಅಕಾವ್ಯವಾಗುವುದನ್ನು ತಪ್ಪಿಸಿದ? ಹೇಗೆ ವಸ್ತುವೊಂದು ಕವಿತೆಯಾಗಿ ರೂಪುಗೊಳ್ಳುತ್ತೆ? -ಎಂಬುದು ನನಗೆ ಇನ್ನೂ ಆಶ್ಚರ್ಯದ ವಿಷಯ. ಹೀಗಿರುವಾಗ, ಖಚಿತ ಸಂಗತಿಯಿಲ್ಲದ, ನಿಶ್ಚಿತ ವಾಹಿನಿಯಿಲ್ಲದ, ಲಿಖಿತ ಕ್ರಮವಿಲ್ಲದ, ಬದ್ಧ ರೂಪವಿಲ್ಲದ ಅಖಂಡ ಬರಹವೊಂದು ಹೇಗೆ ಕಾವ್ಯವಾಗಿ ಮೈತಳೆಯುತ್ತದೆ?
‘ಅಕ್ಷಯ ಕಾವ್ಯ’ವನ್ನು ಓದುವಾಗೆಲ್ಲ ನನ್ನನ್ನು ಕಾಡುವ ಪ್ರಶ್ನೆಗಳು ಇವು. ಇಲ್ಲಿ ಬರುವ ತೊಂಬತ್ತು ಪ್ರತಿಶತ ಕಥೆಗಳು-ಉಲ್ಲೇಖಗಳ ಪರಿಚಯ ನನಗಿಲ್ಲ. ಗೂಗಲ್ ಮಾಡಿದರೆ ತಿಳಿಯುತ್ತಿತ್ತೇನೋ, ಆದರೆ ಯಾವತ್ತೂ ಆ ಗೋಜಿಗೆ ಹೋಗಿಲ್ಲ. ತಿಳಿದುಕೊಳ್ಳಬೇಕು ಅಂತ ಅನಿಸಿಯೇ ಇಲ್ಲ. ಇಷ್ಟಕ್ಕೂ ಈ ಪುಸ್ತಕವನ್ನು ‘ಅರ್ಥ ಮಾಡಿಕೊಳ್ಳಬೇಕು’ ಅಂತಲೇ ನನಗೆ ಇದುವರೆಗೆ ಅನಿಸಿಲ್ಲ. ಆದಾಗ್ಯೂ ಇದು ನಿರರ್ಥಕ ಓದು ಎಂಬ ಭಾವನೆ ಬಂದಿಲ್ಲ!
ಕಸ ಪಿಪಾಯಿಯೊಳಗೆರಡು ನಾಯಿಗಳು
ಅಂಡ ಅಂಡಾಶಯ ಕಂಫೀಟುಗಳ ಜಾಲಾಡಿಸುತ್ತಿವೆ
ಸಕಲರೂ ಕಾಯುತ್ತ ಭಿಕ್ಷುಕರೂ ಹಾಗೇ
ಸೇಂಟ್ ಥಾಮಸ್ ಅಕ್ವಿನಾಸ್ ಹೇಳಿದ ಹಾಗೆ
ಕಾರಣ ವಿನಾ ಕಾರ್ಯವಿಲ್ಲ
ಮನುಷ್ಯರ ದೃಷ್ಟಿಗಳ ಕತ್ತರಿಸುವ ಹಾಗೆ
ಯುಗಾಂತರದ ಗಾಡಿ
-ಈ ಸಾಲುಗಳಲ್ಲಿ ಬರುವ ಸೇಂಟ್ ಥಾಮಸ್ ಅಕ್ವಿನಾಸ್ ಯಾರು? ನನಗೆ ಅದು ಮುಖ್ಯ ಅಂತ ಅನಿಸಿಯೇ ಇಲ್ಲ. ಹುಡುಕಿದರೆ ಅವನೊಬ್ಬ ಇಟಲಿ ದೇಶದ ಫಿಲಾಸಫರ್ ಅಂತ ಗೊತ್ತಾಗುತ್ತಿತ್ತು. ಅಂವ ಏನು ಬರೆದ, ಏನೇನು ಮಾಡಿದ, ಯಾಕೆ ಹಾಗೆ ಹೇಳಿದ –ಎಲ್ಲಾ ವಿಷಯ ಸಂಗ್ರಹಿಸಬಹುದಿತ್ತು. ಆದರೆ ಕವಿತೆಯ ಓದನ್ನು ಮುಂದರಿಸಿಕೊಂಡು ಹೋಗಲು ನನಗೆ ಯಾವ ತೊಡಕೂ ಆಗಲಿಲ್ಲ. ಹಾಗೆಯೇ ಈ ಪುಸ್ತಕದಲ್ಲಿ ಬರುವ ಅರಬೀ ಸಮುದ್ರವೋ, ಅರಾರತ್ ಪರ್ವತವೋ, ಮೆಡಿಟರೇನಿಯನ್ ಬಿಸಿಲೋ, ರೋಡಿನ್ನ ಶಿಲ್ಪವೋ, ಬಾಮಿಯಾನಿನ ಬುದ್ಧನೋ –ನಾನು ಕಂಡವಲ್ಲ. ಇದರೊಳಗೆ ಪ್ರಸ್ತಾಪ ಮಾಡಲಾಗಿರುವ ಯಾವ್ಯಾವುದೋ ದೇಶಗಳ ಯಾವ್ಯಾವುದೋ ಭಾಷೆಗಳ ಕವಿಗಳ ಸಾಲುಗಳು ನಾನೆಂದೂ ಓದಿದವಲ್ಲ. ಮೆಂಡೆಲ್ಸ್ಟಾಮ್ ಬರೆದ ಒಂದು ಕವಿತೆಯನ್ನೂ ನಾನು ಓದಿದಂತಿಲ್ಲ. ಹಾಗಿದ್ದೂ ನನ್ನ ಓದು ಆ ಸಾಲುಗಳಲ್ಲಿ ನಿಲ್ಲಲಿಲ್ಲ. ಯಾಕೆಂದರೆ, ಈ ಗುಚ್ಛಗಳಲ್ಲಿ ನನ್ನ ನಿಲುಕಿಗೆ ಸಿಗದ ಯಾವುದೋ ದೇಶಭಾಷೆಗಳ ದಾರ್ಶನಿಕರ ಜತೆ ನನ್ನದೇ ದೇಶದ ನನ್ನದೇ ಜನವೂ ಏಕಕಾಲದಲ್ಲಿ ಇದ್ದಾರೆ. ನನಗೆ ಅಷ್ಟೇನು ಪರಿಚಿತವಲ್ಲದ ಸೂಫಿ ಭಜನೆಯ ಕೆಳಸಾಲುಗಳಲ್ಲೇ ಡಿಸೆಂಬರ್ ಬಂದರೆ ನನ್ನ ಕಿವಿಗೆ ಬೀಳುವ ಅಯ್ಯಪ್ಪ ಭಕ್ತರ ಭಜನೆ ಸದ್ದು ಇದೆ. ಅಮೆರಿಕೆಯ ಅಪರಿಚಿತ ಓಣಿಯ ಜತೆಜತೆಗೇ ಪರ್ಕಳದ ಬೀದಿಯೂ ಇದೆ. ಜಪಾನೀ ನಾಟಕದ ದೃಶ್ಯದ ಬೆನ್ನ ಹಿಂದೆಯೇ ವಿವಿಧಭಾರತಿಯ ಗಾನವಿದೆ.
ಬಹುಶಃ ಇದೇ ಕಾರಣಕ್ಕೆ ಈ ಕೃತಿ ನನ್ನನ್ನು ಹಿಡಿದಿಟ್ಟುಕೊಂಡಿರುವುದು. ಪೂರ್ತಿ ಅರ್ಥವಾಗುವುದಿಲ್ಲ, ಆದರೆ ಇದರಲ್ಲೇನೋ ಅರ್ಥವಿದೆ ಅಂತ ಅನಿಸುತ್ತದೆ. ತಿಳಿದವರು ಹೇಳುವಂತೆ, ಕಾವ್ಯದ ಸಾರ್ಥಕತೆಯೂ ಅಷ್ಟೆಯೇ ಅಲ್ಲವೇ? ಯಾವುದೇ ಕವಿತೆ ಕಾಡಬೇಕಾದರೆ ಅದು ಪೂರ್ತಿ ಅರ್ಥವಾಗಬಾರದು: ಇದರಲ್ಲಿ ‘ಇನ್ನೇನೋ ಇದೆ, ಇನ್ನೇನೋ ಇದೆ’ ಅನ್ನಿಸುತ್ತಿರಬೇಕು!
ಒಂದು ದಿನ ನಾನೂ ಕೆಲವು ಮಹಾವಾಕ್ಯಗಳ ಬರೆಯುವೆ
ಬರೆದು ಸರ್ಕಸ್ ಡೇರೆಗಳ ಸುತ್ತ ಆಡಲು ಬಿಡುವೆ
ಅವು ಕಂಡವರ ಮನಸ್ಸುಗಳ ಸೇರಲಿ ಎನ್ನುವೆ
ಕೆಲವು ಅಲ್ಲೇ ಉಳಿದಾವು
ಕೆಲವು ವಾಪಸು ಬರುತ್ತವೆ
ಬಂದಾಗ ಅವಕ್ಕೆ ಗಾಯಗಳಾಗಿರುತ್ತವೆ
ಮಹಾವಾಕ್ಯಗಳು ಈ ಕಾವ್ಯದಲ್ಲಿ ಇಲ್ಲವೆಂದೇ ಹೇಳಬೇಕು. ಇಲ್ಲಿ ಉದುರಿದ ಹಕ್ಕಿಯ ಪುಕ್ಕವೂ ಹಾರುತ್ತದೆ. ಹಗ್ಗದ ಮೇಲೆ ಒಣಹಾಕಿದ ಅಂಗಿ ಗಾಳಿಗೆ ಅಲ್ಲಾಡುತ್ತದೆ. ಆಕಾಶ ನೋಡುತ್ತಾ ನಿಂತವಳ ಕಣ್ಣಲ್ಲಿ ನಕ್ಷತ್ರಗಳು ಮೆಲ್ಲಗೆ ತೇಲುತ್ತವೆ. ಕತ್ತಲೆ ಗಾಢವಾದಂತೆ ನೆರಳುಗಳು ಕರಗುತ್ತವೆ. ಓದುತ್ತಾ ಕುಳಿತ ನಾನು ಅದರಲ್ಲೇ ಮುಳುಗುತ್ತೇನೆ. ರಾಜಧಾನಿ ಎಕ್ಸ್ಪ್ರೆಸ್ ನನ್ನನ್ನು ಮತ್ತೆಲ್ಲಿಗೋ ಕರೆದೊಯ್ಯುತ್ತದೆ. ಹುಸೇನ್ಸಾಗರದ ಬುದ್ಧನನ್ನು ತೋರಿಸುತ್ತದೆ. ಗಜಿಬಿಜಿಯ ಸಂತೆಯಲ್ಲಿ ಮಂಡಕ್ಕಿ ಕೊಳ್ಳುತ್ತೇನೆ. ಆಸ್ಪತ್ರೆ ಪಕ್ಕದ ಕ್ಯಾಂಟೀನಿನಲ್ಲಿ ಚಹಾ ಕುಡಿಯುತ್ತೇನೆ. ಹೂಗಳು ತುಂಬಿದ ಶೀತಲ ಕೊಳದಲ್ಲಿ ಸ್ನಾನ ಮಾಡುತ್ತೇನೆ. ದಟ್ಟಾರಣ್ಯದ ನಡುವಿನ ಕಣಿವೆಯ ಪಕ್ಕದಲ್ಲಿ ನಿಂತು ಬಟ್ಟೆ ಬದಲಿಸಿಕೊಳ್ಳುತ್ತೇನೆ. ರೋಡ್ರೋಲರ್ ಒಂದು ಮೈಮೇಲೆ ಹರಿದಂತಾಗುತ್ತದೆ. ಎಚ್ಚರಾದರೆ ನಮ್ಮೂರ ದೇವಸ್ಥಾನದ ಕಟ್ಟೆಯ ಮೇಲೆ ಕುಳಿತಿದ್ದೇನೆ.
ಈ ಕೃತಿಯ ಓದು ನನಗೆ ವಿಶಿಷ್ಟ ಅನುಭವ ನೀಡಿದೆ. ನಾನಿದನ್ನು ನಿದ್ರೆ ಬಾರದ ನಡುರಾತ್ರಿಗಳಲ್ಲಿ ಎದ್ದು ಕೂತು ಓದಿದ್ದೇನೆ, ಕುಟುಂಬದ ಜತೆ ಪ್ರವಾಸ ಹೋದಾಗ ಬ್ಯಾಗಿನಲ್ಲಿಟ್ಟುಕೊಂಡು ಹೋಗಿದ್ದೇನೆ, ಊರಿನ ಮಳೆ ನೋಡುತ್ತಾ ಇದನ್ನು ಧೇನಿಸಿದ್ದೇನೆ, ಲಾಕ್ಡೌನ್ ಕಾಲದ ತಳಮಳದ ದಿನಗಳಲ್ಲಿ ಕೈಗೆತ್ತಿಕೊಂಡಿದ್ದೇನೆ. ಯಾವುದೋ ಪುಟ ತೆರೆದು ಏನೂ ನಿರೀಕ್ಷೆಯಿಲ್ಲದೆ ಸುಮ್ಮನೆ ಕಣ್ಣಾಡಿಸುತ್ತಾ ಕೂತಿದ್ದೇನೆ. ಇಲ್ಲಿನ ಕೆಲ ಸಾಲುಗಳು ವಿನಾಕಾರಣ ಸುಖ ಕೊಟ್ಟಿವೆ:
ಕಾದೆ ನಾನು ಇಡೀ ವರುಷ ಒಂದು ಕಿರುನಗೆಗೆ
ಬ್ರಹ್ಮಕಮಲವಾದರೂ ಅರಳಬೇಕಿತ್ತು ಇಷ್ಟರೊಳಗೆ
ಯಾವೂರ ಕಮಲಿ ನೀನು
ಸಾವಿರ ವರುಷ ಕಾಯುವುದು ಹೇಗೆ ನಾನು
ಬಹುಶಃ ಈ ಪುಸ್ತಕವನ್ನು ನನಗೆ ಓದಿ ಮುಗಿಸಲು ಸಾಧ್ಯವಿಲ್ಲ. ಅಥವಾ ಯಾವತ್ತಾದರೂ ಇದನ್ನು ಓದಿ ಮುಗಿಸಿದ್ದೇನೆಂದು ಹೇಳುವ ಧೈರ್ಯ ಮಾಡಲಾರೆ. ಯಾರಾದರೂ ಇದರ ಬಗ್ಗೆ ಹೇಳು ಎಂದರೆ ಸರಿಯಾಗಿ ಹೇಳಲೂ ಸಾಧ್ಯವಾಗದು. ಮತ್ತು ಯಾರಾದರೂ ಇದನ್ನು ಮೊದಲ ಪುಟದಿಂದ ಕೊನೆಯ ಪುಟದವರೆಗೆ ಅವಡುಗಚ್ಚಿ ಹಿಡಿದು ಓದಿ ಮುಗಿಸಬಹುದು ಅಂತಲೂ ನನಗನಿಸುತ್ತಿಲ್ಲ. ಇದೊಂದು ಮುಗಿಯದ ಮುಂಜಾವು. ಪೂರೈಸಲಾಗದ ಅಪರಾಹ್ನ. ಸಂಪನ್ನವಾಗದ ಸಂಧ್ಯೆ. ಅಂತ್ಯವಿರದ ಇರುಳು.
ಪ್ರಯೋಗಶೀಲತೆಯ ಉತ್ತುಂಗದಂತಿರುವ ಈ ಕಾವ್ಯಧಾರೆ ನನ್ನನ್ನು ಸದಾ ಎಚ್ಚರದಲ್ಲಿಟ್ಟಿರುತ್ತದೆ ಅಂತ ನಾನು ನಂಬಿದ್ದೇನೆ. ಇಲ್ಲಿನ ಸಾಲುಗಳಿಂದ ಪ್ರೇರಿತನಾಗಿ ನಾನೂ ಏನೇನೋ ಗೀಚಿದ್ದೇನೆ. ಮತ್ತೇನನೋ ಓದುವಾಗ ಇಲ್ಲಿಯ ಸಾಲುಗಳನ್ನು ನೆನಪಿಸಿಕೊಂಡಿದ್ದೇನೆ. ಓದುವ ನನಗೇ ಇದು ಮುಗಿಯದ ತಪನೆಯಾಗಿರುವಾಗ, ಬರೆದ ಕವಿಗೆ ಇದು ಇನ್ನೆಷ್ಟು ಕಾಡಿರಬಹುದು ಅಂತ ಕಲ್ಪಿಸಿಕೊಂಡು ಅಚ್ಚರಿಯಲ್ಲಿ ಕಂಪಿಸಿದ್ದೇನೆ. ಇಂಥದ್ದೊಂದು ಪ್ರಯೋಗದ ಮೋಹಕ್ಕೆ ಸಿಲುಕಿದ ಕವಿಯ ಸ್ಥಿತಿಯನ್ನು ಊಹಿಸಿಕೊಂಡಿದ್ದೇನೆ. ಬರೆದೇ ತೀರಿಸಿಕೊಳ್ಳಬೇಕಾದ ಈ ದಾಹ ಬರೆದು ಮುಗಿಸಿದಮೇಲಾದರೂ ಅವರಿಗೆ ತೀರಿತಾ? ಗೊತ್ತಿಲ್ಲ. ಆದರೆ ಒಂದಂತೂ ಸತ್ಯ: ಇದೊಂದು ಬಗೆಹರಿಯದ ಬೇಗೆಯಂತೆ ನನ್ನೊಂದಿಗೇ ಇರಲಿದೆ ಬಹಳ ಕಾಲ ತಣ್ಣಗೆ. ಇಂಥದ್ದೊಂದು ಹೊರೆಯನ್ನು ನನಗೆ ದಾಟಿಸಿದ ಕವಿಗೆ ನಮಸ್ಕಾರ. ಆ ಕಾವ್ಯಶಕ್ತಿಗೆ ಶರಣು.
[ಕೆ.ವಿ. ತಿರುಮಲೇಶರಿಗೆ 80 ವರ್ಷ ತುಂಬಿದ ಸಂದರ್ಭ ಬರೆದದ್ದು. 'ಹೊಸ ದಿಗಂತ'ದಲ್ಲಿ ಪ್ರಕಟಿತ.]